ಕೊಪ್ಪಳ:
ಜನರ ಬಾಳಿಗೆ ಬೆಳಕು ನೀಡಿರುವ ಡಾ. ಬಿ.ಆರ್. ಅಂಬೇಡ್ಕರ್ ಕೊಡುಗೆ ಅಪಾರವಾಗಿದ್ದು, ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಾವು ನಡೆಯಬೇಕೆಂದು ಸಚಿವ ಶಿವರಾಜ ತಂಗಡಗಿ ಹೇಳಿದರು.ನಗರದ ಸಾಹಿತ್ಯ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಆಶ್ರಯದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭಾರತ ನೆಮ್ಮದಿಯಿಂದ, ಎಲ್ಲ ಜಾತಿ-ಜನಾಂಗವರು ಜತೆಯಾಗಿದ್ದೇವೆ ಎಂದು ಅದಕ್ಕೆ ಅಂಬೇಡ್ಕರ್ ಕಾರಣವಾಗಿದ್ದು ಸರ್ವರಿಗೂ ಶಕ್ತಿಯಾಗಿದ್ದಾರೆ. ಅವರ ಆಶೀರ್ವಾದದಿಂದ ಇಂದು ನಾನು ಸಚಿವನಾಗಿ ಈ ವೇದಿಕೆ ಮೇಲೆ ನಿಲ್ಲಲು ಸಾಧ್ಯವಾಗಿದೆ. ಸಂವಿಧಾನದಲ್ಲಿ ಸರ್ವರಿಗೂ ಸಮಾನ ಹಕ್ಕು ನೀಡಿದ್ದು ಮಹಿಳೆಯರಿಗೂ ಸಮಾನ ಅವಕಾಶ ಮತ್ತು ಚುನಾವಣೆಗೆ ಸ್ಪರ್ಧಿಸಲು ಮೀಸಲಾತಿ ಕಲ್ಪಿಸಿಕೊಟ್ಟಿದ್ದಾರೆ ಎಂದರು.ಅಂಬೇಡ್ಕರ್ ಸೇರಿದಂತೆ ಮಹಾನ ನಾಯಕರನ್ನು ಒಂದು ಜಾತಿ-ಜನಾಂಗಕ್ಕೆ ಸೀಮಿತ ಮಾಡಬಾರದು. ಅವರು ತಮ್ಮದೇ ಆದ ಕೊಡುಗೆ ನೀಡುವ ಮೂಲಕ ಮನುಕುಲದ ಉದ್ಧಾರಕ್ಕಾಗಿ ಶ್ರಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಂತಹ ಮಹನೀಯರ ಜಯಂತಿ ಆಚರಿಸಲಾಗುತ್ತಿದೆ. ಪ್ರತಿ ಶಾಲಾ-ಕಾಲೇಜಿನಲ್ಲಿ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದ್ದು, ಇದರ ಮೂಲಕ ಸಂವಿಧಾನದ ಜನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ರಾಘವೇಂದ್ರ ಹಿಟ್ನಾಳ ಮಾತನಾಡಿ, ಅಂಬೇಡ್ಕರ್ ಜಯಂತಿ ನಮಗೆ ಪವಿತ್ರ ದಿನವಾಗಿದೆ. ಅಸಮಾನತೆಯಿಂದ ಕೂಡಿದ್ದ ದೇಶದಲ್ಲಿ ಸಮಾನತೆ ತರಲು ಹಾಗೂ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆ ಹೋಗಲಾಡಿಸಲು ಶಿಕ್ಷಣ, ಸಂಘಟನೆ, ಹೋರಾಟಗಳ ಮೂಲಕ ದೇಶದಲ್ಲಿ ಸಮ ಸಮಾಜ ನಿರ್ಮಿಸಲು ಶ್ರಮಿಸಿದ್ದಾರೆ. ಇಂದು ನಾವು ಜನಪ್ರತಿನಿಧಿಗಳಾಗಲು ಸಂವಿಧಾನವೇ ಕಾರಣ ಎಂದರು.ಸಂಸದ ರಾಜಶೇಖರ ಹಿಟ್ನಾಳ ಮಾತನಾಡಿ, ಅಂಬೇಡ್ಕರ್ ವ್ಯಕ್ತಿಯಲ್ಲ, ಅವರೊಂದು ಶಕ್ತಿ. ಹಿಂದುಳಿದವರು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರಿಗೆ ಬದುಕು ಕಟ್ಟಿಕೊಳ್ಳಲು ಅವರು ರಚಿಸಿದ ಸಂವಿಧಾನವು ನಮಗೆ ಒಂದು ಶಕ್ತಿಯಾಗಿದೆ. ಅಂಬೇಡ್ಕರ್ ಎಂದರೇ, ಒಂದು ಚಳವಳಿ, ಸಮಾನತೆ. ಸಮಾನತೆಯ ಬದುಕು ಕಟ್ಟಿಕೊಟ್ಟವರು. ಅವರು ಎಲ್ಲ ವರ್ಗದವರಿಗೂ ರಾಜಕೀಯ, ಸಾಮಾಜಿಕ, ಆರ್ಥಿಕ ಸಮಾನತೆ ನೀಡಿದ್ದಾರೆ ಎಂದರು.
ಕಲಬುರಗಿಯ ಬರಹಗಾರಾದ ಡಾ. ವಿಠ್ಠಲ್ ವಗ್ಗನ್ ಅಂಬೇಡ್ಕರ್ ಕುರಿತು ವಿಶೇಷ ಉಪನ್ಯಾಸ ನೀಡಿದರು. ಜೈನ್ ಮುನಿ ಕಮಲಮುನಿ ಕಮಲೇಶ್ ಮಾತನಾಡಿದರು. ಜಿಲ್ಲಾಧಿಕಾರಿ ನಲಿನ್ ಅತುಲ್ ಸಂವಿಧಾನ ಪೀಠಿಕೆ ಬೋಧಿಸಿದರು.ಸನ್ಮಾನ:
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಪರಿಮಳ ಚನ್ನಪ್ಪ, ಗಂಗಮ್ಮ ಸ್ವಾರೆಪ್ಪ, ಪೂಜಾ ಆಂಜನೇಯ, ಕರಿಯಮ್ಮ ಗಂಗಪ್ಪ ಹಾಗೂ ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ಪುರಸ್ಕೃತ ಮಾಯಮ್ಮ, ದೆಹಲಿಯಲ್ಲಿ ನಡೆದ ಗಣ್ಯರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಯ್ಕೆಯಾಗಿದ್ದ ಕೋಳೂರು ಗ್ರಾಪಂ ಅಧ್ಯಕ್ಷೆ ಶಿವಮ್ಮ ಪೂಜಾರ ಮತ್ತು ಭಾರತಿಯ ಸೇನೆಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ಎಸ್ಪಿ ಡಾ. ರಾಮ್ ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ನಗರಸಭೆ ಸದಸ್ಯರಾದ ಮುತ್ತುರಾಜ ಕುಷ್ಟಗಿ, ಸಿದ್ದು ಮ್ಯಾಗೇರಿ, ಮಹೇಂದ್ರ ಛೋಪ್ರಾ, ಗುರುರಾಜ ಹಲಗೇರಿ, ರಾಜಶೇಖರ ಆಡೂರು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್, ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ಮುಖಂಡರಾದ ಗಾಳೆಪ್ಪ ಪೂಜಾರ, ಗೂಳಪ್ಪ ಹಲಗೇರಿ, ಡಾ. ಜ್ಞಾನಸುಂದರ, ಗವಿಸಿದ್ದಪ್ಪ ಕಂದಾರಿ, ಸಿದ್ದೇಶ ಪೂಜಾರ, ರಾಮಣ್ಣ ಕಂದಾರಿ, ಯಲ್ಲಪ್ಪ ಬಳಗನೂರ, ಗವಿಸಿದ್ದಪ್ಪ ಬೆಲ್ಲದ್, ಕೃಷ್ಣ ಇಟ್ಟಂಗಿ, ಗಾಳೆಪ್ಪ ಕಡೆಮನಿ ಸೇರಿದಂತೆ ಸಮಾಜದ ಮತ್ತಿತರರು ಉಪಸ್ಥಿತರಿದ್ದರು.
ಮೆರವಣಿಗೆ:ಕಾರ್ಯಕ್ರಮದ ನಿಮಿತ್ತ ಬೆಳಗ್ಗೆ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ತಹಸೀಲ್ದಾರ್ ಕಚೇರಿಯಿಂದ ಆರಂಭಗೊಂಡು ಸಾಲಾರಜಂಗ್ ರಸ್ತೆ, ಅಶೋಕ ವೃತ್ತದ ಮೂಲಕ ಸಾಹಿತ್ಯ ಭವನದ ವರೆಗೆ ಅದ್ಧೂರಿಯಾಗಿ ಮೆರವಣಿಗೆ ನಡೆಯಿತು. ಇದರಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸಿ, ಸಾರ್ವಜನಿಕರ ಗಮನ ಸೆಳೆದವು.