ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ವಾಹನದ ವಿಮೆ ಪಾವತಿಸದೆ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದಾಗಿ ಸಾರ್ವಜನಿಕ ರೋಗಿಗಳಿಗೆ ಸಮಸ್ಯೆಯಾಗಿತ್ತು. ಈ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ದೀಪಕ್ ಅವರ ನೇತೃತ್ವದಲ್ಲಿ ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲಾಯಿತು.
ಈ ಸಂದರ್ಭ ಮಾತನಾಡಿದ ಆಡಳಿತ ಅಧಿಕಾರಿ ಮೀನಾಕ್ಷಿ, ತಾನು ಇತ್ತೀಚೆಗಷ್ಟೇ ಅಧಿಕಾರ ವಹಿಸಿಕೊಂಡಿದ್ದು ಸಹೋದ್ಯೋಗಿಗಳ ಕೊರತೆಯಿಂದ ಈ ಬಗ್ಗೆ ಗಮನ ಹರಿಸಲು ಸಾಧ್ಯವಾಗಲಿಲ್ಲ. ಮುಂದಿನ ಎರಡು ದಿನಗಳಲ್ಲಿ ವ್ಯವಸ್ಥೆ ಸರಿಪಡಿಸುವ ಭರವಸೆ ನೀಡಿದರು.ಆಸ್ಪತ್ರೆಯ ವೈದ್ಯ ಡಾ. ಕಿರಣ್ ಮಾತನಾಡಿ, ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಕೊರತೆ ಸೇರಿದಂತೆ ಅನೇಕ ಅಗತ್ಯಗಳ ಬಗ್ಗೆ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿರುವುದಾಗಿ ತಿಳಿಸಿದರು.
ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ನಗರ ಕಾರ್ಯದರ್ಶಿ ರವೀಶ್, ತಾಲೂಕು ಉಪಾಧ್ಯಕ್ಷ ಶಿವು, ಜಿಲ್ಲಾ ಕಾರ್ಮಿಕ ಘಟಕದ ಸಂಚಾಲಕ ಮಂಜುನಾಥ, ಯುವ ಘಟಕದ ಸಂಚಾಲಕ ನಿತನ್ ಮಿಟ್ಟು, ರವಿ ಬಿ.ವಿ.,ಪುರುಷೋತ್ತಮ . ಇಬ್ರಾಹಿಂ ಮತ್ತಿತರರು ಭಾಗವಹಿಸಿದ್ದರು.