ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜನಮೆಚ್ಚುಗೆಗೆ ಪಾತ್ರವಾಗಿದೆ. ಅದರಂತೆ ಮತಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಈಗಾಗಲೇ ಸುಮಾರು ₹100 ಕೋಟಿಗಳ ಅನುದಾನ ನೀಡಿದೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲು ಸಿದ್ಧವಿದೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.ಪಟ್ಟಣದ ಪುರಸಭೆ ಮುಂಬಾಗದಲ್ಲಿ ಜಿಲ್ಲಾಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಪುರಸಭೆ ಕಾರ್ಯಾಲಯ ಮುದ್ದೇಬಿಹಾಳ ಆಶ್ರಯದಲ್ಲಿ ನಡೆದ ಕೇಂದ್ರ ಪುರಸ್ಕೃತ ಅಮೃತ 2.0 ಯೋಜನೆಯಡಿ ಪಟ್ಟಣದ ಜನರಿಗೆ ದಿನದ 24 ಗಂಟೆ ಕುಡಿಯುವ ನೀರು ಸರಬರಾಜು ವಿತರಣಾ ವ್ಯವಸ್ಥೆ ಕಲ್ಪಿಸುವ ಯೋಜನೆಗೆ ಗುರುವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಅಭಿವೃದ್ಧಿ ವಿಷಯದಲ್ಲಿ ಯಾರೂ ಕೂಡ ರಾಜಕಾರಣ ಮಾಡದೇ ಸಹಕರಿಸಬೇಕು ಎಂದು ತಿಳಿಸಿದರು.
ಈ ಹಿಂದೆ ಪಟ್ಟಣದ ಜನರು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವುದನ್ನು ಈ ಹಿಂದೆ ಗಮನಿಸಿದ ದೇಶಮುಖ ಅವರು ಶಾಶ್ವತ ಕುಡಿಯುವ ನೀರು ಒದಗಿಸಲು ಯೋಜನೆ ರೂಪಿಸಿದರು. ಹಣಕಾಸಿನ ಸಮಸ್ಯೆಯಿಂದ ಪೂರ್ಣಗೊಳ್ಳಲು ಸಾಧ್ಯವಾಗಲಿಲ್ಲ. ಆದರೆ ಎಸ್.ಬಂಗಾರಪ್ಪನವರ ಸಿಎಂ ಆಗಿದ್ದ ವೇಳೆ ಕಾಂಗ್ರೆಸ್ ಸರಕಾರದಿಂದ ಹೆಚ್ಚಿನ ಅನುದಾನ ತರುವ ಮೂಲಕ ಇಲ್ಲಿನ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಯಿತು. ಆದರೇ ಕೆಲವರು ಮಾಹಿತಿ ಕೊರತೆಯಿಂದ ಜನರಿಗೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಜನರು ಸತ್ಯವನ್ನು ಅರ್ಥೈಸಿಕೊಳ್ಳಬೇಕು ಎಂದರು.ಇತ್ತೀಚಿಗೆ ಮುದ್ದೇಬಿಹಾಳ ಪಟ್ಟಣ ವೇಗವಾಗಿ ಬೃಹದಾಕಾರವಾಗಿ ಬೆಳೆಯುತ್ತಿದೆ. ಜನಸಂದಣಿ ವ್ಯಾಪಾರ ವಹಿವಾಟು ದಿನದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಪಟ್ಟಣದ ಸುತ್ತಲಿನ ಶಿರೋಳ, ಹಡಲಗೇರಿ, ಬಿದರಕುಂದಿ, ಕುಂಟೋಜಿ ಸೇರಿ ಅನೇಕ ಗ್ರಾಮಗಳನ್ನು ಜನಸಂಖ್ಯಾನುಸಾರ ಮುದ್ದೇಬಿಹಾಳ ಪುರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡುವ ಮೂಲಕ ನಗರಸಭೆ ಮಾಡಲು ಈ ಗಾಗಲೇ ಸರಕಾರದ ಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದೇನೆ. ಇದರಿಂದ ಎಲ್ಲ ವ್ಯಾಪಾರ ವಹಿವಾಟುಗಳು ದ್ವಿಗುಣಗೊಳ್ಳುವುದರ ಜೊತೆಗೆ ಜನಸಾಮಾನ್ಯರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ತಿಳಿಸಿದರು.
ಈಗಾಗಲೇ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಸುಮಾರು ₹42 ಕೋಟಿ ವೆಚ್ಚದಲ್ಲಿ ಪಟ್ಟಣದ ಜನರಿಗೆ ಸಮರ್ಪಕ ಕುಡಿಯುವ ನೀರು ಒದಗಿಸಲು ಮುಖ್ಯಮಂತ್ರಿಗಳು ಮುದ್ದೇಬಿಹಾಳಕ್ಕೆ ಬಂದಾಗ ಈ ಯೋಜನೆ ಉದ್ಘಾಟಿಸಿದ್ದರು. ಆದರೇ ಜನರಿಗೆ ಗೊತ್ತಾಗಿರಿಲ್ಲ ಸದ್ಯ ಸಾಂಕೇತಿಕವಾಗಿ ಇಂದು ಭೂಮಿ ಪೂಜೆ ನೆರವರಿಸಲಾಗಿದೆ. ತಾಳಿಕೋಟಿ ಮುದ್ದೇಬಿಹಾಳ, ನಾಲತವಾಡ ಪಟ್ಟಣಗಳು ಸೇರಿದಂತೆ ಇನ್ನು ಸಾಕಷ್ಟು ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಾಗಬೇಕಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಹಂಹತವಾಗಿ ಎಲ್ಲ ರೀತಿ ಅಭಿವೃದ್ದಿ ಪಡಿಸಲಾಗುವುದು ಎಂದರು.ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಪುರಸಭೆ ಅಧ್ಯಕ್ಷ ಮೈಬೂಬ ಗೊಳಸಂಗಿ, ಉಪಾಧ್ಯಕ್ಷರಾದ ಪ್ರೀತಿ ದೇಗಿನಾಳ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕರ್ನಾಟಕ ಬ್ಯಾಂಕ್ ಅಧ್ಯಕ್ಷ ಸಿ.ಎಲ್. ಬಿರಾದಾರ, ನಿರ್ದೇಶಕ ಸತೀಶ ಓಸ್ವಾಲ್, ಅಬ್ದುಲ ಗಫುರಸಾಬ ಮಕಾಂದಾರ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಸಂನಗೌಡ ಬಿರಾದಾರ(ಜಿಟಿಸಿ) ಗಣೇಶ ಅನ್ನಗೋನಿ, ತಾಲೂಕು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ ಸೇರಿದಂತೆ ಅನೇಕರು ಇದ್ದರು.