ಕಾಂಗ್ರೆಸ್ ಕಚೇರಿಗೆ ಪೋಸ್ಟರ್ ಅಂಟಿಸಲು ಯತ್ನ: ಬಿಜೆಪಿ ಕಾರ್ಯಕರ್ತರ ಬಂಧನ

KannadaprabhaNewsNetwork |  
Published : Jun 26, 2024, 12:35 AM IST
ರಿನ ಕಾಂಗ್ರೆಸ್ ಕಚೇರಿಗೆ ಪೋಸ್ಟರ್‌ ಅಂಟಿಸಲು ತೆರಳುವ ವೇಳೆಯಲ್ಲಿ ಪೊಲೀಸರು ಬಂಧಿಸಿದರು. | Kannada Prabha

ಸಾರಾಂಶ

An attempt to stick a poster in the Congress office

ತುರ್ತು ಪರಿಸ್ಥಿತಿ ಘೋಷಣೆಗೆ 50 ವರ್ಷ, ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ

ಕನ್ನಡಪ್ರಭವಾರ್ತೆ ಚಿಕ್ಕಮಗಳೂರು

ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಗೆ 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಮಂಗಳವಾರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಬೆಳಗ್ಗೆಯೇ ನಗರದ ಕೆಲವೆಡೆ ಕಾಂಗ್ರೆಸ್‌ ಪಕ್ಷದ ವಿರುದ್ಧ ಬಿಜೆಪಿ ಕಾರ್ಯಕರ್ತರು ತುರ್ತು ಪರಿಸ್ಥಿತಿ ಕರಾಳ ದಿನ ಎಂಬುದಾಗಿ ಪೋಸ್ಟರ್ ಅಂಟಿಸಿದ್ದರು. ಇವುಗಳು ಕಣ್ಣಿಗೆ ಬೀಳುತ್ತಿದ್ದಂತೆ ಪೊಲೀಸರು ತೆರವುಗೊಳಿಸಿದರು. ನಂತರ ಮಧ್ಯಾಹ್ನ 1 ಗಂಟೆಗೆ ಇಲ್ಲಿನ ಕೆ.ಎಂ. ರಸ್ತೆಯಲ್ಲಿರುವ ಕಾಂಗ್ರೆಸ್‌ ಕಚೇರಿಗೆ ತೆರಳಿ ಕರಾಳ ದಿನ ಪೋಸ್ಟರ್‌ ಅಂಟಿಸುವ ಮೂಲಕ ಪ್ರತಿಭಟನೆ ನಡೆಸಲು ಯುವ ಮೋರ್ಚಾ ಮುಖಂಡರು ಹಾಗೂ ಕಾರ್ಯಕರ್ತರು ಪ್ಲಾನ್‌ ಮಾಡಿಕೊಂಡಿದ್ದರು.

ಈ ವಿಷಯ ತಿಳಿಯುತ್ತಿದಂತೆ ಪೊಲೀಸರು ಕಾಂಗ್ರೆಸ್ ಕಚೇರಿ ಮೇಲೆ ಕಣ್ಣಿಟ್ಟಿದ್ದರು. ಬಿಜೆಪಿ ಮುಖಂಡರು ಕಾಂಗ್ರೆಸ್ ಕಚೇರಿಗೆ ತೆರಳುವಾಗ ರಸ್ತೆ ಮಧ್ಯದಲ್ಲಿ ಪೊಲೀಸರು ಅವರನ್ನು ಬಂಧಿಸಿದರು. ನಂತರ ಪೊಲೀಸ್‌ ಠಾಣೆಗೆ ಕರೆದುಕೊಂಡು ಹೋಗಿ ಕೆಲ ಸಮಯದ ಬಳಿಕ ಬಿಟ್ಟರು. ಬಳಿಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬಂದೋಬಸ್ತ್‌ಗಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.

ಪ್ರತಿಭಟನೆಯಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಎಸ್.ಪುಷ್ಪರಾಜ್, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಯುವ ಮೋರ್ಚಾದ ಪದಾಧಿಕಾರಿಗಳಾದ ಕಾರ್ತಿಕ್, ಸಚಿನ್‌ಗೌಡ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಧುಕುಮಾರ್‌ರಾಜ್ ಅರಸ್, ಎಸ್.ಟಿ.ಮೋರ್ಚಾದ ಜಿಲ್ಲಾಧ್ಯಕ್ಷ ನಂದೀಶ್ ಮದಕರಿ, ಮುಖಂಡರಾದ ನವೀನ್, ಜೀವನ್, ರೇವನಾಥ, ಶಂಕರ್, ಮಹೇಶ್ ಹಾಗೂ ಕಾರ್ಯಕರ್ತರು ಇದ್ದರು.ಕರಾಳ ನೆನಪು:

ಕಳೆದ 1975ರ ಜೂನ್‌ 25 ರಂದು ದೇಶದ ಪ್ರಜಾಪ್ರಭುತ್ವವನ್ನು ಅಮಾನತಿನಲ್ಲಿಟ್ಟಿದ್ದ ಅಂದಿನ ಪ್ರಧಾನಿ ಇಂದಿರಾಗಾಂಧಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ದೇಶದ ನಾಗರಿಕರ ಹಕ್ಕನ್ನು ಮೊಟಕುಗಳಿಸಿದ್ದರು.

ಅಂದು ಮಧ್ಯರಾತ್ರಿ ತುರ್ತು ಪರಿಸ್ಥಿತಿ ಘೋಷಣೆಯಾಗುತ್ತಿದ್ದಂತೆ ಇದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳನ್ನು ಹತ್ತಿಕ್ಕಲಾಯಿತು. ವಿವಿಧ 26 ಸಂಘಟನೆಗಳನ್ನು ನಿಷೇಧಿಸಲಾಯಿತು. ಪ್ರಧಾನಿ ಇಂದಿರಾಗಾಂಧಿ ವಿರುದ್ಧ ಲೇಖನಗಳು ಪತ್ರಿಕೆಯಲ್ಲಿ ಪ್ರಕಟವಾದಾಗ ಪತ್ರಿಕಾ ಕಚೇರಿಯ ವಿದ್ಯುತ್ ಕಡಿತಗೊಳಿಸಲಾಯಿತು. ಪತ್ರಿಕೆಯ ಮೇಲೆಸೆನ್ಸಾರ್‌ಶಿಪ್ ಹೇರಲಾಗಿತ್ತು.

ದೇಶದಲ್ಲಿ 21 ತಿಂಗಳು ತುರ್ತುಪರಿಸ್ಥಿತಿ ಹೇರಿದ್ದ 50ನೇ ವರ್ಷಕ್ಕೆ ಕಾಲಿಡುತ್ತಿದ್ದೇವೆ. ತುರ್ತು ಪರಿಸ್ಥಿತಿಯ ವೇಳೆ ಆಂತರಿಕ ಭದ್ರತಾ ನಿರ್ವಹಣೆ ಕಾಯ್ದೆ (ಮಿಸಾ) ಆಧ್ಯಾದೇಶ ಹೊರಡಿಸುವ ಮೂಲಕ ತಿದ್ದುಪಡಿಯನ್ನು ತರಲಾಗಿತ್ತು. ಯಾವುದೇ ವ್ಯಕ್ತಿಯನ್ನು ವಿಚಾರಣೆ ಇಲ್ಲದೆ ಬಂಧಿಸುವ ಅಧಿಕಾರವನ್ನು ಪೊಲೀಸರಿಗೆ ನೀಡಲಾಯಿತು.

ದೇಶದಲ್ಲಿ ಕರಾಳ ಇತಿಹಾಸ ನಿರ್ಮಿಸಿದ ತುರ್ತು ಪರಿಸ್ಥಿತಿಯ ಕರಾಳ ಕಾಲಘಟ್ಟಕ್ಕೆ ಇದೀಗ 50 ವರ್ಷಗಳಾಗಿದ್ದು, ಆ ಕಾಲಘಟ್ಟದ ಕರಾಳ ನೆನಪುಗಳನ್ನು ಒಮ್ಮೆ ಮಂಥನ ಮಾಡಲು, ಸಾರ್ವಜನಿಕವಾಗಿ ಚರ್ಚಿಸಲು ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರ ವೇದಿಕೆ ಆಶ್ರಯದಲ್ಲಿ ಜೂನ್ 26 ರಂದು ಬೆಳಗ್ಗೆ 11 ಗಂಟೆಗೆ ಚಿಕ್ಕಮಗಳೂರಿನ ಎಐಟಿ ಕಾಲೇಜಿನ ಬಿಜಿಎಸ್‌ ಸಂಭಾಂಗಣದಲ್ಲಿ ಸಾರ್ವಜನಿಕ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

--------------

25ಕೆಸಿಕೆಎಂ1

ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಗೆ 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಮಂಗಳವಾರ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಚಿಕ್ಕಮಗಳೂರಿನ ಕಾಂಗ್ರೆಸ್ ಕಚೇರಿಗೆ ಪೋಸ್ಟರ್‌ ಅಂಟಿಸಲು ತೆರಳುವ ವೇಳೆ ಪೊಲೀಸರು ಬಂಧಿಸಿದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ