ಮಂಡ್ಯ: ಕರ್ನಾಟಕ ಸರ್ಕಾರ, ಬೆಳಗಾವಿ ಜಿಲ್ಲಾಡಳಿತ ಹಾಗೂ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮನ 200ನೇ ವಿಜಯೋತ್ಸವದ ಅಂಗವಾಗಿ ಆಯೋಜಿಸಿರುವ ವಿಜಯ ಜ್ಯೋತಿ ರಥಯಾತ್ರೆ ಶುಕ್ರವಾರ ಮಂಡ್ಯ ಜಿಲ್ಲೆಗೆ ಆಗಮಿಸಿತು. ವಿಜಯಜ್ಯೋತಿ ರಥಯಾತ್ರೆಗೆ ಜಿಲ್ಲಾಡಳಿತ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಸಂಘ- ಸಂಸ್ಥೆಗಳ ವತಿಯಿಂದ ರಥವನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಪಾಧ್ಯಕ್ಷೆ ಡಾ. ಮೀರಾ ಶಿವಲಿಂಗಯ್ಯ ಮಾತನಾಡಿ, ನವ ದುರ್ಗೆಯರ ಶೌರ್ಯದ ಪ್ರತೀಕವಾಗಿ ಅನ್ಯಾಯವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ಹೋರಾಡಿದರು. ರಾಣಿ ಚೆನ್ನಮ್ಮ ಹಾಗೂ ಝಾನ್ಸಿ ರಾಣಿ ಲಕ್ಷ್ಮೀ ಬಾಯಿ ಅವರು ದೇಶ ಪ್ರೇಮವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಕೆಚ್ಚೆದೆಯ ಹೋರಾಟ ನಡೆಸಿದ್ದಾರೆ. ಪ್ರತಿಯೊಬ್ಬ ಹೆಣ್ಣು ಮಕ್ಕಳಿಗೂ ಅವರು ಆದರ್ಶವಾಗಿದ್ದಾರೆ ಎಂದು ನುಡಿದರು.
ತಹಸೀಲ್ದಾರ್ ಶಿವಕುಮಾರ್ ಬಿರಾದಾರ್, ಕಸಾಪ ನಗರಘಟಕ ಅಧ್ಯಕ್ಷೆ ಸುಜಾತ ಕೃಷ್ಣ, ಹೊಳಲು ಶ್ರೀಧರ್, ಕೃಷ್ಣ, ಡಾ. ಹುಸ್ಕೂರು ಕೃಷ್ಣೇಗೌಡ, ಚಂದ್ರಲಿಂಗು, ಬಿ ಎಂ ಅಪ್ಪಾಜಪ್ಪ, ಡಾ ಮಹೇಶ್ ಸುಂಡಹಳ್ಳಿ ಇತರರಿದ್ದರು.