ಕಡಲೆ, ಮೆಕ್ಕೆಜೋಳ ಬಾಕಿ ಹಣಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ

KannadaprabhaNewsNetwork |  
Published : Jan 07, 2025, 12:32 AM IST
ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಡಿಸಿ, ಜಿಪ ಸಿಇಒ ಹಾಗೂ ಎಸ್ಪಿ ಭೇಟಿ ನೀಡಿ ರೈತರ ಮನವೊಲಿಸಿದರು. | Kannada Prabha

ಸಾರಾಂಶ

ಗದಗ ಮತ್ತು ಮುಂಡರಗಿ ತಾಲೂಕು ವ್ಯಾಪ್ತಿಯಲ್ಲಿ ರೈತರಿಂದ ಖರೀದಿಸಿದ ಕಡಲೆ, ಮೆಕ್ಕೆಜೋಳದ ಹಣ ಬಿಡುಗಡೆ ಮಾಡಬೇಕು ಮತ್ತು ದಾವಣಗೆರೆ ಮೂಲದ ಕಂಪನಿ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಸೋಮವಾರ ರೈತರು ಗದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಅಹೋರಾತ್ರಿ ಧರಣಿ ಪ್ರಾರಂಭಿಸಿದರು.

ಗದಗ: ಜಿಲ್ಲೆಯ ಗದಗ ಮತ್ತು ಮುಂಡರಗಿ ತಾಲೂಕು ವ್ಯಾಪ್ತಿಯಲ್ಲಿ ಜಿಪಂ ಅಧಿಕಾರಿಗಳ ಸೂಚನೆಯ ಮೇರೆಗೆ ಹಲವಾರು ರೈತರಿಂದ ಕಡಲೆ, ಮೆಕ್ಕೆಜೋಳ ಖರೀದಿಸಲಾಗಿದೆ. ಆದರೆ ಇದುವರೆಗೂ ರೈತರಿಗೆ ಕೊಡಬೇಕಾಗಿದ್ದ ಹಣ ನೀಡಿಲ್ಲ. ತಕ್ಷಣವೇ ರೈತರಿಗೆ ಹಣ ಬಿಡುಗಡೆ ಮಾಡಬೇಕು ಮತ್ತು ತಪ್ಪು ಮಾಡಿರುವ ದಾವಣಗೆರೆ ಮೂಲದ ಕಂಪನಿ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಸೋಮವಾರ ರೈತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಅಹೋರಾತ್ರಿ ಧರಣಿ ಪ್ರಾರಂಭಿಸಿದರು.

ಈ ಸಂದರ್ಭದಲ್ಲಿ ವಿವಿಧ ರೈತ ಮುಖಂಡರು ಪಾಲ್ಗೊಂಡು ಮಾತನಾಡಿ, ಪ್ರತಿ ಗ್ರಾಮದಲ್ಲಿ 5 ಜನ ಕೃಷಿ ಸಖಿಯರನ್ನು ಆಯ್ಕೆ ಮಾಡಿ ಅವರಿಂದ ಕಡಲೆ, ಮೆಕ್ಕೆಜೋಳ ಖರೀದಿ ಮಾಡುವ ವಿಧಾನವನ್ನು ಗದಗ ಮತ್ತು ಮುಂಡರಗಿ ತಾಲೂಕಿನಲ್ಲಿ ಅನುಸರಿಸಲಾಗಿದೆ. ಆದರೆ ಕಡಲೆ ಬೀಜ, ಮೆಕ್ಕೆಜೋಳ ಮಾರಾಟ ಮಾಡಿದ ರೈತರಿಗೆ ಹಣವನ್ನು ಸರಿಯಾಗಿ ಪಾವತಿಸುತ್ತಿಲ್ಲ ಎಂದು ಹೇಳಿದರು. ಗದಗ, ಮುಂಡರಗಿ ತಾಲೂಕಿನ 450ಕ್ಕೂ ಹೆಚ್ಚಿನ ರೈತರಿಗೆ ಅನ್ಯಾಯವಾಗಿದ್ದು, 6 ಕೋಟಿಗೂ ಅಧಿಕ ಬಾಕಿ ಹಣ ರೈತರಿಗೆ ಬರಬೇಕಾಗಿದೆ. ಈ ವಿಷಯಕ್ಕೆ ಸಂಬಂಧಿಸಿ ಎಲ್ಲ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಕೃಷಿ ಇಲಾಖೆ ಸಂಜೀವಿನಿ ಯೋಜನೆ ಹಾಗೂ ಜಿಪಂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ (ಎನ್‌ಆರ್‌ಎಲ್‌ಎಂ) ಅಡಿ ಗ್ರಾಮೀಣ ಭಾಗದಲ್ಲಿ ಸ್ಥಾಪಿತವಾಗಿರುವ ಖರೀದಿ ಕೇಂದ್ರದಿಂದಲೇ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯದಲ್ಲಿ ಒಕ್ಕೂಟದ ಅಧ್ಯಕ್ಷ ಬೀರಪ್ಪ ದೇಶನೂರ, ಅಖಿಲ ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನಾ ರೈತ ಸಂಘದ ರಾಜ್ಯಾಧ್ಯಕ್ಷ ಡಿ.ಎಚ್. ನವಲಗುಂದ, ಒಕ್ಕೂಟದ ವರಿಷ್ಠರಾದ ಹಿಂಗಲಗುತ್ತೆ ಕೃಷ್ಣೇಗೌಡ್ರ, ಅಖಿಲ ಕರ್ನಾಟಕ ಮಹಿಳಾ ರೈತ ಸಂಘದ ರಾಜ್ಯಾಧ್ಯಕ್ಷೆ ಮಹಾದೇವಿ ಹುಯಿಲಗೋಳ, ಸಾಹಿದ ಹುಸೇನ, ಈರಣ್ಣ ಅಂಗಡಿ, ಸುರೇಶ ಮೂಲಿಮನಿ, ಸುಜಾತಾ ಜಾಧವ, ಬಸಮ್ಮ ಕಾಳೆ, ಜಯಶೀಲಾ, ಬಿಬಿಜಾನ ಸಂಕೇಶ್ವರ, ಸುಜಾತಾ ಬೆಳಗಾವಿ ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರೈತ ಮುಖಂಡರು ಪಾಲ್ಗೊಂಡಿದ್ದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಪಂ ಸಿಇಒ ಭರತ ಎಸ್., ಎಸ್ಪಿ ಬಿ.ಎಸ್. ನೇಮಗೌಡ್ರ ಸ್ಥಳಕ್ಕೆ ಆಗಮಿಸಿ, ರೈತರ ಮನವೊಲಿಸಲು ಪ್ರಯತ್ನಿಸಿದರು. ಈ ವಿಷಯವನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರುವುದಾಗಿ ಹೇಳಿದರು. ಈಗಾಗಲೇ ನಾವು ಹಲವು ಬಾರಿ ಸಚಿವರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗದೇ ಇರುವ ಹಿನ್ನೆಲೆಯಲ್ಲಿಯೇ ಅಹೋರಾತ್ರಿ ಪ್ರತಿಭಟನೆ ಪ್ರಾರಂಭಿಸಿದ್ದೇವೆ. ನಮಗೆ ನ್ಯಾಯ ಸಿಗುವ ವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ರೈತರು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು