ಪರಿಸರಸ್ನೇಹಿ ಅ‍ವಳಿ ನಗರ ನಿರ್ಮಾಣಕ್ಕೆ ಮಹತ್ವದ ಹೆಜ್ಜೆ: ಡಾ. ಎಚ್‌.ಕೆ. ಪಾಟೀಲ

KannadaprabhaNewsNetwork |  
Published : Mar 17, 2026, 02:15 AM IST
ಗದಗ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು ಕಾರ್ಯನಿರ್ವಹಣೆ ಹಾಗೂ ಹಸ್ತಾಂತರ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಕೆ. ಪಾಟೀಲ ಚಾಲನೆ ನೀಡಿದರು. | Kannada Prabha

ಸಾರಾಂಶ

ನಗರಗಳಲ್ಲಿ ಜನಸಂಖ್ಯೆ ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸುವುದು ಅತ್ಯಂತ ಅಗತ್ಯವಾಗಿದೆ. ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡುವುದರಿಂದ ಪರಿಸರ ಸಂರಕ್ಷಣೆಗೂ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವುದಕ್ಕೂ ಸಹಕಾರಿಯಾಗುತ್ತದೆ.

ಗದಗ: ಗದಗ- ಬೆಟಗೇರಿ ಅವಳಿ ನಗರಕ್ಕೆ ಇದು ಮೊದಲ ಸಮಗ್ರ ಘನತ್ಯಾಜ್ಯ ನಿರ್ವಹಣಾ ಯೋಜನೆಯಾಗಿದ್ದು, ಸ್ವಚ್ಛ ಹಾಗೂ ಪರಿಸರಸ್ನೇಹಿ ನಗರ ನಿರ್ಮಾಣಕ್ಕೆ ಇದು ಮಹತ್ವದ ಹೆಜ್ಜೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಕೆ. ಪಾಟೀಲ ತಿಳಿಸಿದರು.

ನಗರದ ಬಳಗಾನೂರು ರಸ್ತೆಯಲ್ಲಿರುವ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು ಕಾರ್ಯನಿರ್ವಹಣೆ ಹಾಗೂ ಹಸ್ತಾಂತರ ಯೋಜನೆಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.ನಗರಗಳಲ್ಲಿ ಜನಸಂಖ್ಯೆ ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸುವುದು ಅತ್ಯಂತ ಅಗತ್ಯವಾಗಿದೆ. ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡುವುದರಿಂದ ಪರಿಸರ ಸಂರಕ್ಷಣೆಗೂ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವುದಕ್ಕೂ ಸಹಕಾರಿಯಾಗುತ್ತದೆ ಎಂದರು.ಈ ಯೋಜನೆಯಡಿ ಸರ್ಕಾರ ಮೂಲ ಸೌಕರ್ಯ ಒದಗಿಸುವುದರ ಜತೆಗೆ ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಘಟಕ ನಿರ್ಮಿಸಿ ನಿರ್ವಹಿಸುವ ವ್ಯವಸ್ಥೆ ಜಾರಿಯಲ್ಲಿದೆ. ನಗರಸಭೆಯ 25 ಎಕರೆ ಪ್ರದೇಶದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕದಲ್ಲಿ 5 ಎಕರೆ ಜಾಗವನ್ನು ಡಿಬಿಎಫ್‌ಒಟಿ ಆಧರಿತ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಎನ್ವಿರೋಟೆಕ್ ಸಲ್ಯೂಷನ್ಸ್ ಸಂಸ್ಥೆಗೆ ಹಸ್ತಾಂತರಿಸಲಾಗುತ್ತಿದೆ ಎಂದರು.

ಸುಮಾರು ₹8.73 ಕೋಟಿ ವೆಚ್ಚದಲ್ಲಿ ಈ ಘಟಕವನ್ನು ಅಭಿವೃದ್ಧಿಪಡಿಸಲಾಗುತ್ತದೆ. ಘಟಕದಲ್ಲಿ ಮಿಶ್ರ ತ್ಯಾಜ್ಯದಿಂದ ಹಸಿ ತ್ಯಾಜ್ಯವನ್ನು ಬೇರ್ಪಡಿಸಿ ಜೈವಿಕ ಗೊಬ್ಬರವಾಗಿ ಪರಿವರ್ತಿಸಲಾಗುತ್ತದೆ. ಒಣ ತ್ಯಾಜ್ಯವನ್ನು ಪುನರ್ ಬಳಕೆ ಮಾಡಲಾಗುತ್ತದೆ. ಪುನರ್ ಬಳಕೆ ಸಾಧ್ಯವಾಗದ ತ್ಯಾಜ್ಯವನ್ನು ಕೈಗಾರಿಕೆಗಳಿಗೆ ಇಂಧನ ರೂಪದಲ್ಲಿ ಶಕ್ತಿ ಉತ್ಪಾದನೆಗಾಗಿ ಕಳುಹಿಸಲಾಗುತ್ತದೆ. ನಗರದಲ್ಲಿ ಪ್ರತಿದಿನ ಸುಮಾರು 75 ಟನ್ ತ್ಯಾಜ್ಯ ಸಂಗ್ರಹವಾಗುತ್ತಿದ್ದು, ಅದರ ಸಮರ್ಪಕ ವಿಲೇವಾರಿ ಕಾರ್ಯ ನಡೆಯುತ್ತಿದೆ. ತ್ಯಾಜ್ಯ ನಿರ್ವಹಣೆಯಲ್ಲಿ ಗದಗ ಜಿಲ್ಲೆ ರಾಜ್ಯದಲ್ಲಿ ಆರನೇ ಸ್ಥಾನದಲ್ಲಿದೆ ಎಂದರು.ಈ ಯೋಜನೆಯ ಕಾಮಗಾರಿಯನ್ನು ಆ. 15ರೊಳಗೆ ಪೂರ್ಣಗೊಳಿಸಿ ಉದ್ಘಾಟನೆ ಮಾಡುವ ಉದ್ದೇಶವಿದ್ದು, ಕಾಮಗಾರಿ ಗುಣಮಟ್ಟದಿಂದ ಪೂರ್ಣಗೊಳ್ಳಬೇಕು ಎಂದು ಸೂಚಿಸಿದರು.

ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ಸಾಬ ಬಬರ್ಚಿ, ಪ್ರಭು ಬುರಬುರೆ, ಬಸವರಾಜ ಕಡೇಮನಿ, ನಗರಸಭೆ ಸದಸ್ಯೆ ಲಕ್ಷ್ಮೀ ಸಿದ್ದಮ್ಮನಹಳ್ಳಿ, ಮುನಿಯಾರ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಪರಿಸರ ಅಧಿಕಾರಿ ಆನಂದ ಬದಿ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ, ಧಾರವಾಡ ಮಹಾನಗರ ಅಭಿವೃದ್ಧಿಗೆ ಸಪ್ತಸೂತ್ರ
ಹಾನಗಲ್ಲಿನ 14 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ