ಅನಂತ್‌ ಕುಮಾರ್ ಪ್ರತಿಕೃತಿ ದಹಿಸಿ ಪ್ರತಿಭಟನೆ

KannadaprabhaNewsNetwork | Published : Jan 17, 2024 1:46 AM

ಸಾರಾಂಶ

ಸಂಸದ ಅನಂತ್ ಕುಮಾರ್ ಹೆಗಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿದ್ದನ್ನು ಖಂಡಿಸಿ ಅರಕಲಗೂಡಿನ ಕುರುಬರ ಸಂಘದ ಮುಖಂಡರು ಪಟ್ಟಣದ ಅನಕೃ ವೃತ್ತದಲ್ಲಿ ಮಂಗಳವಾರ ಅನಂತ್ ಕುಮಾರ್ ಹೆಗಡೆ ಅವರ ಶವಯಾತ್ರೆ ನಡೆಸಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿದ್ದಕ್ಕೆ ಖಂಡನೆ ಕನ್ನಡಪ್ರಭ ವಾರ್ತೆ ಅರಕಲಗೂಡು

ಸಂಸದ ಅನಂತ್ ಕುಮಾರ್ ಹೆಗಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿದ್ದನ್ನು ಖಂಡಿಸಿ ತಾಲೂಕು ಕುರುಬರ ಸಂಘದ ಮುಖಂಡರು ಪಟ್ಟಣದ ಅನಕೃ ವೃತ್ತದಲ್ಲಿ ಮಂಗಳವಾರ ಅನಂತ್ ಕುಮಾರ್ ಹೆಗಡೆ ಅವರ ಶವಯಾತ್ರೆ ನಡೆಸಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

ನೂರಾರು ಮಂದಿ ಸಿದ್ದರಾಮಯ್ಯ ಅಭಿಮಾನಿಗಳು ಅನಂತ್ ಕುಮಾರ್ ಹೆಗಡೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಮಾತನಾಡಿ, ಸಿದ್ದರಾಮಯ್ಯ ಅವರು ಒಂದು ಜಾತಿಗೆ, ಪಕ್ಷಕ್ಕೆ ಸೀಮಿತವಾದವರಲ್ಲ. ರಾಜ್ಯದ ಜನರ ಮನಸ್ಸನ್ನು ಗೆದ್ದಿರುವ, ಜನಪರ ಕಾಳಜಿ ಹೊಂದಿರುವ ನಾಯಕ. ಅಂತಹವರಿಗೆ ಅವಹೇಳಕಾರಿಯಾಗಿ ಮಾತನಾಡಿದ್ದೀರಿ. ಹಾಗಾದರೆ ಬಡವರ್ಯಾರು ಬದುಕಬಾರದೆ? ಎಂದು ಪ್ರಶ್ನಿಸಿದರು.

ಅನಂತ್ ಕುಮಾರ್ ಹೆಗಡೆಯವರು ಕಳೆದ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ತೆಗೆದುಕೊಂಡರು. ಇಂದು ಚುನಾವಣೆ ಸಮೀಪಸುತ್ತಿದ್ದಂತೆ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇಂದು ಸ್ವ ಪಕ್ಷದವರೇ ಅವರಿಗೆ ಛೀಮಾರಿ ಹಾಕುತ್ತಿದ್ದಾರೆ. ಇಂತಹವರನ್ನು ಇನ್ನು ಪಕ್ಷದಲ್ಲೇ ಇಟ್ಟುಕೊಂಡಿದ್ದಾರಲ್ಲ, ಪಕ್ಷಕ್ಕೆ ನಾಚಿಕೆಗೇಡಿನ ಸಂಗತಿ. ಈ ಕೂಡಲೇ ಅನಂತ್ ಕುಮಾರ್ ಹೆಗಡೆ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಅನಂತ್ ಕುಮಾರ್ ಹೆಗಡೆ ಅವರು ನಮ್ಮ ಕೈಗೆ ಸಿಕ್ಕಿದರೆ ಮಸಿ ಬಳಿಯುವುದು ಖಂಡಿತ. ಹೊರಗಡೆ ಓಡಾಡಬೇಕಾದರೆ ಎಚ್ಚರಿಕೆಯಿಂದ ಓಡಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ನೂರಾರು ಮಂದಿ ಮುಖಂಡರು, ಅಭಿಮಾನಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸಿದ್ದರಾಮಯ್ಯ ಅಭಿಮಾನಿಗಳು ಅನಂತ್ ಕುಮಾರ್ ಹೆಗಡೆ ವಿರುದ್ಧ ಘೋಷಣೆ ಕೂಗಿ ಅರಕಲಗೂಡಲ್ಲಿ ಪ್ರತಿಭಟನೆ ನಡೆಸಿದರು.

Share this article