ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರ ಪ್ರತಿಭಟನೆ

KannadaprabhaNewsNetwork | Published : Dec 18, 2024 12:45 AM

ಸಾರಾಂಶ

Anganwadi employees protest demanding fulfillment of demand

-ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿ ನೇತೃತ್ವ ಧರಣಿ । ಅಂಗನವಾಡಿ ಕಾರ್ಯಕರ್ತೆಯರನ್ನು ಕಾಯಂಗೊಳಿಸಲು ಒತ್ತಾಯ

----

ಕನ್ನಡಪ್ರಭ ವಾರ್ತೆ ರಾಯಚೂರು

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಕಾಯಂಗೊಳಿಸಬೇಕು, ಗೌರವಧನವನ್ನು ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ( ಸಿಐಟಿಯು) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲಾಯಿತು. ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಸಮೀಪದ ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಸೇರಿದ ಸಮಿತಿ ಪದಾಧಿಕಾರಿಗಳು, ಸದಸ್ಯರು, ಮುಖಂಡರು ಪ್ರತಿಭಟನೆ ನಡೆಸಿ ಸಿಐಟಿಯು ರಾಜ್ಯ ಘಟಕದ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಬಳಿ ನಡೆಯುತ್ತಿರುವ ಹೋರಾಟದ ಭಾಗವಾಗಿ ಎರಡು ದಿನಗಳ ಹೋರಾಟಕ್ಕೆ ಬೆಂಬಲಿಸಿದರು.

ಗುಜರಾತ್ ಹೈಕೊರ್ಟ್ ತೀರ್ಪಿನಂತೆ ಅಂಗನವಾಡಿ ಕಾರ್ಯಕರ್ತೆರು ಹಾಗೂ ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಕಾಯಂ ಮಾಡಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 14 ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆ (ಐಸಿಡಿಸಿ) 2023ರ ಆದೇಶದ ಪ್ರಕಾರ ಕೂಡಲೇ ಗ್ರಾಚ್ಯೂಟಿ ಹಣ ಬಿಡುಗಡೆ ಮಾಡಬೇಕು. ಎಲ್ಲರಿಗೂ ಅನ್ವಯಿಸಿ 2018ರಿಂದ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರ ಗೌರವಧನ ಹೆಚ್ಚಳ ಮಾಡದ ಕಾರಣ ಕುಟುಂಬ ನಿರ್ವಹಣೆಗೆ ಸಮಸ್ಯೆಯಾಗಿದೆ. ಕೂಡಲೇ 26,000 ರು. ಗೌರವಧನದ ಜೊತೆಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಘೋಷಿಸಿದಂತೆ 15 ಸಾವಿರ ಗೌರವಧನವನ್ನೂ ಸಹ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಸಾಮೂಹಿಕ ಆರೋಗ್ಯ ವಿಮೆ ಕೂಡಲೇ ಜಾರಿ, ನಿವೃತ್ತಿಯಾದವರಿಗೆ ಒಪಿಎಸ್ ಹಣವನ್ನು ಹಾಗೂ 10 ಸಾವಿರ ರು. ಮಾಸಿಕ ಪಿಂಚಣಿ ನೀಡಬೇಕು. ಐಸಿಡಿಎಸ್ ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸಬೇಕು. ಎಲ್ಲ ರೀತಿಯ ಚುನಾವಣೆ ಕಾರ್ಯಗಳಿಂದ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದರು.

ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯ ಒದಗಿಸಬೇಕು, ಕೇಂದ್ರಗಳಿಗೆ ಒದಗಿಸುವ ಪೂರಕ ಪೌಷ್ಟಿಕ ಆಹಾರಕ್ಕೆ ಜಿಎಸ್ಟಿಯಿಂದ ಹೊರಗಿಡಬೇಕು. ಘಟಕ ವೆಚ್ಚ ಹೆಚ್ಚಳ ಮಾಡಿ ಹಿಂದಿನಂತೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಮೆನು ಅಂತಿಮಗೊಳ್ಳವ ವ್ಯವಸ್ಥೆ ಜಾರಿಯಾಗಬೇಕು.

ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿ ಮಾಡಬೇಕು, ಸಾಧ್ಯವಾಗದಿದ್ದಲ್ಲಿ ಹೆಚ್ಚಿನ ಸೇವೆಗೆ ಹೆಚ್ಚುವರಿ ವೇತನ ಪಾವತಿಸಬೇಕು, ಖಾಲಿ ಇರುವ ಮತ್ತು ಹೊಸ ಕೇಂದ್ರಗಳಿಗೆ ಸರ್ಕಾರಿ ಆದೇಶದಂತೆ ಮುಂಬಡ್ತಿ, ವರ್ಗಾವಣೆಗಳನ್ನೂ ನೀಡಿ ನಂತರ ಹೊಸ ಆಯ್ಕೆ ಮಾಡಬೇಕು. ರಾಜಕೀಯ ಒತ್ತಡಕ್ಕೆ ಮಣಿದು ಅವಕಾಶದಿಂದ ವಂಚಿಸಬಾರದು. ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಕೇಂದ್ರಗಳನ್ನಾಗಿ ಪರಿವರ್ತಿಸುವವರೆಗೆ ಸಹಾಯಕಿಯರಿಗೆ ಜವಾಬ್ದಾರಿ ನೀಡಬೇಕು ಹಾಗೂ ಗೌರವಧನ ಹೆಚ್ಚಳ ಮಾಡಬೇಕು. ಕರ್ತವ್ಯದ ವೇಳೆ ಉಂಟಾಗುವ ತಾಂತ್ರಿಕ ಅಡಚಣೆ ಸರಿಪಡಿಸಿ ಸುಧಾರಿಸಬೇಕು ಎಂದು ಒತ್ತಾಯಿಸಿದರು.

ಶಿಕ್ಷಣ ಇಲಾಖೆ ಮತ್ತು ಎಡಿಎಂಸಿ ಗಳಿಂದ ಪ್ರಾರಂಭ ಮಾಡಿರುವ ಎಲ್ಕೆಜಿ, ಯುಕೆಜಿ ನಿಲ್ಲಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ಕೆಜಿ, ಯುಕೆಜಿ ಆರಂಭಿಸಬೇಕೆಂದು ಆಗ್ರಹಿಸಿದರು.

ಧರಣಿಯಲ್ಲಿ ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷೆ ಎಚ್.ಪದ್ಮಾ, ಕಾರ್ಯದರ್ಶಿ ರಂಗಮ್ಮ ಅನ್ವರ, ವರಲಕ್ಷ್ಮಿ, ಗೋಕರಮ್ಮ, ರಮಾದೇವಿ, ಸರಸ್ವತಿ, ಮಹೇಶ್ವರಿ,ಸುಜಾತಾ, ರೂಪಾ, ಲಕ್ಷ್ಮೀ, ಡಿ.ಎಸ್.ಶರಣ ಬಸವ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.

-------------------

17ಕೆಪಿಆರ್‌ಸಿಆರ್ 03: ರಾಯಚೂರು ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘ( ಸಿಐಟಿಯು) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆಯನ್ನು ನಡೆಸಲಾಯಿತು.

Share this article