ಕನ್ನಡಪ್ರಭ ವಾರ್ತೆ ಬೆಂಗಳೂರುಅಂಗನವಾಡಿ ಮಕ್ಕಳಿಗೆ ಬ್ಯಾಗ್, ಯೂನಿಫಾರ್ಮ್ ಕೊಡುವ ಬಗ್ಗೆ ತೀರ್ಮಾನಿಸಿದೆ. ಮಾಂಟೆಸ್ಸರಿ ತರಗತಿಗಳು ಆರಂಭಗೊಂಡ ನಂತರ ಅಂಗನವಾಡಿ ಹೆಸರನ್ನು ಬದಲಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಕಳವಳ ಅರ್ಥ ಆಗುತ್ತದೆ. ಆದರೆ, ಈಗಾಗಲೇ ಅಂಗನವಾಡಿ ಕೇಂದ್ರಗಳ ಅಸ್ತಿತ್ವದ ಬಗ್ಗೆ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೂ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಕಾರ್ಯಕರ್ತೆಯರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ. ಅಂಗನವಾಡಿ ಕಾರ್ಯಕರ್ತೆಯರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಹಾಗೂ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಅಂಗನವಾಡಿ ಶಿಕ್ಷಕರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಕಾರ್ಯಕರ್ತೆಯರು ಹಾಗೂ ಮಕ್ಕಳ ಇಬ್ಬರ ಹಿತದೃಷ್ಟಿಯಿಂದ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.