ರಾಘು ಕಾಕರಮಠ
1983ರ ಮೇ ತಿಂಗಳಲ್ಲಿ ಅಂಕೋಲಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸುವರ್ಣ ಮಹೋತ್ಸವ ಆಯೋಜಿಸಲಾಗಿತ್ತು. ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ, ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆಯನ್ನು ಶಾಶ್ವತವಾಗಿಸುವ ಹಾಗೂ ಮುಂದಿನ ಪೀಳಿಗೆಗೆ ಅವರ ಹೋರಾಟದ ಇತಿಹಾಸ ಪರಿಚಯಿಸುವ ಉದ್ದೇಶದಿಂದ ಸ್ವಾತಂತ್ರ್ಯ ಸಂಗ್ರಾಮ ಸ್ಮಾರಕ ಭವನ ನಿರ್ಮಿಸುವ ನಿರ್ಧಾರ ಕೈಗೊಳ್ಳಲಾಗಿತ್ತು.
1988ರಲ್ಲಿ ರಾಮಕೃಷ್ಣ ಹೆಗಡೆ ಅವರೇ ಸ್ಮಾರಕಕ್ಕೆ ಅಡಿಗಲ್ಲು ಹಾಕಿದರು. ತಾಲೂಕು ಕೇಂದ್ರದ ಹೃದಯಭಾಗದಲ್ಲಿ ಮೂರು ಬೃಹತ್ ಕಟ್ಟಡಗಳು ತಲೆ ಎತ್ತಿದವು. ಆದರೆ ಈಗ ಇದೇ ಕಟ್ಟಡಗಳ ಪೈಕಿ ಕೆಲವೊಂದು ಬಳಕೆಯಾಗದೆ, ನಿರ್ವಹಣೆಯ ಕೊರತೆಯಿಂದ ಶಿಥಿಲಾವಸ್ಥೆ ತಲುಪಿವೆ.ಮೂರು ಕಟ್ಟಡಗಳು: ಸ್ವಾತಂತ್ರ್ಯ ಸಂಗ್ರಾಮ ಭವನದ ಆವರಣದಲ್ಲಿ ಮೂರು ಕಟ್ಟಡಗಳಿವೆ. ಒಂದು ಸಭಾಭವನ ಸಾರ್ವಜನಿಕರ ಬಳಕೆಗೆ ತೆರೆದಿದ್ದು, ಮತ್ತೊಂದು ಕಟ್ಟಡದಲ್ಲಿ ಹಿಂದೆ ಸಾಕ್ಷರತಾ ಇಲಾಖೆಯ ಚಟುವಟಿಕೆ ಹಾಗೂ ಗ್ರಂಥಾಲಯ ಕಾರ್ಯನಿರ್ವಹಿಸುತ್ತಿತ್ತು. ಇನ್ನೊಂದು ಕಟ್ಟಡದಲ್ಲಿ ಸುಮಾರು 15 ವರ್ಷಗಳ ಹಿಂದೆ ಪದವಿ ಕಾಲೇಜು ಕಾರ್ಯನಿರ್ವಹಿಸುತ್ತಿತ್ತು. ಪೂಜಗೇರಿಯಲ್ಲಿ ಕಾಲೇಜಿಗೆ ಸ್ವಂತ ಕಟ್ಟಡ ನಿರ್ಮಾಣವಾದ ಬಳಿಕ ಈ ಕಟ್ಟಡದ ಬಾಗಿಲು ಬಹುತೇಕ ಮುಚ್ಚಿಯೇ ಉಳಿದಿದೆ. ಕೋಟ್ಯಂತರ ರುಪಾಯಿ ಮೌಲ್ಯ ಹೊಂದಿರುವ ಈ ಕಟ್ಟಡ ಇಂದು ಬಳಕೆಯಾಗದೆ ಪಾಳು ಬೀಳುವ ಹಂತ ತಲುಪಿದೆ.
ಒಂದು ಕೋಟಿ ಅನುದಾನ: ಸರ್ಕಾರ 10 ವರ್ಷಗಳ ಹಿಂದೆ ಸ್ಮಾರಕ ಭವನದ ಕಟ್ಟಡಗಳ ಅಭಿವೃದ್ಧಿಗೆ ₹1 ಕೋಟಿ ಅನುದಾನ ಮಂಜೂರು ಮಾಡಿತ್ತು. ನಿರ್ಮಿತಿ ಕೇಂದ್ರ ಕಾಮಗಾರಿ ಜವಾಬ್ದಾರಿ ವಹಿಸಿಕೊಂಡಿತ್ತು. ಆದರೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿಬಂದಿದ್ದವು. ಸಾರ್ವಜನಿಕರಿಂದ ವಿರೋಧ ವ್ಯಕ್ತವಾದರೂ ಅದೇ ಸಂಸ್ಥೆಗೆ ಕಾಮಗಾರಿ ನೀಡಿದ್ದೇಕೆ ಎಂಬ ಪ್ರಶ್ನೆಯೂ ಸಾರ್ವಜನಿಕ ವಲಯದಲ್ಲಿ ಮೂಡಿದೆ.