ಬೆಂಗಳೂರು ನಗರದಲ್ಲಿ ಮತ್ತೊಂದು ಮೇಲ್ಸೇತುವೆ ನಿರ್ಮಾಣ

KannadaprabhaNewsNetwork |  
Published : Feb 04, 2026, 04:30 AM IST
Flyover

ಸಾರಾಂಶ

ಐಟಿ-ಬಿಟಿ ಕಂಪನಿಗಳು ಹೆಚ್ಚಾಗಿರುವ ಹೊರ ವರ್ತುಲ ರಸ್ತೆಯ ಇಬ್ಬಲೂರು ಜಂಕ್ಷನ್ ಬಳಿ ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ನೀಲನಕ್ಷೆ ಸಿದ್ಧಪಡಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 ಬೆಂಗಳೂರು :  ಐಟಿ-ಬಿಟಿ ಕಂಪನಿಗಳು ಹೆಚ್ಚಾಗಿರುವ ಹೊರ ವರ್ತುಲ ರಸ್ತೆಯ ಇಬ್ಬಲೂರು ಜಂಕ್ಷನ್ ಬಳಿ ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ನೀಲನಕ್ಷೆ ಸಿದ್ಧಪಡಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹೊರ ವರ್ತುಲ ರಸ್ತೆಯ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್. ಪುರವರೆಗಿನ ರಸ್ತೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಬಿ-ಸ್ಮೈಲ್, ಮೆಟ್ರೋ, ಪೂರ್ವ ಹಾಗೂ ದಕ್ಷಿಣ ಪಾಲಿಕೆಗಳ ಅಧಿಕಾರಿಗಳೊಡನೆ ಮಂಗಳವಾರ ಜಂಟಿ ತಪಾಸಣೆ ನಡೆಸಿ ಮಾತನಾಡಿದ ಅವರು, ಇಬ್ಬಲೂರು ಜಂಕ್ಷನ್ ಬಳಿ ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣ ಮಾಡಿದರೆ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ನೂತನ ತಂತ್ರಜ್ಞಾನ ಬಳಸಿಕೊಂಡು ಕಡಿಮೆ ಅವಧಿಯಲ್ಲಿ ಮೇಲ್ಸೇತುವೆ ನಿರ್ಮಿಸಲು ನೀಲನಕ್ಷೆ ಸಿದ್ಧಪಡಿಸುವಂತೆ ಸೂಚಿಸಿದರು.

ಇಬ್ಬಲೂರು ಜಂಕ್ಷನ್ ಬಳಿ ಸುಮಾರು 800 ಮೀಟರ್ ಉದ್ದದ ಮೇಲ್ಸೇತುವೆ ನಿರ್ಮಿಸುವ ಯೋಜನೆಯ ಅಂದಾಜು ವೆಚ್ಚ, ಕಾಮಗಾರಿ ಪೂರ್ಣಗೊಳ್ಳಲು ಬೇಕಾಗುವ ಅವಧಿ ಹಾಗೂ ನಿರ್ಮಾಣ ಮಾದರಿ ಕುರಿತು ಸಮಗ್ರ ಯೋಜನೆ ರೂಪಿಸಬೇಕು. ದಕ್ಷಿಣ ನಗರ ಪಾಲಿಕೆ ಹಾಗೂ ಮೆಟ್ರೋ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ರಸ್ತೆ ಮೇಲೆ ಎತ್ತರಿಸಿದ ಪಾದಚಾರಿ ಮಾರ್ಗ ನಿರ್ಮಾಣ, ಮಳೆಗಾಲದಲ್ಲಿ ಪ್ರವಾಹ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವುದು ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಕ್ರಮವಹಿಸಬೇಕು ಎಂದು ಆಯುಕ್ತರು ನಿರ್ದೇಶನ ನೀಡಿದರು.

ಮೆಟ್ರೋ ನಿಲ್ದಾಣ ಬಳಿ ರಸ್ತೆ ಸಮತಟ್ಟು ಮಾಡಿ:

ಹೊರ ವರ್ತುಲ ರಸ್ತೆಯಲ್ಲಿನ ಮೆಟ್ರೋ ನಿಲ್ದಾಣಗಳ ಕೆಳಭಾಗದಲ್ಲಿ ರಸ್ತೆ ಸಮತಟ್ಟಾಗಿ ಇಲ್ಲದಿರುವುದನ್ನು ಗಮನಿಸಿದ ಅವರು, ಹೊರ ವರ್ತುಲ ರಸ್ತೆಯ ಎಲ್ಲ ಮೆಟ್ರೋ ನಿಲ್ದಾಣಗಳ ಕೆಳಭಾಗದಲ್ಲಿ ಪರಿಶೀಲಿಸಿ, ಸಮಸ್ಯೆ ಕಂಡುಬಂದ ಸ್ಥಳಗಳಲ್ಲಿ ಕೂಡಲೆ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹೊರ ವರ್ತುಲ ರಸ್ತೆಯಲ್ಲಿ ಪಾಲಿಕೆ ಹಾಗೂ ಸಂಚಾರ ಪೊಲೀಸ್ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಪರಿಶೀಲನೆ ನಡೆಸಿ, ಅಗತ್ಯವಿರುವ ಕಡೆ ಪಾದಚಾರಿ ಮೇಲ್ಸೇತುವೆ ನಿರ್ಮಾಣಕ್ಕೆ ಪಟ್ಟಿ ಸಲ್ಲಿಸಬೇಕು. ಜೊತೆಗೆ ಪಾದಚಾರಿ ಮೇಲ್ಸೇತುವೆಗಳ ವಿನ್ಯಾಸ ಹಾಗೂ ಅಗತ್ಯವಿರುವ ಅನುದಾನದ ಅಂದಾಜು ವಿವರಗಳನ್ನೂ ನೀಡುವಂತೆ ಆಯುಕ್ತರು ನಿರ್ದೇಶನ ನೀಡಿದರು.

ಹೂಡಿ ವೃತ್ತದ ಬಳಿ ಮೇಲ್ಸೇತುವೆ ಕಾಮಗಾರಿ ನಿರ್ಮಾಣ ಮಾಡಲು ತ್ವರಿತವಾಗಿ ಭೂಸ್ವಾಧೀನಪಡಿಸಿಕೊಂಡು ಮೇಲ್ಸೇತುವೆ ಕಾಮಗಾರಿ ಪ್ರಾರಂಭಿಸಲು ಅಧಿಕಾರಿಗಳಿಗೆ ಆಯುಕ್ತ ಮಹೇಶ್ವರ ರಾವ್ ಸೂಚನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಮಹಿಳಾ ಮೀಸಲಿಂದ ರಾಜಕೀಯ ಚಿತ್ರಣವೇ ಬದಲು : ಕುಮಾರಸ್ವಾಮಿ
ಬೀದಿಗಳಲ್ಲಿ ಇಲಿಗಳ ಕಾಟ : ಆರೋಗ್ಯ ಸಮಸ್ಯೆ ಭೀತಿ