ಹಿಂದೂ ವಿರೋಧಿ ಸಿಎಂ ಎಡಪಂಥೀಯರ ಕೈಗೊಂಬೆ: ಕಾಗೇರಿ

KannadaprabhaNewsNetwork |  
Published : Sep 04, 2025, 01:00 AM IST
3ಕೆಡಿವಿಜಿ10, 11-ದಾವಣಗೆರೆಯಲ್ಲಿ ಬುಧವಾರ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಹಿಂದೂಗಳ ಭಾವನೆಗೆ ಧಕ್ಕೆ ತರುವುದೇ ದುರುದ್ದೇಶವಾಗಿರುವ ಎಡಪಂಥೀಯರ ತಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಜೋಡಿಸಿದ್ದು, ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಲು ಕ್ಷಣಕ್ಕೊಂದು ವಿವಾದಗಳನ್ನು ಸೃಷ್ಟಿಸುತ್ತಲೇ ಇದೆ ಎಂದು ಉತ್ತರ ಕನ್ನಡ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.

- ಜಾತಿ ಸಮೀಕ್ಷೆ ಅವಧಿ ಕೇವಲ 15 ದಿನಗಳ ಬದಲು ಕಾಲಮಿತಿಯನ್ನು ಇನ್ನಷ್ಟು ಹೆಚ್ಚಿಸಬೇಕು

- ಕುರುಬ ಕ್ರಿಶ್ಚಿಯನ್‌, ಲಿಂಗಾಯತ ಕ್ರಿಶ್ಚಿಯನ್‌, ಬ್ರಾಹ್ಮಣ ಕ್ರಿಶ್ಚಿಯನ್‌: ಉ.ಕ. ಸಂಸದ ಅಚ್ಚರಿ

- ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಿಲ್ಲೊಂದು ವಿವಾದ ಸೃಷ್ಟಿ: ಆರೋಪ - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಹಿಂದೂಗಳ ಭಾವನೆಗೆ ಧಕ್ಕೆ ತರುವುದೇ ದುರುದ್ದೇಶವಾಗಿರುವ ಎಡಪಂಥೀಯರ ತಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಜೋಡಿಸಿದ್ದು, ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಲು ಕ್ಷಣಕ್ಕೊಂದು ವಿವಾದಗಳನ್ನು ಸೃಷ್ಟಿಸುತ್ತಲೇ ಇದೆ ಎಂದು ಉತ್ತರ ಕನ್ನಡ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆ ತರುವಂತೆ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಎಡಪಂಥೀಯರ ಟೂಲ್‌ ಕಿಟ್‌ನ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಿಲ್ಲೊಂದು ವಿವಾದ ಸೃಷ್ಟಿಸುತ್ತಲೇ ಇದೆ. ಶಬರಿಮಲೈ ವಿವಾದ ಸೃಷ್ಟಿಸಿದಂತೆ ಈಗ ಚಾಮುಂಡಿ ಬೆಟ್ಟ, ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಸೃಷ್ಟಿಸಿ ಹಿಂದೂಗಳ ಭಾವನೆಗೆ ಧಕ್ಕೆ ತರಲಾಗುತ್ತಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರಷ್ಟೇ. ಹಿಂದೆ ಅಧಿಕಾರ ನಡೆಸುತ್ತಿರುವವರು ಎಡಪಂಥೀಯರೇ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಉಳಿಸಿಕೊಳ್ಳಲು ಕುರ್ಚಿ ಬಿಗಿಯಾಗಿ ಹಿಡಿದಿದ್ದಾರೆ. ಆದರೆ, ಆಡಳಿತದಲ್ಲಿ ನಿರಾಸಕ್ತಿ ಹೊಂದಿದ್ದಾರೆ ಎಂದರು.

ಹಿಂದೂಗಳು ಜಾಗೃತಗೊಂಡಿದ್ದು, ಎಡ ಪಂಥೀಯರು ಅಥವಾ ಕಾಂಗ್ರೆಸ್ ಸರ್ಕಾರ ಏನೇ ಹುಳಿ ಹಿಂಡಿದರೂ ಜನ ಅದನ್ನು ಪರಾಮರ್ಶಿಸುತ್ತಾರೆ. ಧರ್ಮಸ್ಥಳ ಚಲೋ ಮೂಲಕ ಈಗಾಗಲೇ ಇದಕ್ಕೆ ಉತ್ತರಿಸಲಾಗಿದೆ. ತಾನೊಬ್ಬ ಜಾತ್ಯತೀತ, ಸಮಾಜವಾದಿ ಎಂಬುದಾಗಿ ಹೇಳಿಕೊಳ್ಳುವ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ನಂತರ ನಡೆಸಿದ ಜಾತಿ ಸಮೀಕ್ಷೆಯಲ್ಲಿ 1400 ಜಾತಿಗಳಲ್ಲಿ ಕುರುಬ ಕ್ರಿಶ್ಚಿಯನ್‌, ಲಿಂಗಾಯತ ಕ್ರಿಶ್ಚಿಯನ್‌, ಬ್ರಾಹ್ಮಣ ಕ್ರಿಶ್ಚಿಯನ್‌ ಎಂಬಂತೆ ಹೊಸ ಜಾತಿಗಳೂ ಸೃಷ್ಟಿಯಾಗಿವೆ. ಈ ಜಾತಿಗಳ ಹೆಸರುಗಳನ್ನು ನಾವು ಕೇಳಿಯೇ ಇಲ್ಲ ಎಂದು ಟೀಕಿಸಿದರು.

ಅನ್ಯ ಧರ್ಮಕ್ಕೆ ಮತಾಂತರ ಆಗುವವರು ಮೂಲಧರ್ಮ ಮತ್ತು ಜಾತಿ ಹೆಸರನ್ನು ಬಿಟ್ಟು, ಆ ಧರ್ಮದ ಹೆಸರನ್ನಷ್ಟೇ ಉಲ್ಲೇಖಿಸಬೇಕು. ಜಾತಿ ಸಮೀಕ್ಷೆಯನ್ನು ಕೇವಲ 15 ದಿನಗಳಲ್ಲಿ ನಡೆಸುವುದಾಗಿ ಹೇಳಿರುವ ಮುಖ್ಯಮಂತ್ರಿ ಅದರ ಕಾಲಮಿತಿ ಹೆಚ್ಚಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಕೇಂದ್ರ ಸರ್ಕಾರದ ಹವಾಮಾನ ಆಧಾರಿತ ಬೆಳೆ ವಿಮೆಯಿಂದಾಗಿ ರೈತರಿಗೆ ಸಾಕಷ್ಟು ಅನುಕೂಲವಾಗಿದೆ. ಆದರೆ, ಪ್ರತಿ ಗ್ರಾ.ಪಂ.ನಲ್ಲಿ ಈಗಾಗಲೇ ಮಳೆಮಾಪನ ಹಾಳಾಗಿದ್ದು, ಮಳೆ ವರದಿ ನೀಡುವುದು ಕಷ್ಟವಾಗುತ್ತದೆ. ಹೀಗಾಗಿ ರೈತರಿಗೆ ಬೆಳೆವಿಮೆ ಸಿಗದಂತಾಗುವ ಸಂಭವವಿದೆ. ಕೂಡಲೇ ರಾಜ್ಯ ಸರ್ಕಾರವು ಪ್ರತಿ ಗ್ರಾಪಂಗೂ ಮಳೆಮಾಪನ ನೀಡಬೇಕು ಎಂದು ಕಾಗೇರಿ ಆಗ್ರಹಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಧನಂಜಯ ಕಡ್ಲೇಬಾಳು, ಅನಿಲಕುಮಾರ ನಾಯ್ಕ, ಎಲ್.ಎನ್.ಕಲ್ಲೇಶ ಇತರರು ಇದ್ದರು.

- - -

(ಕೋಟ್‌) ರಾಜ್ಯ, ರಾಷ್ಟ್ರದಲ್ಲಿ ಮತಗಳ್ಳತನ ಬಾಂಬ್ ಸಿಡಿಸುವುದಾಗಿ ಹೇಳಿದ್ದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಇದೀಗ ‘ಹೈಡ್ರೋಜನ್ ಬಾಂಬ್’ ಸಿಡಿಸುವುದಾಗಿ ಹೇಳಿಕೆ ನೀಡಿದ್ದಾರೆ. ಇದು ರಾಹುಲ್ ಗಾಂಧಿಯ ಅಪ್ರಬುದ್ಧ, ಬಾಲಿಶತನ ಹೇಳಿಕೆ. ರಾಹುಲ್ ಗಾಂಧಿ ತಮ್ಮ ಯಾವುದೇ ದೂರುಗಳಿದ್ದರೂ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು.

- ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ, ಉತ್ತರ ಕನ್ನಡ ಕ್ಷೇತ್ರ.

- - -

-3ಕೆಡಿವಿಜಿ10, 11.ಜೆಪಿಜಿ:

ದಾವಣಗೆರೆಯಲ್ಲಿ ಬುಧವಾರ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾವೂರು ಶ್ರೀ ಗೋಪಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ಸಂಪನ್ನ
ಸಚಿವ ತಿಮ್ಮಾಪುರ ಬೆಂಬಲಿಸಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ