ಇಂದಿನಿಂದ ಎನಿವೇರ್ ನೋಂದಣೆ ವ್ಯವಸ್ಥೆ : ಡಿಸಿ ಮೀನಾ ನಾಗರಾಜ್

KannadaprabhaNewsNetwork | Published : Sep 2, 2024 2:02 AM

ಸಾರಾಂಶ

ಚಿಕ್ಕಮಗಳೂರು, ಜಿಲ್ಲೆಯಲ್ಲಿ ಸೆ. 2 ರಿಂದ ಜಾರಿಗೆ ಬರುತ್ತಿರುವ ಎನಿವೇರ್ ನೋಂದಣಿ ವ್ಯವಸ್ಥೆ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಜಿಲ್ಲೆಯಲ್ಲಿ ಸೆ. 2 ರಿಂದ ಜಾರಿಗೆ ಬರುತ್ತಿರುವ ಎನಿವೇರ್ ನೋಂದಣಿ ವ್ಯವಸ್ಥೆ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

ಪ್ರಸಕ್ತ ಸಾಲಿನ ಆಯವ್ಯಯ ಭಾಷಣದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸ ಲಾಗುವುದೆಂದು ಸರ್ಕಾರದಿಂದ ಘೋಷಿಸಲಾಗಿದೆ. ಈ ವ್ಯವಸ್ಥೆ ಬೆಂಗಳೂರು ನಗರ ಜಿಲ್ಲೆಯಲ್ಲಿ 2011ರಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಕಳೆದ ಮಾರ್ಚ್ ತಿಂಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಎನಿವೇರ್ ನೋಂದಣಿ ವ್ಯವಸ್ಥೆ ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಈ ಕಾರಣದಿಂದ ಎನಿವೇರ್ ನೋಂದಣಿಯನ್ನು ಚಿಕ್ಕಮಗಳೂರು ಜಿಲ್ಲೆಯ ಉಪ ನೋಂದಣಿ ಕಚೇರಿಗಳಿಗೂ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜು ನೋಂದಣಿ ಮಾಡಲು ಅವಕಾಶವಿತ್ತು. ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.ಎನಿವೇರ್ ನೋಂದಣಿ ವ್ಯವಸ್ಥೆ ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆ ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬ ತಡೆಗಟ್ಟುತ್ತದೆ. ಸಮೀಪದ ಉಪ ನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು.ಸ್ಲಾಟ್ ಲಭ್ಯವಿರುವ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯ ಸಹ ಉಳಿಯುತ್ತದೆ. ಉಪ ನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ ಎಂದು ಹೇಳಿದ್ದಾರೆ.

ಪೋಟೋ ಫೈಲ್‌ ನೇಮ್‌ 1 ಕೆಸಿಕೆಎಂ 1

Share this article