
ಮಡಿಕೇರಿ : ಗಡಿಗ್ರಾಮ ಕರಿಕೆಯಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಶೀಘ್ರ ಕ್ರಮ ಕೈಗೊಳ್ಳಬೇಕು, ಕರಿಕೆ- ಭಾಗಮಂಡಲ ರಸ್ತೆಯ ಅಭಿವೃದ್ಧಿ ತ್ವರಿತಗೊಳಿಸಬೇಕು ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಕುರಿತು ಕೊಡಗು ಜಿಲ್ಲಾ ಯೋಜನಾ ಸಮಿತಿ ಸದಸ್ಯ, ಕರಿಕೆ ಗ್ರಾ.ಪಂ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರ ಗಮನ ಸೆಳೆದಿದ್ದಾರೆ.
ಕರಿಕೆ- ಭಾಗಮಂಡಲ ಅಂತರರಾಜ್ಯ ಹೆದ್ದಾರಿಯ 20ಕಿ.ಮೀ. ರಸ್ತೆಯನ್ನು ಅಗಲೀಕರಣ ಮತ್ತು ಮರು ಡಾಂಬರೀಕರಣ ಮಾಡಿ ಅಭಿವೃದ್ಧಿಪಡಿಸಬೇಕು. ಕರಿಕೆ ಗ್ರಾಮದ ಸರ್ಕಾರಿ ಆರೋಗ್ಯ ಉಪಕೇಂದ್ರಕ್ಕೆ ಹೊಸ ಕಟ್ಟಡ ಮಂಜೂರು ಮಾಡಿ ಖಾಯಂ ವೈದ್ಯರನ್ನು ನೇಮಕ ಮಾಡಬೇಕು. ಪಡಿತರ ವಿತರಣೆಯಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಆಗುತ್ತಿರುವ ಸಮಸ್ಯೆಯನ್ನು ಬಗೆಹರಿಸಬೇಕು. ಕಾಡಾನೆ ದಾಳಿಯಿಂದ ಕೃಷಿಕರಿಗೆ ಅಪಾರ ನಷ್ಟವಾಗುತ್ತಿದ್ದು, ಆನೆ ಕಂದಕ ನಿರ್ಮಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಎನ್.ಬಾಲಚಂದ್ರನ್ ನಾಯರ್ ಸಚಿವರು ಹಾಗೂ ಶಾಸಕರ ಗಮನ ಸೆಳೆದರು.