ಆಶಾ ಕಾರ್ಯಕರ್ತೆಯರಿಗೆ ಬಾಕಿ ಇರುವ ಕೇಂದ್ರದ ಪ್ರೋತ್ಸಾಹ ಧನ ಹಾಗೂ ರಾಜ್ಯದ ಗೌರವಧನ ಕೂಡಲೇ ಬಿಡುಗಡೆ ಮಾಡಬೇಕು
ಕೊಪ್ಪಳ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಜಿಲ್ಲಾ ಸಮಿತಿಯಿಂದ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಆಶಾ ಕಾರ್ಯಕರ್ತೆಯರಿಗೆ ಬಾಕಿ ಇರುವ ಕೇಂದ್ರದ ಪ್ರೋತ್ಸಾಹ ಧನ ಹಾಗೂ ರಾಜ್ಯದ ಗೌರವಧನ ಕೂಡಲೇ ಬಿಡುಗಡೆ ಮಾಡಬೇಕು. 9 ವಿಧದ ಆಶಾ ಸೇವೆ ಆಶಾ ನಿಧಿ ತಂತ್ರಾಂಶದಲ್ಲಿ ನಿಷ್ಕ್ರಿಯಗೊಳಿಸಿರುವುದರಿಂದ ತಿಂಗಳಿಗೆ ₹500 ದಿಂದ ₹1000ವರೆಗೆ ಪ್ರೋತ್ಸಾಹಧನ ಕಡಿಮೆಯಾಗುತ್ತಿದ್ದು ಈ ಸೇವೆ ತಕ್ಷಣ ಪುನರಾರಂಭ ಮಾಡಬೇಕು. ಆಶಾ ಕಾರ್ಯಕರ್ತೆಯರಿಗೆ ಕೆಲಸದ ಪ್ರಮಾಣ ಹೆಚ್ಚಿದರೂ ಅದಕ್ಕನುಗುಣವಾಗಿ ಪ್ರೋತ್ಸಾಹಧನ ಮತ್ತು ಗೌರವಧನ ಹೆಚ್ಚಳ ಮಾಡಬೇಕು. ಸೇವಾ ನಿಯಮಾವಳಿ ಸ್ಪಷ್ಟಪಡಿಸಬೇಕು. ಆರೋಗ್ಯ ಸೇವೆಯಲ್ಲಿ ಪ್ರಮುಖ ಪಾತ್ರವಹಿಸುವ ಆಶಾ ಕಾರ್ಯಕರ್ತೆಯರಿಗೆ ಮೂಲಭೂತ ಸೌಲಭ್ಯ, ಭದ್ರತೆ ಮತ್ತು ಗೌರವ ಒದಗಿಸಬೇಕು. ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಪ್ರೋತ್ಸಾಹಧನ ಕಡಿತಗೊಳಿಸದೆ ನಿಯಮಿತವಾಗಿ ಪಾವತಿಸಬೇಕು. ಎಲ್ಲ ಬಾಕಿ ಹಣ ತಕ್ಷಣ ಬಿಡುಗಡೆ ಮಾಡಬೇಕು.ಸೇವಾ ಅವಧಿ ಪರಿಗಣಿಸಿ ಶಾಶ್ವತ ಉದ್ಯೋಗದ ಭದ್ರತೆ ಒದಗಿಸಬೇಕು. ಸಾಮಾಜಿಕ ಭದ್ರತಾ ಯೋಜನೆ ಜಾರಿಗೊಳಿಸಬೇಕು. ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಪರಿಗಣಿಸಿ ಅವರಿಗೆ ಪ್ರೋತ್ಸಾಹಕ ಯೋಜನೆ ಜಾರಿಗೊಳಿಸಬೇಕು ಹಾಗೂ ನ್ಯಾಯಯುತ ಸೌಲಭ್ಯ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಶರಣು ಗಡ್ಡಿ, ಜಿಲ್ಲಾ ಕಾರ್ಯದರ್ಶಿ ಕೌಶಲ್ಯ ದೊಡ್ಡಗೌಡರ್, ಗೌರವಾಧ್ಯಕ್ಷೆ ಶೋಭಾ ಹೂಗಾರ್, ಯಲಬುರ್ಗಾ ತಾಲೂಕು ಮುಖಂಡ ಅನ್ನಪೂರ್ಣ, ಶಿವಮ್ಮ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.