ಕನ್ನಡಪ್ರಭ ವಾರ್ತೆ ಚಾಮರಾಜನಗರ
ಕಾಡಂಚಿನ ಪ್ರದೇಶದಲ್ಲಿ ವಾಸ ಮಾಡುವ ರೈತರಿಗೆ ಕಾಡುಪ್ರಾಣಿಗಳ ಹಾವಳಿಯಿಂದ ಉಂಟಾಗುವ ಬೆಳೆ ನಷ್ಟಕ್ಕೆ ವೈಜ್ಞಾನಿಕವಾಗಿ ಬೆಳೆ ನಷ್ಟ ಭರಿಸಬೇಕು. ಬರಗಾಲದಲ್ಲಿ ಬ್ಯಾಂಕುಗಳು ಸಾಲ ವಸೂಲಾತಿಗೆ ನೋಟಿಸ್ ನೀಡುತ್ತಿರುವುದು ಹಾಗೂ ಹೊಸ ಸಾಲ ನೀಡುವಲ್ಲಿ ವಿಳಂಬ ಮಾಡುತ್ತಿವೆ. ವಿಶೇಷವಾಗಿ ಕರ್ನಾಟಕ ಕಾವೇರಿ ಗ್ರಾಮೀಣ ಬ್ಯಾಂಕ್ ರೈತರಿಗೆ ತೀವ್ರ ಕಿರುಕುಳ ನೀಡುತ್ತಿರುವುದು ಮತ್ತು ಒಟಿಎಸ್ ಮುಖಾಂತರ ರೈತರ ಸಾಲ ತಿರುವಳಿ ಮಾಡಲು ಒಪ್ಪದಿರುವುದು. ಕಳೆದ ಸಾಲಿನಲ್ಲಿ ರೈತರ ಬೆಳೆ ವಿಮೆ ಬಾಕಿ ನಷ್ಟ ಪರಿಹಾರವನ್ನು ವೈಜ್ಞಾನಿಕವಾಗಿ ತಕ್ಷಣ ಕೊಡಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಗ್ರಾಮೀಣ ಭಾಗದ ರೈತರ ಜೀವನಾಡಿಯಾದ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ಗೆ ರು.10 ಹೆಚ್ಚುವರಿ ಪ್ರೋತ್ಸಾಹ ಧನ ನೀಡಲು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡುವುದಾಗಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಎಚ್ಚರಿಸಿದ್ದಾರೆ.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮೂಡಲಪುರ ನಾಗರಾಜು, ಜಿಲ್ಲಾ ಉಪಾಧ್ಯಕ್ಷ ಮಲೆಯೂರು ಪ್ರವೀಣ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಮಲೆಯೂರು ಮಹೇಂದ್ರ, ಸಂಘಟನಾ ಕಾರ್ಯದರ್ಶಿ ಮಲೆಯೂರು ಮಹೇಂದ್ರ, ಉಡಿಗಾಲ ಗ್ರಾಮ ಘಟಕ ಅಧ್ಯಕ್ಷ ಮಂಜುನಾಥ್, ಮಲೆಯೂರು ಬಸವರಾಜಪ್ಪ, ನಂಜುಂಡ ನಾಯಕ, ಶ್ರೀಕಂಠ, ನಂದೀಶ್, ಸುರೇಶ್, ಉಡಿಗಾಲ ಗುರುಮಲ್ಲಪ್ಪ, ಮಂಜು, ಉಡಿಗಾಲ ಚೇರ್ಮನ್ ಗುರು ಹಾಜರಿದ್ದರು.