ನೌಕರರು ಸಂಬಳವನ್ನೇ ನೆಚ್ಚಿಕೊಂಡು ಜೀವನ ನಡೆಸುತ್ತಿದ್ದಾರೆ. ಹಾಗಾಗಿ 7ನೇ ವೇತನವನ್ನು ಜಾರಿಗೊಳಿಸಬೇಕು. ಎನ್ ಪಿಎಸ್ ರದ್ದುಪಡಿಸಿ ಓಪಿಎಸ್ ಜಾರಿಗೊಳಿಸುವುದರಿಂದ ರಾಜ್ಯದ 3 ಲಕ್ಷ ನೌಕರರಿಗೆ ಸಹಾಯಕವಾಗಲಿದೆ.
ಕನ್ನಡಪ್ರಭ ವಾರ್ತೆ ಪಾಂಡವಪುರ
7ನೇ ವೇತನ ಭತ್ಯೆ, ಹಳೆಯ ಪಿಂಚಣಿ ಯೋಜನೆ ಜಾರಿ ಸೇರಿ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಮನವಿ ಸಲ್ಲಿಸಿದರು.
ನಂತರ ಮಾತನಾಡಿದ ನೌಕರ ಸಂಘದ ಅಧ್ಯಕ್ಷ ಡಾ.ಸಿ.ಎ.ಅರವಿಂದ್, ರಾಜ್ಯದಲ್ಲಿ 6 ಲಕ್ಷಕ್ಕೂ ಹೆಚ್ಚು ಸರಕಾರಿ ನೌಕರರಿದ್ದು, ಜನರ ಕಲ್ಯಾಣ, ಅಭಿವೃದ್ಧಿಗಾಗಿ ಸರಕಾರ ಜಾರಿಗೊಳಿಸುವ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಕೆಲಸ ಮಾಡುತ್ತಿದ್ದಾರೆ ಎಂದರು.
ನೌಕರರು ಸಂಬಳವನ್ನೇ ನೆಚ್ಚಿಕೊಂಡು ಜೀವನ ನಡೆಸುತ್ತಿದ್ದಾರೆ. ಹಾಗಾಗಿ 7ನೇ ವೇತನವನ್ನು ಜಾರಿಗೊಳಿಸಬೇಕು. ಎನ್ ಪಿಎಸ್ ರದ್ದುಪಡಿಸಿ ಓಪಿಎಸ್ ಜಾರಿಗೊಳಿಸುವುದರಿಂದ ರಾಜ್ಯದ 3 ಲಕ್ಷ ನೌಕರರಿಗೆ ಸಹಾಯಕವಾಗಲಿದೆ ಎಂದು ತಿಳಿಸಿದರು.
ಪಂಜಾಬ್, ರಾಜಸ್ಥಾನ್, ಛತ್ತೀಸ್ ಘಡ್, ಜಾರ್ಖಂಡ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಓಪಿಎಸ್ ಜಾರಿಯಲ್ಲಿದೆ. ಹಾಗಾಗಿ ರಾಜ್ಯದಲ್ಲಿ ಓಪಿಎಸ್ ಯೋಜನೆ ಜಾರಿಗೊಳಿಸಿ ನೌಕರರ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ನೌಕರರು ಮತ್ತು ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸೆಗಾಗಿ ಮಾಸಿಕ ವಂತಿಗೆ ನೀಡುವ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಿ ವರ್ಷ ಕಳೆದರೂ ಅನುಷ್ಠಾನಗೊಳಿಸಿಲ್ಲ. ಕೂಡಲೇ ಯೋಜನೆ ಅನುಷ್ಠಾನಗೊಳಿಸಬೇಕೆಂದು ಮನವಿ ಮಾಡಿದರು.
ಶಾಸಕರು ನಮ್ಮ ಬೇಡಿಕೆಗಳನ್ನು ಸರಕಾರದ ಗಮನಕ್ಕೆ ತಂದು ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ನಿಮ್ಮೆಲ್ಲ ಬೇಡಿಕೆಗಳ ಬಗ್ಗೆ ಸರ್ಕಾರದ ಜತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.
ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಕರುಣ್, ಖಜಾಂಚಿ ಕೃಷ್ಣೇಗೌಡ, ಮಾಜಿ ಅಧ್ಯಕ್ಷ ವೆಂಕಟೇಶ್, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ವರುಣ್, ನಂದಕುಮಾರ್, ಸೋಮಶೇಖರ್, ಲೋಕೇಶ್, ಬೆಟ್ಟಯ್ಯ, ಮೌಲಿ ಅಲಿ ಸೇರಿ ಹಲವರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.