ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಂಸದರಿಗೆ ಮನವಿ

KannadaprabhaNewsNetwork |  
Published : Jan 18, 2026, 02:45 AM IST
13ಕೆಪಿಎಲ್‌ 02ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತರು ಸಂಸದ ಕೆ. ರಾಜಶೇಖರ್‌ಹಿಟ್ನಾಳ್‌ಗೆ ಮನವಿ ಸಲ್ಲಿಸಿದರು | Kannada Prabha

ಸಾರಾಂಶ

ಕಾರ್ಯನಿರ್ವಹಣೆಗೆ ಅಗತ್ಯವಾದ ಮೊಬೈಲ್ ಸೇರಿದಂತೆ ಇತರೆ ವೆಚ್ಚಗಳಿಗೆ ಪ್ರತ್ಯೇಕ ಭತ್ಯೆ ನೀಡಬೇಕು

ಕೊಪ್ಪಳ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (AIUTUC) ಗೆ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯಕರ್ತರು ಸಂಸದ ಕೆ. ರಾಜಶೇಖರ್‌ಹಿಟ್ನಾಳ್‌ ಅವರಿಗೆ ಮನವಿ ಸಲ್ಲಿಸಿದರು.

ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ತಳಮಟ್ಟದಲ್ಲಿ ಆಶಾ ಕಾರ್ಯಕರ್ತೆಯರು ಅತ್ಯಂತ ಪ್ರಮುಖ ಸೇವೆ ಸಲ್ಲಿಸುತ್ತಿದ್ದಾರೆ. ಗರ್ಭಿಣಿಯರ ಆರೈಕೆ, ಮಕ್ಕಳ ಆರೋಗ್ಯ, ಲಸಿಕೆ ಕಾರ್ಯಕ್ರಮ, ಕುಟುಂಬ ಕಲ್ಯಾಣ ಸೇರಿದಂತೆ ಸರ್ಕಾರದ ಅನೇಕ ಆರೋಗ್ಯ ಯೋಜನೆಗಳನ್ನು ತಳಮಟ್ಟದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಆದರೂ ಅವರಿಗೆ ಸಮರ್ಪಕ ಗೌರವಧನ, ಸಾಮಾಜಿಕ ಭದ್ರತೆ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆ ಇನ್ನೂ ಮುಂದುವರಿದಿದೆ. 2025ನೇ ಸಾಲಿನಿಂದ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ಮಾಸಿಕ ಗೌರವಧನವನ್ನು ₹1500ರಿಂದ ಹೆಚ್ಚಿಸಬೇಕು. ಬಾಕಿ ಉಳಿದಿರುವ ಗೌರವಧನ ಹಾಗೂ ಪ್ರೋತ್ಸಾಹ ಧನವನ್ನು ತಕ್ಷಣ ಪಾವತಿಸಬೇಕು. ಕಾರ್ಯನಿರ್ವಹಣೆಗೆ ಅಗತ್ಯವಾದ ಮೊಬೈಲ್ ಸೇರಿದಂತೆ ಇತರೆ ವೆಚ್ಚಗಳಿಗೆ ಪ್ರತ್ಯೇಕ ಭತ್ಯೆ ನೀಡಬೇಕು. ಆಶಾ ಕಾರ್ಯಕರ್ತೆಯರಿಗೆ ₹5 ಲಕ್ಷ ಜೀವವಿಮಾ ಸೌಲಭ್ಯ ಕಲ್ಪಿಸಬೇಕು ಹಾಗೂ ಅವರನ್ನು ಶಾಶ್ವತ ಆರೋಗ್ಯ ಕಾರ್ಯಕರ್ತೆಯರಾಗಿ ಪರಿಗಣಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಕೇಂದ್ರ ಬಜೆಟ್‌ನಲ್ಲಿ ಕೇಂದ್ರ ಆರೋಗ್ಯ ಸಚಿವ ಕೆ.ಪಿ. ನಡ್ಡಾ ಅವರು ಘೋಷಿಸಿರುವ ಆಶಾ ಕಾರ್ಯಕರ್ತೆಯರಿಗೆ ₹2,500 ರಿಂದ ₹3,000 ವರೆಗೆ ಪ್ರೋತ್ಸಾಹ ಧನ ನೀಡುವ ನಿರ್ಧಾರವನ್ನು ಕೂಡಲೇ ಜಾರಿಗೊಳಿಸಬೇಕು. ಈ ಘೋಷಣೆ ಕಾಗದದಲ್ಲೇ ಉಳಿಯದೆ ತಳಮಟ್ಟದಲ್ಲಿ ಅನುಷ್ಠಾನವಾಗಬೇಕು. ಹೆಚ್ಚುತ್ತಿರುವ ಕೆಲಸದ ಒತ್ತಡದ ಹಿನ್ನೆಲೆ ಆಶಾ ಕಾರ್ಯಕರ್ತೆಯರಿಗೆ ಗೌರವಯುತ ಕೆಲಸದ ಪರಿಸರ, ಸಾಮಾಜಿಕ ಭದ್ರತೆ ಮತ್ತು ನಿವೃತ್ತಿ ಸೌಲಭ್ಯಗಳನ್ನು ಸರ್ಕಾರ ಜಾರಿಗೆ ತರಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಮನವಿ ಸ್ವೀಕರಿಸಿದ ಸಂಸದ ಕೆ. ರಾಜಶೇಖರ್ ಹಿಟ್ನಾಳ್ ಬಳಿಕ ಮಾತನಾಡಿ, ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತ ಬೇಡಿಕೆಗಳ ಕುರಿತು ಕೇಂದ್ರ ಬಜೆಟ್ ಅಧಿವೇಶನ ಸಂದರ್ಭದಲ್ಲಿ ಸರ್ಕಾರದ ಗಮನ ಸೆಳೆದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಶರಣು ಗಡ್ಡಿ, ಜಿಲ್ಲಾ ಕಾರ್ಯದರ್ಶಿ ಕೌಶಲ್ಯ ದೊಡ್ಡ ಗೌಡರ, ಜಿಲ್ಲಾ ಆಶಾ ಮುಖಂಡರಾದ ಶೋಭಾ ಹೂಗಾರ್, ಅನ್ನಪೂರ್ಣ, ಸುನೀತಾ, ಶಾರದಾ, ಶಬಾನಾ, ಲಾಲ್ತಿಪ್ಪಮ್ಮ ಬಿ., ಸುಧಾ, ಶಿವಮ್ಮ, ಲಕ್ಷ್ಮೀ, ಲಲಿತಾ, ಶರಣಮ್ಮ, ಅನ್ನಪೂರ್ಣಾ (ಕುಕುನೂರು), ಸಮೀರಾ, ಸವಿತಾ, ಲಕ್ಷ್ಮೀ ಕಟ್ಟಿಮನಿ ಸೇರಿದಂತೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಕನೂರು ಪಪಂ: ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ವಾಪಸ್‌?
ಹರ್ಡೇಕರ್ ಮಂಜಪ್ಪನವರು ಇಂದಿನ ಪೀಳಿಗೆಗೆ ಮಾದರಿ: ಕೊಟ್ಟೂರು ಬಸವಲಿಂಗ ಶ್ರೀ