ಶಿರಸಿ: 7ನೇ ವೇತನ ಆಯೋಗದಿಂದ ವರದಿ ಶೀಘ್ರ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಘಟಕದ ಸದಸ್ಯರು ನಗರದಲ್ಲಿ ಮಂಗಳವಾರ ಬೈಕ್ ರ್ಯಾಲಿ ನಡೆಸಿ ಶಾಸಕ ಭೀಮಣ್ಣ ನಾಯ್ಕಗೆ ಮನವಿ ಸಲ್ಲಿಸಿದರು.
ಮನವಿಯಲ್ಲಿ ಸರ್ಕಾರ ಈಗಾಗಲೇ ನೀಡಿರುವ ಶೇ. 17% ಮಧ್ಯಂತರ ಪರಿಹಾರ ಭತ್ಯೆಯೂ ಸೇರಿದಂತೆ ಶೇ.40% ಫಿಟ್ಮೆಂಟ್ ಸೌಲಭ್ಯವನ್ನು1-07-2022ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸಬೇಕು. ರಾಜ್ಯದ ಎನ್.ಪಿ. ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗುವದರಿಂದ ಎನ್.ಪಿ.ಎಸ್. ನೌಕರರನ್ನು ಹಳೇ ಪೆನ್ಶನ್ ವ್ಯಾಪ್ತಿಗೆ ತರಬೇಕು. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತಿಸ್ಫಡ, ಜಾರ್ಖಂಡ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೆ ತಂದಿರುವಂತೆ ಹಾಗೂ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ರಾಜ್ಯದಲ್ಲೂ ಜಾರಿಗೆ ತರಬೇಕು ಎಂದು ಆಗ್ರಹಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್ಎಸ್) ಕೂಡಲೇ ಜಾರಿಗೊಳಿಸಬೇಕು.ಈ ಯೋಜನೆಗಳನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕು ಎಂದು ಆಗ್ರಹಿಸಲಾಗಿದೆ.ಸಂಘದ ಪದಾಧಿಕಾರಿಗಳಾದ ವಸಂತ ಎನ್.ನಾಯ್ಕ, ಜಯದೇವ ಎಸ್. ಮತ್ತೂರು, ದಿವಾಕರ ನಾಯ್ಕ, ಧರ್ಮಾನಂದ ಹೆಗಡೆ, ಅಶೋಕ ಎಲ್. ಪಡುವ ಇತರರಿದ್ದರು.