ನವಲಗುಂದ: ಪಟ್ಟಣದ ಇತಿಹಾಸ ಪ್ರಸಿದ್ಧ ಪಂಚಗ್ರಹ ಹಿರೇಮಠದ ನೂತನ ಪೀಠಾಧಿಕಾರಿಗಳ ನೇಮಕ ಕುರಿತು ಎರಡು ಗುಂಪುಗಳ ನಡುವೆ ಉಂಟಾಗಿದ್ದ ಭಿನ್ನಾಭಿಪ್ರಾಯ ಕಾಶಿ ಪೀಠದ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಶ್ರೀಗಳ ಸಾನ್ನಿಧ್ಯದಲ್ಲಿ ಕೊನೆಗೊಂಡಿದೆ. ಎಲ್ಲ ಭಕ್ತರು ಒಂದಾಗಿ ಮೇ 12ರಂದು ನೂತನ ಶ್ರೀಗಳ ಪಟ್ಟಾಧಿಕಾರ ನಡೆಸಲು ತೀರ್ಮಾನಿಸಿದ್ದಾರೆ.
ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ಕಾಶಿ ಜಗದ್ಗುರುಗಳ ಮಾರ್ಗದರ್ಶನದಂತೆ ಎಲ್ಲರೂ ಒಗ್ಗೂಡಿ ಪಂಚಗ್ರಹ ಹಿರೇಮಠಕ್ಕೆ ನೂತನ ಶ್ರೀಗಳನ್ನು ನಿಗದಿಪಡಿಸಿದ ದಿನಾಂಕದಂದು ಪೀಠಾರೋಹಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದರು.
ಇದಕ್ಕೂ ಮೊದಲು ಶಾಸಕ ಎನ್.ಎಚ್. ಕೋನರಡ್ಡಿ, ಮಾಜಿ ಶಾಸಕ ಡಾ. ಆರ್.ಬಿ. ಶಿರಿಯಣ್ಣವರ, ಬಾಪುಗೌಡ ಪಾಟೀಲ, ವಿಜಯ ಕುಲಕರ್ಣಿ ಅವರು ಕಾಶಿ ಜಗದ್ಗುರುಗಳಿಗೆ ದೂರವಾಣಿ ಕರೆ ಮಾಡಿ ಜಗದ್ಗುರುಗಳು ತೆಗೆದುಕೊಂಡ ನಿರ್ಣಯಕ್ಕೆ ಬದ್ದರಾಗಿರುವ ಭರವಸೆ ನೀಡಿದರು.ಪಂಚಗ್ರಹ ಹಿರೇಮಠದ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ವೀರಬಸವ ಶ್ರೀಗಳು, ಕಾಶಿ ಶಾಖಾಮಠದ ಡಾ. ರಾಜಶೇಖರ ಸ್ವಾಮೀಜಿ, ತಹಸೀಲ್ದಾರ್ ಸುಧೀರ ಸಾಹುಕಾರ, ಸಿಪಿಐ ರವಿಕುಮಾರ ಕಪ್ಪತ್ತನವರ, ಹಿರಿಯರಾದ ಅಂದಾನಯ್ಯ ಹಿರೇಮಠ, ಅಣ್ಣಪ್ಪ ಬಾಗಿ, ಬಂಗಾರೇಶ ಹಿರೇಮಠ, ಪಾಂಡಪ್ಪ ಕೋನರಡ್ಡಿ, ಸಿದ್ದಲಿಂಗಯ್ಯ ಹಿರೇಮಠ, ಯಲ್ಲಪ್ಪ ಭೋವಿ, ಶ್ರೀಶೈಲ ಮೂಲಿಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.