ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆ ಬಂದ್ ಮಾಡಿ ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಾಕಾರರು, ಟೈರ್ಗೆ ಬೆಂಕಿ ಹಚ್ಚಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಬಿ. ನಾಗೇಂದ್ರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಟಿಜಿಟಿ ಮಳೆಯ ನಡುವೆಯೂ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಕಿತ್ತೂರು ಕ್ಷೇತ್ರದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡ ಹಾಗೂ ಲಕ್ಷ್ಮೀ ಇನಾಂದಾರ್ ನೇತೃತ್ವದಲ್ಲಿ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಮಾತನಾಡಿದ ಲಕ್ಷ್ಮೀ ಇನಾಮದಾರ್, ನಾಗೇಂದ್ರ ರಾಜೀನಾಮೆ ನೀಡುವವರೆಗೆ ರಾಜ್ಯಾದ್ಯಂತ ಬಿಜೆಪಿ ಹೋರಾಟ ತೀವ್ರಗೊಳ್ಳಲಿದೆ. ಕಳೆದ ಆರು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದ ಆರೋಪಗಳ ಹಿನ್ನೆಲೆಯಲ್ಲಿ ನಾಗೇಂದ್ರ ಕೂಡಲೇ ರಾಜೀನಾಮೆ ನೀಡಬೇಕು. ರೈತರ ಬೆಳೆ ಪರಿಹಾರ, ಮಾಸಾಶನ ಸೇರಿದಂತೆ ಸಾರ್ವಜನಿಕರ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು.