ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿ ಕೇಂದ್ರ ಸರ್ಕಾರ ಹಾಗೂ ಪೊಲೀಸರ ದೌರ್ಜನ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೇಶದ ಯುವಜನತೆಯ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಲಾಯಿತು. ನೀಟ್ ಪರೀಕ್ಷಾ ಅಕ್ರಮದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಲಾಯಿತು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರು ಮಾತನಾಡಿ, ದೆಹಲಿಯಲ್ಲಿ ವಿದ್ಯಾರ್ಥಿಗಳ ಪರ ಹೋರಾಟ ನಡೆಸುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ದೆಹಲಿ ಪೊಲೀಸರು ಬಂಧಿಸಿರುವುದು ಖಂಡನೀಯ. ಈ ನಡೆ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ. ನ್ಯಾಯಯುತವಾಗಿ ಹಕ್ಕುಗಳಿಗಾಗಿ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರ ಅಮಾನುಷವಾಗಿ ಲಾಠಿ ಪ್ರಹಾರ ನಡೆಸಿ ಅವರ ಧ್ವನಿಯನ್ನು ಹತ್ತಿಕ್ಕಲು ಯತ್ನಿಸಿದೆ. ಈಗ ವಿದ್ಯಾರ್ಥಿಗಳ ಪರವಾಗಿ ಬೆಂಬಲಕ್ಕೆ ನಿಂತ ಪ್ರತಿಪಕ್ಷ ನಾಯಕರನ್ನು ಪೊಲೀಸ್ ಬಲಪ್ರಯೋಗದ ಮೂಲಕ ಮೌನಗೊಳಿಸಲು ಹೊರಟಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.ದೇಶವ್ಯಾಪಿ ಈ ಘಟನೆಯನ್ನು ಖಂಡಿಸಿ ಇಂದು ಪ್ರತಿಭಟನೆ ಮಾಡಲಾಗುತ್ತಿದೆ. ಪ್ರತಿಭಟನೆ ಸಂದರ್ಭ ಕಾಂತ್ರಿಕಾರಿ ಬೆಳವಣಿಗೆ ನಡೆದರು ಕೂಡ ಕೇಂದ್ರ ಸರ್ಕಾರ ಅದನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ. ಈ ಹಿನ್ನೆಲೆ ರಾಜ್ಯ, ಜಿಲ್ಲಾ, ಹೋಬಳಿ ಮಟ್ಟದಲ್ಲಿ ಕಾಂತ್ರಿಕಾರಿಯಾಗಿ ಆಂದೋಲನ ಆಗಬೇಕಾಗಿದೆ ಎಂದರು.
ಬಂಧನಕ್ಕೊಳಗಾಗಿರುವ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಎಲ್ಲ ವಿದ್ಯಾರ್ಥಿ ನಾಯಕರನ್ನು ತಕ್ಷಣವೇ ಬೇಷರತ್ತಾಗಿ ಬಿಡುಗಡೆ ಮಾಡಬೇಕು. ಈ ಘಟನೆಯ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಅವರು, ನಾವು ಕೂಡ ರಸ್ತೆ ತಡೆ ನಡೆಸಿ ಜೈಲು ಬರೋ ಚಳುವಳಿಗೆ ಸನ್ನದ್ಧರಾಗಿದ್ದೇವೆ ಎಂದರು.
ದೇಶದ ಯುವಜನತೆಯ ಭವಿಷ್ಯದ ಜೊತೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ಇಂತಹ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದ ಪತ್ರಿಭಟನಾ ನಿರತರು ಇಂದಿರಗಾಂಧಿ ವೃತ್ತದಲ್ಲಿ ರಸ್ತೆತಡೆ ನಡೆಸಲು ಮುಂದಾದರು. ಈ ಸಂದರ್ಭ ಬಿಗಿ ಪೊಲೀಸ್ ಬಂದೋಬಸ್ತ್ನೊಂದಿಗೆ ಸಜ್ಜಾಗಿದ್ದ ಪೊಲೀಸ್ ಇಲಾಖೆ ಪ್ರತಿಭಟನಾ ನಿರತರನ್ನು ವಶಪಡಿಸಿಕೊಂಡರು. ಎರಡು ಮಿನಿ ಪೊಲೀಸ್ ವಾಹನ ಮತ್ತು ೨ ಪೊಲೀಸ್ ಜೀಪ್ಗಳನ್ನು ಬಳಸಿ ಪ್ರತಿಭಟನಾ ನಿರತರನ್ನು ನಗರದ ಮೈತ್ರಿಹಾಲ್ಗೆ ಕರೆದೊಯ್ದು ಬಿಡುಗಡೆಗೊಳಿಸಿದರು.