ಕಂಪ್ಲಿ: ತಂದೆ-ತಾಯಿ ನೀಡುವ ಸಂಸ್ಕಾರ ಹಾಗೂ ಗುರುಗಳು ಬೋಧಿಸುವ ವಿದ್ಯೆ ವ್ಯಕ್ತಿಯ ಜೀವನದ ಅತ್ಯಮೂಲ್ಯ ಸಂಪತ್ತಾಗಿದ್ದು, ಅದನ್ನು ಸದುಪಯೋಗಪಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯ ಎಂದು ಶಿಕಾರಿ ರಾಮು ಹೇಳಿದರು.
ವಿದ್ಯಾರ್ಥಿನಿಯರಲ್ಲಿ ಅಡಗಿರುವ ಕಲಾ ಪ್ರತಿಭೆಯನ್ನು ಹೊರತರುವಲ್ಲಿ ಇಂತಹ ತರಬೇತಿ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತವೆ. ಸಂಗೀತ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದ್ದು, ವಿದ್ಯಾರ್ಥಿನಿಯರು ದೊರೆಯುವ ಪ್ರತಿಯೊಂದು ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ವಸತಿ ನಿಲಯದ ಪಾಲಕ ವಿರೂಪಾಕ್ಷ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸ್ಪಷ್ಟವಾಗಿ ನಿಗದಿಪಡಿಸಿಕೊಂಡು ಶಿಸ್ತು ಮತ್ತು ಪರಿಶ್ರಮದಿಂದ ಸಾಧನೆ ಮಾಡಬೇಕು. ಪ್ರತಿಭೆಗೆ ಸೂಕ್ತ ವೇದಿಕೆ ದೊರೆತಾಗ ಅದನ್ನು ಸಮರ್ಥವಾಗಿ ಬಳಸಿಕೊಂಡರೆ ಶಾಲೆ, ಕುಟುಂಬ ಹಾಗೂ ಸಮಾಜಕ್ಕೆ ಕೀರ್ತಿ ತರುವ ಅವಕಾಶ ಸಿಗುತ್ತದೆ. ನಮ್ಮ ವಿದ್ಯಾರ್ಥಿ ನಿಲಯದಲ್ಲಿ ಈ ತರಬೇತಿ ಕಾರ್ಯಕ್ರಮ ಆಯೋಜಿಸಿರುವುದು ಹೆಮ್ಮೆಯ ವಿಷಯವಾಗಿದ್ದು, ಇದಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅಭಿನಂದನೆ ಸಲ್ಲಿಸಿದರು.ಶೈಲಾ ದೇವರುಮನಿ ಮಾತನಾಡಿ, ಆರು ತಿಂಗಳ ಕಾಲ ನಡೆಯುವ ಈ ಸುಗಮ ಸಂಗೀತ ತರಬೇತಿಯು ವಿದ್ಯಾರ್ಥಿನಿಯರಿಗೆ ಕಲೆಯನ್ನು ಕಲಿಯುವ ಅಪೂರ್ವ ಅವಕಾಶವಾಗಿದೆ. ತರಬೇತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.