ಕನ್ನಡಪ್ರಭ ವಾರ್ತೆ ಹಲಗೂರು
ಹಂಡನಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಸಿದ್ಧಿ ವಿನಾಯಕ ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮಗಳಲ್ಲಿ ಶುಭ ಕಾರ್ಯಗಳು, ದೇವರ ಕಾರ್ಯಗಳು ರಾಜಕೀಯ ಮೀರಿ ನಡೆಯಬೇಕು. ಹಳ್ಳಿ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ರಾಜಕೀಯ ಬೆರೆಸಬಾರದು ಎಂದರು.
ನಮ್ಮ ಬಾಲ್ಯದ ಬಗ್ಗೆ ನೆನೆಪು ಮಾಡಿಕೊಂಡರೆ ಈಗಲೂ ಭಾವುಕನಾಗಿದ್ದೇನೆ. ಈ ಹಿಂದೆ ಯಾವುದೇ ಸೌಲಭ್ಯ ಇರಲಿಲ್ಲ, ತಾಂತ್ರಿಕತೆ ಅನುಕೂಲಗಳು ಕಡಿಮೆ ಇದ್ದವು. ಆಗ ಎಲ್ಲರೂ ಪರಸ್ವರ ಅನ್ಯೋನ್ಯತೆ, ಪ್ರೀತಿ ವಿಶ್ವಾಸದಿಂದ ಬದುಕುತ್ತಿದ್ದರು. ಅಂತಹ ವಾತಾವರಣ ಇಲ್ಲವಾಗಿದೆ. ನಾವು ಸಂಕುಚಿತರಾಗುತ್ತಿದ್ದೇವೆ ಎಂದು ವಿಷಾದಿಸಿದರು.ಹಿಂದಿನ ದಿನಗಳಲ್ಲಿ ಯಾರ ಮನೆಯಲ್ಲಾದರೂ ಮದುವೆ ನಡೆದರೆ ಇಡೀ ಊರಿಗೆ ಊರೇ ನೆರೆದಿರುತ್ತಿತ್ತು. ಸೌದೆ ಒಡೆಯುವುದರಿಂದ ಮೊದಲುಗೊಂಡು ಚಪ್ಪರ ಹಾಕುವುದು, ಅಡುಗೆ ಮಾಡುವುದು, ಬಡಿಸುವುದು ಎಲ್ಲವನ್ನೂ ಊರಿನ ಜನರೇ ಮಾಡುತ್ತಿದ್ದರು. ಪಂಕ್ತಿಯಲ್ಲಿ ಕೂತು ಬೂಂದಿ ಪಾಯಸ ಸವಿಯುತ್ತಿದ್ದ ದಿನಗಳು ನನಗೆ ಇನ್ನೂ ನೆನಪಿವೆ ಎಂದರು.ಇಂದು ಗ್ರಾಮಗಳಲ್ಲಿ ಒಗ್ಗಟ್ಟು ಮುಖ್ಯ. ಯುವಕರಲ್ಲಿ ನನ್ನದೊಂದು ಮನವಿ ನೀವು ಯಾವುದೇ ಕುಟುಂಬದ ಸಮಸ್ಯೆಗಳಿಗೆ ಸ್ವ ಇಚ್ಛೆಯಿಂದ ಸ್ಪಂದಿಸಿ ಬಗೆಹರಿಸಲು ಕೈಜೋಡಿಸಿ. ಭಗವಂತ ನೀಡಿರುವ ಈ ಜೀವನವನ್ನು ಪ್ರಾಮಾಣಿಕತೆಯಿಂದ ಸರಿಪಡಿಸಿಕೊಳ್ಳೋಣ ಎಂದರು.
ಮಂಡ್ಯ ಜಿಲ್ಲೆಯ ಜನತೆ ನನ್ನ ಮೇಲೆ ಅಪಾರವಾಗಿ ವಿಶ್ವಾಸ ಇಟ್ಟುಕೊಂಡು ನಂಬಿಕೆಯಿಂದ ನನ್ನನ್ನು ಚುನಾವಣೆಯಲ್ಲಿ ಗೆಲ್ಲಿಸಿ ಹಾರೈಸಿದ್ದಾರೆ. ನಿಮ್ಮ ಋಣ ನನ್ನ ಮೇಲೆ ಇದೆ. ನಿಮ್ಮ ಋಣ ತೀರಿಸುವ ನಿಟ್ಟಿನಲ್ಲಿ ನಾನು ಕರ್ತವ್ಯ ನಿರ್ವಹಿಸುತ್ತೇನೆ ಎಂದರು.
ಈಗಿನ ಪರಿಸ್ಥಿತಿಯಲ್ಲಿ ದೇಶದಲ್ಲಿ ಹಲವು ಸಮಸ್ಯೆಗಳಿದ್ದರೂ ನಮ್ಮ ಜಿಲ್ಲೆಗೆ ಒಂದು ಕಾರ್ಖಾನೆಯನ್ನು ತಂದು ನಿರುದ್ಯೋಗ ಸಮಸ್ಯೆ ನಿವಾರಿಸಿ ಯುವಕರ ಸಮಸ್ಯೆ ಸರಿಪಡಿಸಬೇಕೆಂಬ ಯೋಜನೆ ಹಾಕಿಕೊಂಡಿದ್ದೇನೆ. ಅದಕ್ಕೆ ಸ್ವಲ್ಪ ಸಮಯಬೇಕು, ಸರ್ಕಾರದ ಬೆಂಬಲವೂ ಬೇಕು ಎಂದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ಅಪಾರ ಅಭಿಮಾನಿಗಳು ಈ ಗ್ರಾಮದಲ್ಲಿದ್ದಾರೆ. ನಮ್ಮ ಪಕ್ಷಕ್ಕೆ ನಿಷ್ಠೆಯಿಂದ ದುಡಿಯುತ್ತಿರುವ ಈ ಗ್ರಾಮವನ್ನು ಎಂದಿಗೂ ನಾವು ಮರೆಯುವುದಿಲ್ಲ. ಇಲ್ಲಿ ವಾಸಿಸುವರಲ್ಲಿ ಎಲ್ಲರಲ್ಲೂ ಸಾಮರಸ್ಯ, ತಾಳ್ಮೆ, ಹೊಂದಾಣಿಕೆ ಇರುವುದರಿಂದ ನೂತನ ದೇವಸ್ಥಾನ ನಿರ್ಮಾಣವಾಗಲು ಸಾಧ್ಯವಾಗಿದೆ ಎಂದರು.