ಕನ್ನಡಪ್ರಭ ವಾರ್ತೆ ರಾಮನಾಥಪುರ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಮಾಡಿಕೊಂಡು ಬರಲಾಗುತ್ತಿದೆ ಎಂದು ರಾಮನಾಥಪುರ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಎಚ್.ಎಸ್. ಶಂಕರ್ ತಿಳಿಸಿದರು.ರಾಮನಾಥಪುರದ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ವತಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಪ್ರಗತಿ ಬಂಧು ಸ್ವ- ಸಹಾಯ ಸಂಘಗಳ ಒಕ್ಕೂಟದಿಂದ ರಾಮನಾಥಪುರ ವಲಯ ಹಾಗೂ ಪ್ರಸನ್ನ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಡೆದ ಗ್ರಾಮ ಸುಭೀಕ್ಷಾ ಕಾರ್ಯಕ್ರಮ ಹಾಗೂ ಆಶ್ಲೇಷ ಬಲಿ ಹೋಮ ಕಾರ್ಯಕ್ರಮದ ನಂತರ ಅವರು ಮಾತನಾಡಿದರು.ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಾಗೂ ಶ್ರೀಗಳ ಕೃಪಾಶೀರ್ವಾದದಿಂದ ಶಿಕ್ಷಣ ಕ್ಷೇತ್ರದಲ್ಲಿ ಹಿರಿಯ ಪ್ರಾಥಮಿಕ, ಪೌಢಶಾಲೆಗಳಿಗೆ ಬೇಕಾದ ಪೀಠೋಪಕರಣಗಳ ಸವಲತ್ತುಗಳು, ಸ್ವ- ಸಹಾಯ ಸಂಘಗಳಿಗೆ ಸವಲತ್ತು, ಶಿಥಿಲವಾದ ನೂರಾರು ದೇವಾಲಯಗಳ ಜೀರ್ಣೋದ್ಧಾರ, ಸುಮಾರು 50ಕ್ಕೂ ಹೆಚ್ಚು ಹಾಲು ಉತ್ಪಾದಕರ ಸಂಘಗಳು, ರುದ್ರಭೂಮಿಗಳ ಅಭಿವೃದ್ಧಿ, ನದಿ, ಕೆರೆ- ಕಟ್ಟೆ, ದೇವಾಲಯಗಳ ಸುತ್ತಮುತ್ತಲಿನ ಸ್ವಚ್ಛತೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಗ್ರಾಮಾಭಿವೃದ್ಧಿ ಯೋಜನೆ ಮಾಡಿಕೊಂಡು ಬರುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ರಾಪಂ ಅಧ್ಯಕ್ಷ ಪವನ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಪಾರುಪತ್ತೇದಾರ್ ರಮೇಶ್ ಭಟ್, ಬಸವಾಪಟ್ಟಣ ಗ್ರಾಪಂ ಮಾಜಿ ಅಧ್ಯಕ್ಷ ಮಹೇಂದ್ರಕುಮಾರ್, ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಎನ್. ಕುಮಾರಸ್ವಾಮಿ, ಪರಿಷತ್ತಿನ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಆರ್.ಕೆ. ಶ್ರೀನಿವಾಸ್, ಗ್ರಾಪಂ ಸದಸ್ಯ ಸಿದ್ದರಾಜು, ರಾಮನಾಥಪುರ ವಲಯದ ಮೇಲ್ವಿಚಾರಕಿ ಹೇಮಲತಾ, ಗಂಗೂರು ಮಂಜು ಮುಂತಾದವರು ಉಪಸ್ಥಿತರಿದ್ದರು.