ಕೇಳಿದ್ದು 237 ಕೊಠಡಿ ಸರ್ಕಾರ ಕೊಟ್ಟಿದ್ದು ಒಂದು ಕೊಠಡಿ

KannadaprabhaNewsNetwork |  
Published : Dec 19, 2025, 02:45 AM IST
ಹೂವಿನಹಡಗಲಿಯ ಶಾಸಕ ಕೃಷ್ಣನಾಯ್ಕ ಸದನದಲ್ಲಿ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ಹೂವಿನಹಡಗಲಿ ತಾಲೂಕಿನ 650 ಶಾಲೆಗಳು ಮಳೆ ಬಂದಾಗ ಸೋರುತ್ತಿವೆ. ಅದಕ್ಕಾಗಿ ಸರ್ಕಾರಕ್ಕೆ 237 ಕೊಠಡಿಗಳನ್ನು ಕೇಳಿದರ ಕೇವಲ 1 ಕೊಠಡಿ ಮಂಜೂರು ಮಾಡಿದೆ ಎಂದು ಶಾಸಕ ಕೃಷ್ಣನಾಯ್ಕ ಬೆಳಗಾವಿ ಅಧಿವೇಶನದಲ್ಲಿ ಕ್ಷೇತ್ರದ ಸಮಸ್ಯೆ ಅನಾವರಣ ಮಾಡಿದರು.

ಹೂವಿನಹಡಗಲಿ: ಹೂವಿನಹಡಗಲಿ ಮೀಸಲು ವಿಧಾನಸಭಾ ಕ್ಷೇತ್ರದ 189 ಸರ್ಕಾರಿ ಶಾಲೆಗಳಲ್ಲಿ 25 ಸಾವಿರಕ್ಕೂ ಅಧಿಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ, ಆದರೆ, ಆ ಶಾಲೆಗಳಲ್ಲಿ ಮೂಲಸೌಲಭ್ಯಗಳೇ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳು ಹೇಗೆ ಅಭ್ಯಾಸ ಮಾಡಬೇಕು ಎಂದು ಶಾಸಕ ಕೃಷ್ಣನಾಯ್ಕ ಬೆಳಗಾವಿ ಅಧಿವೇಶನದಲ್ಲಿ ಕ್ಷೇತ್ರದ ಸಮಸ್ಯೆ ಅನಾವರಣ ಮಾಡಿದರು.

ತಾಲೂಕಿನ 650 ಶಾಲೆಗಳು ಮಳೆ ಬಂದಾಗ ಸೋರುತ್ತಿವೆ. ಅದಕ್ಕಾಗಿ ಸರ್ಕಾರಕ್ಕೆ 237 ಕೊಠಡಿಗಳನ್ನು ಕೇಳಿದರ ಕೇವಲ 1 ಕೊಠಡಿ ಮಂಜೂರು ಮಾಡಿದೆ. ಶಾಲೆಗಳಲ್ಲಿ ಶೌಚಾಲಯವಿಲ್ಲ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಶಾಲಾ ಆವರಣದಲ್ಲಿ ನಿಂತು ಬಿಸಿಯೂಟ ಮಾಡುವ ಪರಿಸ್ಥಿತಿ ಇದೆ. ಜ್ವಲಂತ ಸಮಸ್ಯೆಗಳ ಮಧ್ಯೆ ಶಾಲೆಗಳಲ್ಲಿ ಕಲಿಕಾ ವಾತವರಣ ಹೇಗೆ ಸೃಷ್ಟಿಯಾಗುತ್ತದೆ. ಈ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಕ್ಷೇತ್ರದಲ್ಲಿ 84 ಸಾವಿರ ಹೆಕ್ಟೇರ್‌ ಕೃಷಿ ಭೂಮಿ ಇದೆ. ಇದರಲ್ಲಿ 32 ಸಾವಿರ ಹೆಕ್ಟೇರ್‌ ಪ್ರದೇಶ ನೀರಾವರಿ ಸೌಲಭ್ಯ ಹೊಂದಿದೆ. ಸಣ್ಣ ನೀರಾವರಿ ಇಲಾಖೆಯ ಏತ ನೀರಾವರಿ ಯೋಜನೆಗಳಿಂದ 2685 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶ ಹೊಂದಿದೆ. ಇದರಲ್ಲಿ 355 ಹೆಕ್ಟೇರ್‌ ಪ್ರದೇಶಕ್ಕೆ ಮಾತ್ರ ನೀರುಣಿಸಲಾಗುತ್ತಿದೆ. ಕುಡುಗೋಲು ಮಟ್ಟಿ ಏತ ನೀರಾವರಿ ಯೋಜನೆಗೆ ದಶಕದಿಂದ ಅರೆಬರೆ ಕಾಮಗಾರಿ ಆಗಿದೆ. ಕ್ಷೇತ್ರದ ಬನ್ನಿಕಲ್ಲು, ಹಿರೇಮಲ್ಲನಕೆರೆ, ತಳಕಲ್ಲು ಕೆರೆಗಳ ನೀರು ತಿಂಬಿಸುವ ಯೋಜನೆಯ ಪೈಪ್‌ಲೈನ್‌ ಸೋರುತ್ತಿದೆ. ಇದಕ್ಕೆ ಪ್ರತ್ಯೇಕ ಪೈಪ್‌ಲೈನ್‌ ಮಾಡುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ, ಗಮನ ಹರಿಸುತ್ತಿಲ್ಲ ಎಂದು ಹೇಳಿದರು.

ಕ್ಷೇತ್ರದಲ್ಲಿ 158 ಕಿ.ಮೀ ರಸ್ತೆ ಗುಂಡಿಗಳಿಂದ ತುಂಬಿದೆ. ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಕಾಡುತ್ತಿವೆ, ಆ್ಯಂಬುಲೆನ್ಸ್ ಇಲ್ಲ, ಮೂಲ ಸೌಕರ್ಯ ಕೊರತೆ ಇದೆ.ಕ್ಷೇತ್ರದ ಹುಲಿಗುಡ್ಡದ ಬಳಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಇರುವ ಜಾಗದಲ್ಲಿ ಎರಡು ಹಾಸ್ಟೆಲ್ ತೆರೆಯಲು ಅವಕಾಶವಿದೆ. ಆದರೆ ನನ್ನ ಕ್ಷೇತ್ರದಲ್ಲಿ ತಾಂತ್ರಿಕ ಕಾಲೇಜು ಇಲ್ಲ ಎಂದು ತಪ್ಪು ಮಾಹಿತಿ ನೀಡಿ, ಹಾಸ್ಟೆಲ್ ವರ್ಗಾಯಿಸಲಾಗಿದೆ. ಇದರಿಂದಾಗಿ 76 ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

ಮಾಗಳ-ಕಲ್ಲಾಗನೂರು ಸೇತುವೆ ನಿರ್ಮಾಣಕ್ಕೆ ಶೀಘ್ರ ಚಾಲನೆ ಕೊಡಿ, ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗಾಗಿ ಕಾರ್ಖಾನೆಗಳ ಅಗತ್ಯವಿದೆ. ಮಾಜಿ ಡಿಸಿಎಂ ದಿ. ಎಂ.ಪಿ. ಪ್ರಕಾಶ್ ಅವರು ರೂಪಿಸಿದ್ದ, ಪೊಲೀಸ್ ತರಬೇತಿ ಶಾಲೆ ತೆರೆಯುವ ಯೋಜನೆಗೆ ಚಾಲನೆ ನೀಡಬೇಕು ಎಂದು ಒತ್ತಾಯಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು