21ರಿಂದ ಎಎಸ್‌ಎಂ ಕಾಲೇಜಿನ ಸುವರ್ಣ ಮಹೋತ್ಸವ ಸಂಭ್ರಮ

KannadaprabhaNewsNetwork |  
Published : Sep 19, 2026, 02:00 AM IST
ಸಸಸಸ | Kannada Prabha

ಸಾರಾಂಶ

ಮಹಿಳೆಯರಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮಹತ್ವದ ಕೊಡುಗೆ ನೀಡುತ್ತಾ ಬಂದಿರುವ ವಿದ್ಯಾಲಯ ಐದು ದಶಕಗಳ ಸಾರ್ಥಕ ಹೆಜ್ಜೆಯನ್ನಿರಿಸಿದೆ.

ಬಳ್ಳಾರಿ: ವೀರಶೈವ ವಿದ್ಯಾವರ್ಧಕ ಸಂಘದ ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಕಾಲೇಜಿನ (ಎಎಸ್‌ಎಂ) ಸುವರ್ಣ ಮಹೋತ್ಸವ ಸಂಭ್ರಮ ಸೆ. 21 ಮತ್ತು 22 ರಂದು ಕಾಲೇಜಿನ ತೊಗರಿ ವೀರಪ್ಪನವರ ದತ್ತಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೀವಿ ಸಂಘದ ಖಜಾಂಚಿ ಬೈಲುವದ್ದಿಗೇರಿ ಎರಿಸ್ವಾಮಿ ಹಾಗೂ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷೆ ಕ್ಯಾತ್ಯಾಯಿನಿ ವಿ.ಎಸ್.ಮರಿದೇವಯ್ಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾಡಿನ ಹೆಮ್ಮೆಯ ಶಿಕ್ಷಣ ಸಂಸ್ಥೆಯಾದ ವೀರಶೈವ ವಿದ್ಯಾವರ್ಧಕ ಸಂಘವು ಮಹಾದಾನಿ ಅಲ್ಲಂ ಸುಮಂಗಳಮ್ಮ ಸ್ಮರಣಾರ್ಥ ನಿರ್ಮಿಸಿರುವ ಮಹಿಳಾ ಮಹಾವಿದ್ಯಾಲಯವು 50 ವರ್ಷ ಯಶಸ್ವಿಯಾಗಿ ಪೂರೈಸಿದೆ. 164 ವಿದ್ಯಾರ್ಥಿಗಳಿಂದ ಶುರುಗೊಂಡ ಕಾಲೇಜು ಇದೀಗ 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಬೃಹತ್ ಸಂಸ್ಥೆಯಾಗಿ ಬೆಳೆದಿದೆ. ಮಹಿಳೆಯರಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮಹತ್ವದ ಕೊಡುಗೆ ನೀಡುತ್ತಾ ಬಂದಿರುವ ವಿದ್ಯಾಲಯ ಐದು ದಶಕಗಳ ಸಾರ್ಥಕ ಹೆಜ್ಜೆಯನ್ನಿರಿಸಿದೆ.

ಎಎಸ್‌ಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರತಿವರ್ಷ ವಿಶ್ವವಿದ್ಯಾಲಯದ ರ್ಯಾಂಕ್‌ಗಳನ್ನು ಪಡೆಯುತ್ತಿದ್ದು, ಕಳೆದ ಐದು ವರ್ಷಗಳಲ್ಲಿ 69 ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ರ್ಯಾಂಕ್ ಪಡೆದಿದ್ದಾರೆ. ವರ್ಷದಿಂದ ವರ್ಷಕ್ಕೆ ಶೈಕ್ಷಣಿಕ ಗುಣಮಟ್ಟಕ್ಕೆ ಆದ್ಯತೆ ನೀಡುತ್ತಲೇ ಬರಲಾಗಿದೆ. ವೀವಿ ಸಂಘದ ಹೆಮ್ಮೆಯ ಶಿಕ್ಷಣ ಸಂಸ್ಥೆಯಾದ ಅಲ್ಲಂ ಸುಮಂಗಳಮ್ಮ ಮಹಿಳಾ ಮಹಾವಿದ್ಯಾಲಯದ ಐದು ದಶಕಗಳ ಸಾರ್ಥಕ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸುವರ್ಣ ಸಂಭ್ರಮ ಕಾರ್ಯಕ್ರಮದ ಸಾನ್ನಿಧ್ಯ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹಾಗೂ ಎಮ್ಮಿಗನೂರು ಗುರುಮಹಾಂತರ ಸಂಸ್ಥಾನಮಠದ ಶ್ರೀ ಗುರು ವಾಮದೇವ ಮಹಾಂತ ಶಿವಾಚಾರ್ಯ ಸ್ವಾಮಿಗಳು ವಹಿಸುವರು. ಸಂಸದ ಈ.ತುಕಾರಾಂ ಉದ್ಘಾಟಿಸುವರು. ವೀವಿ ಸಂಘದ ಅಧ್ಯಕ್ಷ ಡಾ. ಕಣೇಕಲ್ ಮಹಾಂತೇಶ್ ವಹಿಸುವರು. ವಿಜಯಪುರ ಅಕ್ಕಮಹಾದೇವಿ ವಿವಿ ಕುಲಪತಿ ಪ್ರೊ. ವಿಜಯಾ ಬಿ.ಕೋರಿಶೆಟ್ಟಿ, ಬೆಂಗಳೂರು ಜಯದೇವ ಆಸ್ಪತ್ರೆಯ ಮಕ್ಕಳ ಹೃದ್ರೋಗ ತಜ್ಞೆ ಡಾ. ವಿಜಯಲಕ್ಷ್ಮಿ ಬಾಳೆಕುದ್ರಿ, ಮೇಯರ್ ಪೂಜಾರಿ ಗಾದೆಪ್ಪ, ಶಾಸಕ ವೈ.ಎಂ. ಸತೀಶ್ ಮತ್ತಿತರ ಜನಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸುವರು.

ಅಲ್ಲಂ ವೀರಭದ್ರಪ್ಪ ಮತ್ತು ಅಲ್ಲಂ ಸುನಂದಾ ವೀರಭದ್ರಪ್ಪನವರು ಸುವರ್ಣಸಿರಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ಸಂಜೆ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕಾಲೇಜಿನ ಹಳೆಯ ವಿದ್ಯಾರ್ಥಿ ಹಾಗೂ ವಿಶ್ರಾಂತ ಹೈಕೋರ್ಟ್ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಎಸ್ಪಿ ಡಾ. ಸುಮನ್ ಡಿ.ಪನ್ನೇಕರ್, ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ ಹಾಗೂ ಉದ್ಯಮಿ ಲಕ್ಷ್ಮಿ ಅರುಣಾ ಭಾಗವಹಿಸುವರು. ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡುವರು. ಸಂಜೆ 6.30ರಿಂದ ಬೆಂಗಳೂರಿನ ರಾಮಚಂದ್ರ ಜಿ. ಹಡಪದ್ ಕಲಾ ತಂಡದಿಂದ ಗಾಯನಸುಧೆ ಜರುಗಲಿದೆ ಎಂದು ವಿವರಿಸಿದರು.

ಸುವರ್ಣ ಸಂಭ್ರಮಾಚರಣೆಯ ಎರಡನೇ ದಿನ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಕೊಟ್ಟೂರುಸ್ವಾಮಿ ಸಂಸ್ಥಾನ ಮಠದ ಕೊಟ್ಟೂರು ಶ್ರೀಬಸವಲಿಂಗ ಮಹಾಸ್ವಾಮಿ, ನಂದೀಪುರದ ಡಾ. ಮಹೇಶ್ವರ ಮಹಾಸ್ವಾಮಿ, ಬಳ್ಳಾರಿಯ ಶ್ರೀಕಲ್ಯಾಣಸ್ವಾಮಿ ಸಾನ್ನಿಧ್ಯ ವಹಿಸಲಿದ್ದು, ಎಎಸ್‌ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪಿ.ಗುರುಬಸಪ್ಪ ಅಧ್ಯಕ್ಷತೆ ವಹಿಸುವರು. ಕಲಬುರಗಿಯ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಪಂಡಿತ್ ಸಿ.ಬೆಳಮಗಿ, ಬಳ್ಳಾರಿಯ ಡಿಡಿಪಿಯು ಎಂ.ವಿ. ಹನುಮಂತರಾವ್ ಅತಿಥಿಗಳಾಗಿ ಭಾಗವಹಿಸುವರು. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ವಿಶೇಷ ಉಪನ್ಯಾಸ ನೀಡುವರು. ಸಂಜೆ ಜರುಗುವ ಸಮಾರೋಪ ಸಮಾರಂಭದಲ್ಲಿ ಶಾಸಕರುಗಳಾದ ನಾರಾ ಭರತ್‌ರೆಡ್ಡಿ, ಬಿ. ನಾಗೇಂದ್ರ, ಬಿಎಂಸಿಆರ್‌ಸಿ ನಿರ್ದೇಶಕ ಡಾ. ಮರಿರಾಜ್ ಜೀರ್, ನಾರಾ ವೈಜಯಂತಿ ರೆಡ್ಡಿ ಪಾಲ್ಗೊಳ್ಳಲಿದ್ದು, ವೀವಿ ಸಂಘದ ಅಧ್ಯಕ್ಷ ಡಾ. ಕಣೇಕಲ್ ಮಹಾಂತೇಶ್ ಅಧ್ಯಕ್ಷತೆ ವಹಿಸುವರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ ಎಂದು ತಿಳಿಸಿದರು. ವೀವಿ ಸಂಘದ ಸಹ ಕಾರ್ಯದರ್ಶಿ ಯಾಳ್ಪಿ ಮೇಟಿ ಪಂಪನಗೌಡ, ಆಡಳಿತ ಮಂಡಳಿ ಸದಸ್ಯ ಪಾರ್ವತೀಶ, ಪ್ರಾಂಶುಪಾಲರುಗಳಾದ ದೂಪಂ ಸತೀಶ್, ಗೋವಿಂದರಾಜು ಸುದ್ದಿಗೋಷ್ಠಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್
ದಸರಾ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಿ: ಬಿ.ಬಿ. ಅಸೂಟಿ