ನವೋದಯದ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯರ ಮೇಲೆ ಹಲ್ಲೆ

KannadaprabhaNewsNetwork |  
Published : Aug 27, 2024, 01:33 AM IST
26ಕೆಪಿಎಲ್22 ಕುಕನೂರು ನವೋದಾಯ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳ ಮೇಲೆ  ಹಲ್ಲೆಯಾಗಿದ್ದ,  ಕ್ರಮವಹಿಸುವಂತೆ ಸಂಸದರಿಗೆ ಮನವಿ ಸಲ್ಲಿಸಲಾಗಿದೆ. | Kannada Prabha

ಸಾರಾಂಶ

ಕುಕನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳ ಮೇಲೆ ಸಾಮೂಹಿಕ ಹಲ್ಲೆ ಮಾಡಿದ ಘಟನೆ ನಡೆದಿದೆ.

ಸೂಕ್ತ ಕ್ರಮಕ್ಕೆ ಆಗ್ರಹಿಸಿ ಸಂಸದರಿಗೆ ಪಾಲಕರ ಮನವಿ । ಭಯದ ವಾತಾವರಣದಲ್ಲಿ ವಿದ್ಯಾರ್ಥಿಗಳು

ಕನ್ನಡಪ್ರಭ ವಾರ್ತೆ ಕೊಪ್ಪಳ

ಕುಕನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳ ಮೇಲೆ ಸಾಮೂಹಿಕ ಹಲ್ಲೆ ಮಾಡಿದ ಘಟನೆ ನಡೆದಿದ್ದು, ಕೂಡಲೇ ಕ್ರಮವಹಿಸಿ, ಸ್ವಾಸ್ಥ್ಯ ಕಾಪಾಡುವಂತೆ ಆಗ್ರಹಿಸಿ ಪಾಲಕರು ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿದರು.

ವಿದ್ಯಾಲಯದ ಆವರಣದಲ್ಲಿ ಹಾಡುಹಗಲೇ ಹಿರಿಯ ವಿದ್ಯಾರ್ಥಿಗಳು ಅಂದರೆ ಪಿಯುಸಿ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳು 8, 9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳ ಮೇಲೆ ಅತ್ಯಂತ ಕ್ರೂರವಾಗಿ ಹಲ್ಲೆ ಮಾಡಿದ್ದಾರೆ. ಕಟ್ಟಿಗೆ, ಬೆಲ್ಟ್ ಹಾಗೂ ಪೈಪ್ ಗಳ ಮೂಲಕ ಹೊಡೆದಿದ್ದಾರೆ. ಕೆಲ ವಿದ್ಯಾರ್ಥಿಗಳ ಗುಪ್ತಾಂಗಗಳಿಗೆ ಹೊಡೆದು ಅಮಾನುಷವಾಗಿ ನಡೆದುಕೊಂಡಿದ್ದಾರೆ. ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಹಲ್ಲೆ ಆಗಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳು ಭಯದ ವಾತಾವರಣದಲ್ಲಿದ್ದಾರೆ. ಇಷ್ಟೆಲ್ಲ ನಡೆದರೂ ಅಲ್ಲಿಯ ಪ್ರಾಚಾರ್ಯರಾಗಲಿ, ಶಿಕ್ಷಕರಾಗಲಿ, ಸಿಬ್ಬಂದಿಯಾಗಲಿ ಯಾವುದೇ ಪಾಲಕರ ಗಮನಕ್ಕೆ ತಂದಿಲ್ಲ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣ ಹೊಸದೇನು ಅಲ್ಲ. ಇಂಥ ಪ್ರಕರಣಗಳು ಈ ಹಿಂದೆ ಕೂಡ ಸಾಕಷ್ಟು ಬಾರಿ ಜರುಗಿದ್ದರೂ ಸೂಕ್ತ ಕ್ರಮ ಜರುಗಿಸಿಲ್ಲ. ಪ್ರತಿ ಸಲ ಅಲ್ಲಿಯ ಸಿಬ್ಬಂದಿ ಹಾಗೂ ಪ್ರಾಚಾರ್ಯರು ಮುಚ್ಚಿ ಹಾಕಿದ್ದಾರೆ. ಇದಕ್ಕೆಲ್ಲ ಅಲ್ಲಿಯ ಆಡಳಿತ ವೈಫಲ್ಯವೇ ಕಾರಣವಾಗಿದೆ.

ಮುಖ್ಯವಾಗಿ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿದ್ದು ಕಂಡು ಬಂದಿದೆ. ಬೀಡಿ, ಸಿಗರೇಟ್, ಗುಟ್ಕಾ ಹಾಗೂ ಮದ್ಯ ಸೇವನೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ‌. ಹೀಗಾಗಿ ಆಡಳಿತ ವೈಫಲ್ಯಕ್ಕೆ ಕಾರಣರಾದ ವಿದ್ಯಾಲಯದ ಪ್ರಾಚಾರ್ಯರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕುಬೇರ ಮಜ್ಜಿಗಿ, ಶಿವಾನಂದ ಪ್ಯಾಟಿ, ಬಸವರಾಜ ಹುಬ್ಬಳ್ಳಿ, ಜಗನ್ನಾಥ ಬಿಸರಳ್ಳಿ, ಹನುಮಂತಪ್ಪ ಹಳ್ಳಿ, ಯಲ್ಲಪ್ಪ ರಕ್ಕಸಗಿ, ಟಿ.ಎನ್. ಚವ್ಹಾಣ್. ಗಂಗಾಧರ ಡೊಳ್ಳಿನ, ರಂಗನಾಥ ಮೇಟಿ, ನಾಗರಾಜ ಹೊನಗಡ್ಡ, ದ್ಯಾಮಣ್ಣ ವಡ್ರಕಲ್, ಮಲ್ಲಪ್ಪ ಸೇರಿದಂತೆ ಇತರರಿದ್ದರು.

PREV

Recommended Stories

15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌