ಕನ್ನಡಪ್ರಭ ವಾರ್ತೆ, ದಾವಣಗೆರೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಲಾಖೆಯಲ್ಲಿನ ಸಹಾಯಕ ಎಂಜಿನಿಯರ್ಗಳ ಸಿವಿಲ್ ಹುದ್ದೆಗಳ ನೇಮಕಾತಿಗಾಗಿ ಆ.11ರಂದು ನಗರದ 3 ಕೇಂದ್ರಗಳಲ್ಲಿ 1447 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈಗಾಗಲೇ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಸಿದ್ಧತೆ ಮಾಡಿಕೊಂಡಿದ್ದು, ಅಗತ್ಯ ಕಟ್ಟೆಚ್ಚರ ವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೆಇಎ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುತ್ತಿದೆ. ಯಾವುದೇ ಲೋಪವಾಗದಂತೆ ಪರೀಕ್ಷೆ ನಡೆಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಪರೀಕ್ಷಾ ಪ್ರಾಧಿಕಾರವು ಯಾವ ರೀತಿ ಪರೀಕ್ಷೆಯನ್ನು ನಡೆಸಬೇಕೆಂಬ ಬಗ್ಗೆ ನಿಯಮಗಳನ್ನು ರೂಪಿಸಿದೆ. ಅದರಂತೆ ಪರೀಕ್ಷಾ ಮೇಲ್ವಿಚಾರಕರು ಹಾಗೂ ಕೇಂದ್ರದ ಅಧೀಕ್ಷಕರು ಸೇರಿದಂತೆ ಎಲ್ಲ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ಆ.11ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30 ಗಂಟೆವರೆಗೆ ಕಡ್ಡಾಯ ಸಾಮಾನ್ಯ ಕನ್ನಡ ಭಾಷಾ ಪರೀಕ್ಷೆ ಇದೆ. ಮಧ್ಯಾಹ್ನ 2.30ರಿಂದ ಸಂಜೆ 4.30 ಗಂಟೆವರೆಗೆ ನಿರ್ದಿಷ್ಟ ಪತ್ರಿಕೆಯ ಪರೀಕ್ಷೆ ನಡೆಯಲಿವೆ ಎಂದು ತಿಳಿಸಿದರು.ಕರ್ತವ್ಯಲೋಪ ಆಗದಿರಲಿ:
ಪರೀಕ್ಷೆಗಳಲ್ಲಿ ಎಷ್ಟೇ ಎಚ್ಚರ ವಹಿಸಿದರೂ ಕೆಲವು ತಪ್ಪುಗಳಾಗುತ್ತವೆ. ಹಾಗಾಗಿ, ಪ್ರತಿಯೊಬ್ಬರೂ ತಮ್ಮ ಪರೀಕ್ಷಾ ಕರ್ತವ್ಯಗಳನ್ನು ಸರಿಯಾಗಿ ಓದಿಕೊಂಡು, ನಿರ್ವಹಿಸಬೇಕು. ತಾಂತ್ರಿಕತೆ ಬಹಳ ಮುಂದುವರಿದಿದ್ದು, ಪರೀಕ್ಷೆಗಳಲ್ಲಿ ಮೋಸ ಎಸಗುವವರು, ಬೇರೆ ಬೇರೆ ತಂತ್ರಗಳನ್ನು ಅನುಸರಿಸುವುದರಿಂದ ನಾವು ಹೆಚ್ಚು ಜಾಗರೂಕತೆ ವಹಿಸಬೇಕು. ಪ್ರತಿ ಕೊಠಡಿಗೆ ಸಿಸಿ ಕ್ಯಾಮೆರಾ ಅಳವಡಿಕೆ ಸೇರಿದಂತೆ ಅಗತ್ಯವಿರುವ ಕಡೆ ವೀಡಿಯೋಗ್ರಾಫರ್ ಸಹ ನೇಮಕ ಮಾಡಿಕೊಳ್ಳಲು ಡಿಸಿ ಸೂಚಿಸಿದರು.ಗಾಳಿ-ಬೆಳಕು ಇರಬೇಕು:
ಪರೀಕ್ಷಾ ಕೇಂದ್ರಗಳಲ್ಲಿ ಆಸನ, ಗಾಳಿ, ಬೆಳಕು ಹಾಗೂ ಶೌಚಾಲಯ ವ್ಯವಸ್ಥೆ ಇರುವಂತೆ ನೋಡಿಕೊಳ್ಳಿ. ಎಲೆಕ್ಟ್ರಾನಿಕ್ ಸಾಧನಗಳಾದ ಮೊಬೈಲ್, ಸ್ಮಾರ್ಟ್ ಫೋನ್, ಸ್ಮಾರ್ಟ್ ವಾಚ್, ಬ್ಲೂ ಟೂತ್ ಡಿವೈಸ್, ಪೇಜರ್, ವೈರ್ಲೆಸ್, ಕ್ಯಾಲ್ಕುಲೇಟರ್, ಮೊದಲಾದ ಎಲೆಕ್ಟ್ರಾನಿಕ್ ವಸ್ತುಗಳಿಗೆ ನಿರ್ಬಂಧವಿದೆ. ಆದಾಗ್ಯೂ ಯಾವುದೇ ವ್ಯಕ್ತಿಗಳು ಇವುಗಳನ್ನು ಕೇಂದ್ರದ ಒಳ ತಂದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ರದ್ಧುಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದರು.ಉಪ ವಿಭಾಗಾಧಿಕಾರಿ ಸಂತೋಷ ಪಾಟೀಲ್, ಜಿಲ್ಲಾ ಖಜಾನಾಧಿಕಾರಿ ಪ್ರಭಾವತಿ, ಪಿಯು ಡಿಡಿ. ಕರಿಬಸಪ್ಪ, ಡಿಡಿಪಿಐ ಕೊಟ್ರೇಶ, ಬಿಸಿಎಂ ಅಧಿಕಾರಿ ಗಾಯತ್ರಿ, ಪೊಲೀಸ್ ಅಧಿಕಾರಿ ಇಮ್ರಾನ್ ಬೇಗ್ ಸೇರಿದಂತೆ ಪರೀಕ್ಷಾ ಮೇಲ್ವಿಚಾರಕರು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.