ಸಂತ ಸೇವಾಲಾಲ್ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಸಚಿವ ಡಿ.ಸುಧಾಕರ್ ಹೇಳಿಕೆ
ಕನ್ನಡಪ್ರಭ ವಾರ್ತೆ ಹಿರಿಯೂರು
ಲಂಬಾಣಿ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.ತಾಲೂಕಿನ ಜೆಜಿ ಹಳ್ಳಿ ಹೋಬಳಿಯ ಓಬಳಾಪುರ ಲಂಬಾಣಿ ತಾಂಡಾದಲ್ಲಿ ಹಮ್ಮಿಕೊಂಡಿದ್ದ 286ನೇ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಸ್ತೆ, ನೀರು, ಬೋರ್ ವೆಲ್ಗಳು ಹೀಗೆ ನೂರಾರು ಅಭಿವೃದ್ಧಿ ಕೆಲಸ ಮಾಡಲಾಗಿದೆ. ಈ ತಾಂಡಾಕ್ಕೆ ಕುಡಿಯುವ ನೀರಿನ ಅಭಾವವಿದೆ ಎಂಬ ಬೇಡಿಕೆ ಇಟ್ಟಿದ್ದೀರಿ. ಈಗಾಗಲೇ ಮಾರಿಕಣಿವೆಯಿಂದ ನೀರು ತರುವ ಪೈಪ್ ಲೈನ್ ಕೆಲಸ ತ್ವರಿತವಾಗಿ ನಡೆಯುತ್ತಿದೆ. ಮುಂದಿನ ಬೇಸಿಗೆ ಹೊತ್ತಿಗೆ ನಿಮಗೆಲ್ಲ ಮಾರಿಕಣಿವೆಯಿಂದ ಕುಡಿಯುವ ನೀರು ಲಭ್ಯವಾಗಲಿವೆ. ಶಾಲೆಗೆ ಅಡುಗೆ ಕೋಣೆ, ಶುದ್ಧ ಕುಡಿಯುವ ನೀರಿನ ಘಟಕ ರಿಪೇರಿಯನ್ನು ಶೀಘ್ರವೇ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು.
ಯುವಕರು ಸೇವಾಲಾಲ್ ಮಹಾರಾಜರ ಆದರ್ಶ ಹಾಗೂ ತತ್ವಗಳನ್ನು ಪರಿಪಾಲನೆ ಮಾಡಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಬುದ್ಧಿವಂತರು ಮಾತ್ರ ಮುಂದೆ ಬರಲು ಸಾಧ್ಯ. ಲಂಬಾಣಿ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಹೆಚ್ಚು ಆಸಕ್ತಿ ವಹಿಸಬೇಕು. ಶಿಕ್ಷಣ, ಹೋರಾಟ ಮತ್ತು ಸಂಘಟನೆಯಿದ್ದಲ್ಲಿ ಜಯ ದೊರಕಲಿದೆ ಎಂದರು.
ಓಬಳಾಪುರ ತಾಂಡಾದಲ್ಲಿ ಹಮ್ಮಿಕೊಂಡಿದ್ದ ಸೇವಾಲಾಲ್ ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರವರು ಪಾಲ್ಗೊಂಡು ಮಹಿಳೆಯರೊಂದಿಗೆ, ಡಿಜೆ ಸೌಂಡ್ಗೆ ಹೆಜ್ಜೆ ಹಾಕಿದರು. ಜನರ ಒತ್ತಾಯಕ್ಕೆ ಮಣಿದ ಸಚಿವರು ಒಂದೆರಡು ಸ್ಟೆಪ್ ಹಾಕಿ ಲಂಬಾಣಿ ತಾಂಡಾದ ಜನರ ಸಂತೋಷಕ್ಕೆ ಕಾರಣರಾದರು.