ರಾಮನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತ ಸಂಘ ಹಾಗೂ ಕನ್ನಡಪರ ಕಾರ್ಯಕರ್ತರನ್ನು ಪೊಲೀಸರು ಗುರುವಾರ ಬಂಧಿಸಿ ಬಿಡುಗಡೆ ಮಾಡಿದರು.
ನಮ್ಮ ಮನವಿ ಪತ್ರವನ್ನು ಸ್ವೀಕರಿಸಲು ಜಿಲ್ಲಾಧಿಕಾರಿಯೇ ಬರಬೇಕು ಎಂದು ಪ್ರತಿಭಟನಾಕಾರರು ಎರಡು ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲಿಯೇ ಕುಳಿತು ಘೋಷಣೆಗಳನ್ನು ಕೂಗುವ ಮೂಲಕ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿಗಳು ಬರದಿದ್ದಾಗ ಆಕ್ರೋಶಗೊಂಡ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿ ಆವರಣ ಪ್ರವೇಶಕ್ಕೆ ಪ್ರಯತ್ನಿಸಿದಾಗ ಪೊಲೀಸರು ನಿರಾಕರಿಸಿದರು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಬೆಂಗಳೂರು-ಮೈಸೂರು ಹೆದ್ದಾರಿ ತಡೆದ ಪ್ರತಿಭಟನಾಕಾರರು ಹೋರಾಟ ಮುಂದುವರಿಸಿದರು. ಅಂತಿಮವಾಗಿ ಜಿಲ್ಲಾಡಳಿತ ಕಚೇರಿ ಮುತ್ತಿಗೆ ಹಾಕಲು ಪ್ರಯತ್ನಿಸಿದ ವೇಳೆ ಹೋರಾಟಗಾರರನ್ನು ಪೊಲೀಸರು ಬಂಧಸಿ ನಂತರ ಬಿಡುಗಡೆ ಮಾಡಿದರು.
ಹಾರೋಹಳ್ಳಿ ತಾಲೂಕು ಗಂಡಕನದೊಡ್ಡಿಯ ರಸ್ತೆ ತೆರವು ಮಾಡದಿರುವ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಸಂಬಂಧಪಟ್ಟ ತಹಸೀಲ್ದಾರ್ ರವರು ರಸ್ತೆ ತೆರವು ಮಾಡಲು ವಿಫಲರಾಗಿದ್ದಾರೆ. 10 - 15 ಕುಟುಂಬಗಳು ತಮ್ಮ ತಮ್ಮ ಮನೆಗಳು ಓಡಾಡುವ ನಕಾಶೆ ರಸ್ತೆಯನ್ನು ಶಾಸಕರ ಬೆಂಬಲಿಗ ಒತ್ತುವರಿ ಮಾಡಿಕೊಂಡಿದ್ದಾರೆ. ಇ ಖಾತೆ ಮಾಡಿಸಿಕೊಂಡು ಮಾರಾಟ ಮಾಡುತ್ತಿದ್ದಾರೆ. ಇದನ್ನು ತಡೆಯಲು ಕಂದಾಯ ಇಲಾಖೆ ವಿಫಲವಾಗಿದೆ. ಜಿಲ್ಲಾಡಳಿತ ನೊಂದವರಿಗೆ ನ್ಯಾಯ ಕೊಡುತ್ತಿಲ್ಲ. ಉಳ್ಳವರ ಪರ ಕೆಲಸ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸಬೇಕು. ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಬೇಕು. ಹಾಲಿಗೆ ವೈಜ್ಞಾನಿಕ ದರವನ್ನು ನಿಗದಿ ಮಾಡಬೇಕು. ಹೊರ ದೇಶದಿಂದ ಹಾಲು ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು. ಹಾವು ಕಡಿತಕ್ಕೆ ಒಳಗಾದಾಗ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ತಪ್ಪದೆ ಲಸಿಕೆ ಲಭ್ಯವಿರುವಂತೆ ಕ್ರಮ ಕೈಗೊಳ್ಳಬೇಕು. ಜಲಜೀವನ್ ಮಿಷನ್ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
(ಎರಡೂ ಫೋಟೊ ಬಳಸಿ)
4.ರಾಮನಗರದಲ್ಲಿ ಜಿಲ್ಲಾಡಳಿತದ ವಿರುದ್ಧ ರೈತ ಸಂಘದ ನೇತೃತ್ವದಲ್ಲಿ ಹೆದ್ದಾರಿ ತಡೆದು ಪ್ರತಿಭಟಿಸಲಾಯಿತು.