ಕುಡಿಯುವ ನೀರು ಪೂರೈಕೆಗೆ ಗಮನ: ಸಿಇಒ ಸೂಚನೆ

KannadaprabhaNewsNetwork |  
Published : Jun 20, 2026, 02:45 AM IST
 | Kannada Prabha

ಸಾರಾಂಶ

ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಂಬಂಧ ಜಿಲ್ಲಾ ನೀರು ಮತ್ತು ನೈರ್ಮಲ್ಯ ಅಭಿಯಾನ ಸಮಿತಿ ಸಭೆಯು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಿಇಒ ಅವರ ಕಚೇರಿಯಲ್ಲಿ ಶುಕ್ರವಾರ ನಡೆಯಿತು.

ಮಡಿಕೇರಿ: ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಂಬಂಧ ಜಿಲ್ಲಾ ನೀರು ಮತ್ತು ನೈರ್ಮಲ್ಯ ಅಭಿಯಾನ ಸಮಿತಿ ಸಭೆಯು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಿಇಒ ಅವರ ಕಚೇರಿಯಲ್ಲಿ ಶುಕ್ರವಾರ ನಡೆಯಿತು. ಸಭೆಯಲ್ಲಿ ಪ್ರಸಕ್ತ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಕೈಗೊಳ್ಳುವ ನಿಟ್ಟಿನಲ್ಲಿ ಕ್ರಿಯಾಯೋಜನೆಗೆ ಅನುಮೋದನೆ ಸಂಬಂಧ ಚರ್ಚಿಸಲಾಯಿತು. ಎಸ್‍ಡಿಪಿ ಮತ್ತು ನಾನ್ ಎಸ್‍ಡಿಪಿ ಯೋಜನೆಯನ್ನು ಮಾರ್ಪಡಿಸಿ ಕ್ರಿಯಾಯೋಜನೆ ತಯಾರಿಸುವ ಸಂಬಂಧ ಸುದೀರ್ಘ ಚರ್ಚೆ ನಡೆಯಿತು. ಜಲಜೀವನ್ ಮಿಷನ್ ಯೋಜನಾ ಕಾಮಗಾರಿಗಳ ಕುಂದುಕೊರತೆ ಸಂಬಂಧಿಸಿದಂತೆ ಆನಂದ ಪ್ರಕಾಶ್ ಮೀನಾ ಮಾಹಿತಿ ಪಡೆದರು. ತುರ್ತು ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳಬೇಕು. ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನಲ್ಲಿ ನೀರು ಸಂಪರ್ಕ ಕಲ್ಪಿಸಬೇಕು. ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಬೇಕು ಎಂದು ನಿರ್ದೇಶನ ನೀಡಿದರು.ಜಿಲ್ಲೆಯಲ್ಲಿ ಇದುವರೆಗೆ ಕಡಿಮೆ ಮಳೆಯಾಗಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನಿಗಾ ವಹಿಸಬೇಕು ಎಂದು ನಿರ್ದೇಶನ ನೀಡಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್ ಜಲಜೀವನ್ ಮಿಷನ್ 2.0 ಯೋಜನೆ ಅನುಷ್ಠಾನ ಸಂಬಂಧಿಸಿದಂತೆ ವಿವರಿಸಿದರು. ಸಭೆಯಲ್ಲಿ ತುರ್ತು ಕುಡಿಯುವ ನೀರಿನ ಬಗ್ಗೆ, ವಿಶೇಷ ಅಭಿವೃದ್ಧಿ ಕಾರ್ಯಕ್ರಮ, ಜಲಜೀವನ್ ಮಿಷನ್ ಯೋಜನೆಗಳ ಕಾಮಗಾರಿ, ಡಿಸಿನ್ಫೆಕ್ಷನ್ ಯೂನಿಟ್, ಹರ್‍ಘರ್‍ಜಲ್ ವಿಷಯ, ನೀರಿನ ಗುಣಮಟ್ಟ ಪರೀಕ್ಷೆ ಹಾಗೂ ಇಎಫ್‍ಐ ಮತ್ತು ಇ.ಒ.ಟಿಗಳ ಕುರಿತು ಚರ್ಚಿಸಲಾಯಿತು.

ಜಲ ಜೀವನ್ ಮಿಷನ್ ಜಿಲ್ಲೆಯಲ್ಲಿ ಒಟ್ಟು 3 ಹಂತಗಳಲ್ಲಿ ಕೈಗೆತ್ತಿಕೊಳ್ಳಲಾದ 457 ಕಾಮಗಾರಿಗಳ ಪೈಕಿ 370 ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಯೋಜನೆಗಳ ಒಟ್ಟು ಅಂದಾಜು ಮೊತ್ತ 354.74 ಕೋಟಿ ರು. ಆಗಿದ್ದು, ಈಗಾಗಲೇ 245.85 ಕೋಟಿ ರು. ಹಣವನ್ನು ಪ್ರಗತಿಗಾಗಿ ಖರ್ಚು ಮಾಡಲಾಗಿದೆ ಎಂದು ಕಾರ್ಯಪಾಲಕ ಎಂಜಿನಿಯರ್ ಮಾಹಿತಿ ನೀಡಿದರು.ಪ್ರಸ್ತುತ 85 ಕಾಮಗಾರಿಗಳು ಪ್ರಗತಿಯಲ್ಲಿದ್ದು, 2 ಕಾಮಗಾರಿ ಕೈಬಿಡಲಾಗಿದೆ. ಪೂರ್ಣಗೊಂಡ ಯೋಜನೆಗಳಲ್ಲಿ 236 ಕಾಮಗಾರಿಯನ್ನು ಈಗಾಗಲೇ ಸಾರ್ವಜನಿಕ ಬಳಕೆಗೆ ಹಸ್ತಾಂತರಿಸಲಾಗಿದೆ. ಸೋಮವಾರಪೇಟೆಯ ಒಟ್ಟು 245 ಕಾಮಗಾರಿಗಳಲ್ಲಿ 229 ಪೂರ್ಣ (ಅತಿ ಹೆಚ್ಚು ಪ್ರಗತಿ), ವಿರಾಜಪೇಟೆ ಒಟ್ಟು 122 ಕಾಮಗಾರಿಗಳಲ್ಲಿ 81 ಪೂರ್ಣ, ಮಡಿಕೇರಿ ಒಟ್ಟು 90 ಕಾಮಗಾರಿಗಳಲ್ಲಿ 60 ಕಾಮಗಾರಿ ಪೂರ್ಣಗೊಂಡಿದೆ ಎಂದು ಕಾರ್ಯಪಾಲಕ ಎಂಜಿನಿಯರ್ ಅವರು ತಿಳಿಸಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ, ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರು ಒದಗಿಸಲು 2025-26ನೇ ಸಾಲಿನ 8 ಪ್ರಮುಖ ತುರ್ತು ಕಾಮಗಾರಿ ಗುರುತಿಸಲಾಗಿದೆ. ಅಲ್ಲದೆ ಹೊಸ ಕೊಳವೆ ಬಾವಿಗಳನ್ನು ಕೊರೆಯುವುದು, ಪಂಪ್ ಹಾಗೂ ಮೋಟಾರ್ ಅಳವಡಿಸುವುದು ಮತ್ತು ಕುಡಿಯುವ ನೀರಿನ ಪೈಪ್‍ಲೈನ್ ಸಂಪರ್ಕ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಸೂಕ್ತ ಪರಿಹಾರ ಕ್ರಮ: ಜಿಲ್ಲೆಯಲ್ಲಿ ಕಲುಷಿತ ಮುಕ್ತ ನೀರನ್ನು ಖಚಿತಪಡಿಸಲು ಕೊಡಗು ವಿಭಾಗ ಮತ್ತು ಪೊನ್ನಂಪೇಟೆ ಉಪ ವಿಭಾಗದ ಒಟ್ಟು 2 ಪ್ರಯೋಗಾಲಯಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. 2026-27ನೇ ಹಣಕಾಸು ವರ್ಷದಲ್ಲಿ ಜೂನ್ 18, 2026 ರವರೆಗೆ ಜಿಲ್ಲೆಯ 288 ಹಳ್ಳಿಗಳಿಂದ 1,022 ನೀರಿನ ಮಾದರಿ ಸಂಗ್ರಹಿಸಿ ತಪಾಸಣೆ ನಡೆಸಲಾಗಿದೆ. ಕೊಡಗು ವಿಭಾಗದಲ್ಲಿ ಪರೀಕ್ಷಿಸಲಾದ ಮಾದರಿಗಳಲ್ಲಿ 2 ನೀರಿನ ಮಾದರಿಗಳು ಕಲುಷಿತಗೊಂಡಿರುವುದು ಪತ್ತೆಯಾಗಿದ್ದು, ಅಧಿಕಾರಿಗಳು ತಕ್ಷಣವೇ ಸೂಕ್ತ ಪರಿಹಾರ ಕ್ರಮ ಕೈಗೊಂಡಿರುವುದಾಗಿ ಕಾರ್ಯಪಾಲಕ ಎಂಜಿನಿಯರ್ ಅವರು ಹೇಳಿದರು.

ಗಾಳಿಬೀಡು ಗ್ರಾ.ಪಂ.ವ್ಯಾಪ್ತಿಯ ಜವಾಹರ್ ನವೋದಯ ಶಾಲೆಗೆ 78.50 ಲಕ್ಷ ರು. ವೆಚ್ಚದಲ್ಲಿ ಹೊಸ ನೀರು ಶುದ್ಧಿಕರಣ ಘಟಕ ನಿರ್ಮಾಣದ ಆಡಳಿತಾತ್ಮಕ ಅನುಮೋದನೆಗೆ ಚರ್ಚೆ ನಡೆಸಲಾಯಿತು. ವಾಟರ್ ಬಜೆಟ್, 20 ಓವರ್ ಹೆಡ್ ಟ್ಯಾಂಕ್‍ಗಳ ದುರಸ್ತಿ ಮತ್ತು ಕಂಪ್ಯೂಟರ್ ಆಪರೇಟರ್ ಹಾಗೂ ಡ್ರೈವರ್-ಸಿಬ್ಬಂದಿ ಮುಂದುವರಿಕೆ ಕುರಿತು ಚರ್ಚಿಸಲಾಯಿತು.ಸಭೆಯಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಟಿ.ಪಿ.ವಿರೇಂದ್ರ, ತಾಲೂಕು ಆರೋಗ್ಯಧಿಕಾರಿ ಡಾ.ಸನತ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನಕುಮಾರ್, ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಕುಮಾರ್, ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಪುಟ್ಟಸ್ವಾಮಿ ಸಹಿತ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಜನೆ ಕಾಲಹರಣಕ್ಕಲ್ಲ: ಶ್ರೀ ವೇದವರ್ಧನ ತೀರ್ಥರು
ಫ್ಲೆಕ್ಸ್ ತೆರವಿಗೆ ವಿರೋಧ: ಪುರಸಭೆಗೆ ಮುತ್ತಿಗೆ ಪ್ರತಿಭಟನೆ