ಗಜೇಂದ್ರಗಡ: ಗ್ರಾಮೀಣ ಭಾಗದ ರೈತರ, ಕೂಲಿಕಾರರ ಮತ್ತು ಜೀವನೋಪಾಯ ಚಟುವಟಿಕೆಗಳ ಮೂಲಕ ಆರ್ಥಿಕ ಸದೃಢಕ್ಕಾಗಿ ಜಾರಿಯಾದ ವಿಬಿ ಜಿ ರಾಮ್ ಜಿ ಯೋಜನೆಯಿಂದ ಗ್ರಾಮದ ಕೂಲಿಕಾರರ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿ ಎಂದು ತಾಪಂ ಸಹಾಯಕ ನಿರ್ದೇಶಕ ಶರಣಪ್ಪ ನರೇಗಲ್ಲ ಹೇಳಿದರು.
ಗ್ರಾಪಂಗಳಲ್ಲಿ ಯೋಜನೆಯಡಿ ನಿರಂತರ ಕೆಲಸ ನೀಡಲಾಗುತ್ತಿದ್ದು, ಕಾಯಕ ಬಂಧುಗಳು ನಮೂನೆ ೬ ನೀಡಿ ಕೆಲಸ ಪಡೆಯಬೇಕು. ವೈಯಕ್ತಿಕ ಕಾಮಗಾರಿಗಳನ್ನು ರೈತರು ತಮ್ಮ ಜಮೀನುಗಳಲ್ಲಿ ಮಾಡಿಕೊಂಡು ಆರ್ಥಿಕವಾಗಿ ಸದೃಡರಾಗಬೇಕು ಎಂದರು.
ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲಾಗುತ್ತದೆ. ಜಲ ಸಂರಕ್ಷಣೆಗೆ ಸಂಬಂಧಿಸಿದಂತೆ ಅಂತರ್ಜಲ ಮರುಪೂರಣ, ಜಲಮೂಲಗಳ ಪುನಶ್ಚೇತನ, ಜಲಾನಯನ ಪ್ರದೇಶದ ಅಭಿವೃದ್ಧಿ, ಅರಣ್ಯೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇದರಲ್ಲಿ ಗ್ರಾಮೀಣ ಭಾಗದ ರೈತರು ವೈಯಕ್ತಿಕ ಕಾಮಗಾರಿಗಳ ಮಾಡಿಕೊಳ್ಳಲು ವಿಶೇಷ ಆದ್ಯತೆ ನೀಡಲಾಗಿದೆ ಎಂದರು.ಐಇಸಿ ಸಂಯೋಜಕ ಮಂಜುನಾಥ ಹಳ್ಳದ ಮಾತನಾಡಿ, ವಿಜಿ ಜಿ ರಾಮ್ ಜಿ ಯೋಜನೆಯಡಿಯಲ್ಲಿ ಆ. ೧೫ರಿಂದ ಸೆ. ೧೫ರ ವರೆಗೆ ಜಾಬ್ ಕಾರ್ಡ್ ಮೇಳ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಜಾಬ್ ಕಾರ್ಡ್ ಇಲ್ಲದವರು ಹೊಸ ಜಾಬ್ ಕಾರ್ಡ್ ಮಾಡಿಸಿಕೊಳ್ಳಬೇಕು. ಜಾಬ್ ಕಾರ್ಡ್ ತಿದ್ದುಪಡಿ ಇದ್ದರೆ ತಿದ್ದುಪಡಿ ಮಾಡಿಸಿಕೊಳ್ಳಬಹುದು. ಇ ಕೆವೈಸಿ ಅಪ್ಡೇಟ್ ಮಾಡಿಸಲು ಅವಕಾಶ ನೀಡಲಾಗಿದೆ. ಗ್ರಾಪಂ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಎಲ್ಲ ಕೂಲಿಕಾರರು ಸಹಕರಿಸಬೇಕು ಎಂದರು.