- ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ । ಬೇಡಿಕೆಗಳಿಗೆ ಸ್ಪಂದಿಸಿದ ಜನಪ್ರತಿನಿಧಿಗಳು। ಎಂಪಿ, ಎಂಎಲ್ಎ, ಎಂಎಲ್ಸಿಗಳು ಭಾಗಿ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುರೈತರ ಹಾಗೂ ಜನರ ಬದುಕಿಗೆ ಕೊಳ್ಳಿ ಇಟ್ಟಿರುವ ಅರಣ್ಯ ಇಲಾಖೆಯ ವಿರುದ್ಧ ವಿವಿಧ ಸಂಘಟನೆಗಳು ಸೋಮವಾರ ಜಿಲ್ಲಾ ಕೇಂದ್ರದಲ್ಲಿ ಕರೆ ನೀಡಿದ್ದ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು, ಕಾಫಿ ಬೆಳೆಗಾರರು, ಸಾರ್ವಜನಿಕರು ಭಾಗವಹಿಸಿದ್ದರು.
ಈ ಮೆರವಣಿಗೆಯಲ್ಲಿ ಸಂಸದರು, ಜಿಲ್ಲೆಯ ಐದು ಮಂದಿ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು, ಮಾಜಿ ವಿಧಾನಪರಿಷತ್ ಸದಸ್ಯರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು.ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ, ಮೂಡಿಗೆರೆ ರೈತ ಹಿತರಕ್ಷಣಾ ವೇದಿಕೆ, ಕರ್ನಾಟಕ ಬೆಳೆಗಾರರ ಒಕ್ಕೂಟದ ನೇತೃತ್ವದಲ್ಲಿ ತಾಲೂಕು ಕಚೇರಿಯಿಂದ ಹೊರಟ ಮೆರವಣಿಗೆ ಎಂ.ಜಿ. ರಸ್ತೆಯಲ್ಲಿ ಸಾಗಿ ಆಜಾದ್ ಪಾರ್ಕ್ ವೃತ್ತ ತಲುಪಿದ ಬಳಿಕ ಸಾರ್ವಜನಿಕ ಸಭೆ ನಡೆಸಲಾಯಿತು.
ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ, ರೈತರಿಗೆ ಹಾಗೂ ಜನರಿಗೆ ಯಾವುದೇ ಇಲಾಖೆಯಿಂದ ತೊಂದರೆಯಾಗಬಾರದು. ಸಮಸ್ಯೆಗಳು ಉದ್ಭವಗೊಂಡರೆ ಜನಪ್ರತಿನಿಧಿಗಳು ಸ್ಪಂಧಿಸಬೇಕಾಗಿರುವುದು ಅವರ ಕರ್ತವ್ಯ. ಕೆಲವು ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಪರಿಹಾರ ಕಂಡು ಕೊಳ್ಳುವಂತಿವೆ. ಕೇಂದ್ರ ಸರ್ಕಾರದ ಗಮನ ಸೆಳೆಯುವ ಸಮಸ್ಯೆಗಳಿದ್ದರೆ, ಅಗತ್ಯಬಿದ್ದರೆ ಕೇಂದ್ರಕ್ಕೆ ನಿಯೋಗ ಕರೆದುಕೊಂಡು ಹೋಗುವುದಾಗಿ ಭರವಸೆ ನೀಡಿದರು.ಶಾಸಕ ಎಚ್.ಡಿ. ತಮ್ಮಯ್ಯ ಮಾತನಾಡಿ, ಇದು, ರೈತರ ಬದುಕಿನ ಹೋರಾಟವಾಗಿದೆ. ಕಾಫಿ ಬೆಳೆಗಾರರು ಎಂದಾಕ್ಷಣ, ಉನ್ನತ ಅಧಿಕಾರಿಗಳು ಭಾವಿಸಿರುವುದು ಶ್ರೀಮಂತರೆಂದು. ಆದರೆ, ಇಲ್ಲಿ ಶೇ.90 ಜನ ಸಣ್ಣ ಹಾಗೂ ಅತಿ ಸಣ್ಣ ಬೆಳೆಗಾರರು ಇದ್ದಾರೆ. ಕಂದಾಯ ಇಲಾಖೆ, ಅರಣ್ಯ ಇಲಾಖೆ ಇವರುಗಳ ಬಗ್ಗೆ ಯೋಚನೆ ಮಾಡುತ್ತಿಲ್ಲ ಎಂದರು.
ಸೆಕ್ಷನ್ 4 (1) ಯಿಂದ ಜನರಿಗೆ ತುಂಬಾ ತೊಂದರೆಯಾಗಿರುವ ಸಾರ್ವಜನಿಕ ಉಪಯೋಗಕ್ಕೆ ಬಳಕೆ ಮಾಡಲು ಜಾಗ ಇಲ್ಲದಂತಾಗಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅರಣ್ಯ ವ್ಯವಸ್ಥಾಪನಾಧಿಕಾರಿ (ಎಫ್ಎಸ್ಓ) ನೇಮಕ ಮಾಡ ಲಾಗಿದೆ. ಹೆಚ್ಚಿನ ಅಧಿಕಾರ ನೀಡಲಾಗಿದೆ. ಆದರೆ, ಅರಣ್ಯ ಇಲಾಖೆಯವರು ಸ್ಪಂದಿಸುತ್ತಿಲ್ಲ. 94ಸಿ ಅಡಿ ಹಕ್ಕುಪತ್ರ ನೀಡಲು ನಗರ ವ್ಯಾಪ್ತಿಯ ಗೊಂದಲದಿಂದ ಸಾಧ್ಯವಾಗುತ್ತಿಲ್ಲ. ಇದರಿಂದ ಸಾವಿರಾರು ಜನರಿಗೆ ತೊಂದರೆಯಾಗಿದೆ ಎಂದು ಹೇಳಿದರು.ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಕೆ. ರಘು ಸ್ವಾಗತಿಸಿದರು. ಹೋರಾಟ ಸಮಿತಿಯ ಅಧ್ಯಕ್ಷ ಎಸ್. ವಿಜಯಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮೂಡಿಗೆರೆ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ ಕಾರ್ಯಕ್ರಮ ನಿರೂಪಿಸಿದರು.
-- ಬಾಕ್ಸ್--ಕಾಲಮಿತಿ ನಿಗದಿಯಾಗಲಿ: ಸಿ.ಟಿ. ರವಿಕಡೂರು ಹಾಗೂ ಮೂಡಿಗೆರೆ ತಾಲೂಕುಗಳಲ್ಲಿ ಸಾಗುವಳಿ ಚೀಟಿ ನೀಡುವಲ್ಲಿ ಅಕ್ರಮವಾಗಿದೆ ಎಂಬ ಕಾರಣಕ್ಕೆ ಇತರೆ ಜನರಿಗೂ ತೊಂದರೆಯಾಗಿದೆ. ಹಾಗಾಗಿ ಜಿಲ್ಲಾಡಳಿತ ಕಾಲಮಿತಿಯೊಳಗೆ ಈ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬೇಕು. ನೈಜ ಫಲಾನುಭವಿಗಳಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗಬಾರದು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.
ಡೀಮ್ಡ್ ಎಂಬ ಪದ 1980ರ ಅರಣ್ಯ ಕಾಯ್ದೆಯಲ್ಲಿ ಉಲ್ಲೇಖ ಆಗಿಲ್ಲ ಎಂಬುದನ್ನು ಹೈಕೋರ್ಟ್ನ ವಿಭಾಗೀಯ ಪೀಠ ಸ್ಪಷ್ಟವಾಗಿ ಹೇಳಿದೆ. ಆದರೂ ಕೂಡ ಅರಣ್ಯ ಇಲಾಖೆಯವರು ಇದೇ ಕಾರಣ ಮುಂದಿಟ್ಟು ಜನರಿಗೆ ತೊಂದರೆ ನೀಡುತ್ತಿದ್ದಾರೆ. ಈ ಕುರಿತು ಅರಣ್ಯ ಸಚಿವರ ಗಮನ ಸೆಳೆಯಲಾಗುವುದು. ಜತೆಗೆ ವಿಧಾನಪರಿಷತ್ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದ ಸಿ.ಟಿ. ರವಿ, ಕಂದಾಯ ಮತ್ತು ಅರಣ್ಯ ಭೂಮಿ ಬಗ್ಗೆ ಜಂಟಿ ಸರ್ವೆ ಮಾಡಬೇಕು ಎಂದರು.ಸಭೆಯಲ್ಲಿ ಶಾಸಕರಾದ ಟಿ.ಡಿ. ರಾಜೇಗೌಡ, ನಯನಾ ಮೋಟಮ್ಮ, ಜಿ.ಎಚ್. ಶ್ರೀನಿವಾಸ್ ಮಾತನಾಡಿ, ಅರಣ್ಯ ಮತ್ತು ಕಂದಾಯ ಇಲಾಖೆಗಳಿಂದ ಜನರಿಗೆ ಆಗುತ್ತಿರುವ ತೊಂದರೆ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಭರವಸೆ ನೀಡಿದರು. 9 ಕೆಸಿಕೆಎಂ 2ಜಿಲ್ಲೆಯಲ್ಲಿ ಉದ್ಭವಿಸಿರುವ ರೈತರ ಹಾಗೂ ಅರಣ್ಯ ಇಲಾಖೆ ನಡುವಿನ ಸಂಘರ್ಷವನ್ನು ತಪ್ಪಿಸಿ ರೈತರ ಜನ ಜೀವನ ರಕ್ಷಿಸಿ ಬ್ಯಾನರ್ ನಡಿ ವಿವಿಧ ರಾಜಕೀಯ ಪಕ್ಷಗಳ ಹಾಗೂ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಸೋಮವಾರ ಚಿಕ್ಕಮಗಳೂರಿನಲ್ಲಿ ಮೆರವಣಿಗೆ ನಡೆಯಿತು.
-- 9 ಕೆಸಿಕೆಎಂ 3ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿದ್ದ ರಾಜಕೀಯ ಮತ್ತು ವಿವಿಧ ಸಂಘಟನೆಗಳ ಮುಖಂಡರು.