ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ಬಾಲಚಂದ್ರ

KannadaprabhaNewsNetwork | Published : Jan 17, 2024 1:49 AM

ಸಾರಾಂಶ

ಮೂಡಲಗಿ, ಗೋಕಾಕ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಬಾಲಚಂದ್ರ ಮಾತನಾಡಿ ಕುಡಿಯುವ ನೀರು ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸೂಚಿಸಿದರು.

ಕನ್ನಡಪ್ರಭ ವಾರ್ತೆ ಮೂಡಲಗಿ

ಕುಡಿಯುವ ನೀರಿನ ಸಮಸ್ಯೆಗೆ ಮೊದಲು ಆದ್ಯತೆ ನೀಡಬೇಕು, ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ತಲೆದೋರದಂತೆ ಕರ್ತವ್ಯ ನಿರ್ವಹಿಸಬೇಕು, ಎಲ್ಲಿ ಗಂಭೀರ ಸ್ವರೂಪದ ನೀರಿನ ಸಮಸ್ಯೆಗಳು ಇದೆಯೋ ಅಲ್ಲಿ ಟ್ಯಾಂಕರ್‌ ಮೂಲಕ ನೀರನ್ನು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾದಂದು ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲೂಕಾ ಮಟ್ಟದ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾರದೋಳಗೆ ಆಯಾ ಗ್ರಾಮಗಳಲ್ಲಿನ ಸ್ಥಿತಿಗತಿಗಳನ್ನು ಅರಿತು ಸಂಬಂಧಿಸಿದ ಅಧಿಕಾರಿಗಳಿಗೆ ವರದಿ ಮಾಡಬೇಕು ಎಂದರು.

ಅರಭಾವಿ ಮತ ಕ್ಷೇತ್ರಕ್ಕೆ ಒಳಪಟ್ಟಿರುವ ಕೆಲವು ಗ್ರಾಮಗಳಲ್ಲಿ ಪ್ರಸಕ್ತ ಸ್ಥಿತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಫೆಬ್ರವರಿ 20ರೊಳಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಅಧಿಕಾರಿಗಳು ಈಗಾಗಲೇ ಮಾಹಿತಿ ನೀಡಿದ್ದಾರೆ. ಅಷ್ಟರೊಳಗೆ ಮತ್ತೊಂದು ಬಾರಿ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಹರಿಸಿದರೆ ಜನ ಹಾಗೂ ಜಾನುವಾರುಗಳಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಹಿಡಕಲ್ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಸ್ಥಳೀಯ ಮಟ್ಟದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಈ ಬಾರಿ ಮಳೆರಾಯ ಕೈ ಕೊಟ್ಟಿದ್ದರಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಅವುಗಳನ್ನು ಪರಿಹರಿಸಲು ತಕ್ಷಣವೇ ಮೇಲಾಧಿಕಾರಿಗಳಿಗೆ ವರದಿಯನ್ನು ಒಪ್ಪಿಸುವಂತೆ ಸೂಚನೆ ನೀಡಿದರು. ಅಲ್ಲದೆ, ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಲು ಕೂಡ ಅಧಿಕಾರಿಗಳು ಸನ್ನದ್ಧ ಸ್ಥಿತಿಯಲ್ಲಿರಬೇಕು ಎಂದು ಸಲಹೆ ನೀಡಿದರು. ಸ್ಥಳೀಯ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಸಾರ್ವಜನಿಕ ಸಮಸ್ಯೆಗಳನ್ನು ಈಡೇರಿಸುವ ಕೆಲಸ ಮಾಡುವಂತೆ ಸೂಚನೆ ನೀಡಿದರು.

ನೂರಾರು ಕೋಟಿ ರೂಪಾಯಿ ಮೊತ್ತದ ಜೆಜೆಎಮ್ ಕಾಮಗಾರಿ ಬಗ್ಗೆ ಈಗಾಗಲೇ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ. ಸಾರ್ವಜನಿಕರಿಗೆ ಕುಡಿಯುವ ನೀರು ಕಲ್ಪಿಸಿ ಕೊಡುವ ಮೂಲಕ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಜೆಜೆಎಮ್ ಬಗ್ಗೆ ಹಲವು ಕಡೆಗಳಲ್ಲಿ ಅಪಸ್ವರಗಳು ಬರುತ್ತಿವೆ. ಸರ್ಕಾರದ ಈ ಯೋಜನೆಯನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಶಾಸಕರು ಹೇಳಿದರು.

ಕೌಜಲಗಿ-ಮನ್ನಿಕೇರಿ, ಕೌಜಲಗಿ-ಕುಲಗೋಡ, ಬೇಟಗೇರಿ-ಬಗರನಾಳ, ತುಕ್ಕಾನಟ್ಟಿ ರಸ್ತೆಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಇದೇ ಮಾರ್ಚ್‌ ತಿಂಗಳ ಒಳಗಾಗಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದರು.

ಸಭೆಯಲ್ಲಿ ಮೂಡಲಗಿ ತಹಶೀಲ್ದಾರ ಮಹಾದೇವ ಸನಮುರಿ, ಗೋಕಾಕ ತಹಶೀಲ್ದಾರ ಡಾ.ಮೋಹನ ಭಸ್ಮೆ, ಮೂಡಲಗಿ ತಾ.ಪಂ ಇಒ ಎಫ್.ಜಿ.ಜಿನನ್ನವರ, ಗೋಕಾಕ ತಾ.ಪಂ ಇಒ ಉದಯಕುಮಾರ ಕಾಂಬಳ್ಳೆ, ಮೂಡಲಗಿ ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಸೇರಿದಂತೆ ಗೋಕಾಕ ಮತ್ತು ಮೂಡಲಗಿ ತಾಲೂಕಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Share this article