ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ

KannadaprabhaNewsNetwork | Published : Feb 5, 2024 1:48 AM

ಸಾರಾಂಶ

ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಸದ್ಭಳಕೆ ಮಾಡಿಕೊಂಡು ಮುಂದಿನ ಜುಲೈವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಬಹುದಾಗಿದ್ದು, ಈ ಕುರಿತು ಅಗತ್ಯ ಕ್ರಮ ವಹಿಸಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಸದ್ಭಳಕೆ ಮಾಡಿಕೊಂಡು ಮುಂದಿನ ಜುಲೈವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಬಹುದಾಗಿದ್ದು, ಈ ಕುರಿತು ಅಗತ್ಯ ಕ್ರಮ ವಹಿಸಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೂಚನೆ ನೀಡಿದರು.

ಆಲಮಟ್ಟಿ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಲಸಂಪನ್ಮೂಲ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಆಲಮಟ್ಟಿ ಹಾಗೂ ನಾರಾಯಣಪೂರ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಸದ್ಭಳಕೆಗೆ ಮಾಡಿಕೊಂಡು ದೀರ್ಘಾವಧಿ ಯೋಜನೆ ರೂಪಿಸಿಕೊಂಡು ಇದ್ದ ನೀರನ್ನು ಮುಂದಿನ ಜುಲೈವರೆಗೆ ಬಳಕೆ ಮಾಡಿಕೊಳ್ಳಬಹುದಾಗಿದ್ದು, ಈ ಕುರಿತು ಸ್ಥಳೀಯ ಜನಪ್ರತಿನಿಧಿಗಳೂ ಸೇರಿದಂತೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ದೀರ್ಘಾವಧಿ ಯೋಜನೆಯನ್ನು ರೂಪಿಸಿಕೊಂಡು ಮುಂದಿನ ಬೇಸಿಗೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯ ವಿವಿಧ ಶಾಸಕರು ಬಹುಹಳ್ಳಿ ಕುಡಿಯುವ ನೀರಿನ ಕೆರೆ ತುಂಬಿಸುವ ಯೋಜನೆಯಡಿ ಕೊನೆಯಂಚಿನವರೆಗೆ ನೀರು ತಲುಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಈ ಕುರಿತು ಇರುವ ಸಣ್ಣಪುಟ್ಟ ಅಡೆ-ತಡೆಗಳನ್ನು ನಿವಾರಿಸಿಕೊಂಡು ಕೊನೆಯಂಚಿನವರೆಗೆ ನೀರು ಹರಿಸಲು ಕ್ರಮ ವಹಿಸಬೇಕು ಎಂದರು.

ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಕರ್ನಾಟಕ ಸೋಪ್ಸ್ ಮತ್ತು ಡಿಟಜೆಂಟ್ ನಿಯಮಿತದ ಅಧ್ಯಕ್ಷ ಶಾಸಕ ಸಿ.ಎಸ್.ನಾಡಗೌಡ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಪ್ರಕಾಶ ರಾಠೋಡ, ವಿಠ್ಠಲ ಕಟಕದೊಂಡ, ಅಶೋಕ ಮನಗೂಳಿ, ರಾಜುಗೌಡ ಪಾಟೀಲ, ಜೆ.ಟಿ.ಪಾಟೀಲ, ಎಚ್.ವಾಯ್.ಮೇಟಿ, ಕೃಷ್ಣ ಭಾಗ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಮೋಹನರಾಜ್, ಜಿಲ್ಲಾಧಿಕಾರಿ ಟಿ.ಭೂಬಾಲನ್, ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಕೃಷ್ಣ ಭಾಗ್ಯ ಜಲನಿಗದಮ ಮುಖ್ಯ ಅಭಿಯಂತರ ಎಚ್.ಎನ್.ಶ್ರೀನಿವಾಸ ಸೇರಿದಂತೆ ಮುಂತಾದವರು ಇದ್ದರು.

Share this article