ಕನ್ನಡಪ್ರಭ ವಾರ್ತೆ ಮಂಡ್ಯ
ಕಳೆದ ಹಲವಾರು ವರ್ಷಗಳಿಂದ ಜೀವಧಾರೆ ಟ್ರಸ್ಟ್ನ ನಟರಾಜು ಅವರು ರಾಜ್ಯ, ಅಂತಾರಾಜ್ಯಗಳಲ್ಲಿ ಯಶಸ್ವಿಯಾಗಿ ರಕ್ತದಾನ ಶಿಬಿರಗಳನ್ನು ಸಂಘಟಿಸಿ ರಕ್ತ ಸಂಗ್ರಹಿಸಿದ್ದರು. ಜಿಲ್ಲೆಯಲ್ಲೂ ಸಹ ಹಲವಾರು ರಕ್ತದಾನ ಶಿಬಿರಗಳನ್ನು ಮಾಡಿ ಸರ್ಕಾರಿ ಆಸ್ಪತ್ರೆಗಳಿಗೆ ರಕ್ತವನ್ನು ನೀಡಿದ್ದರು.
ಅದೇ ರೀತಿ ಕಳೆದ ಗುರುವಾರ ನಡೆದ ರಕ್ತದಾನ ಶಿಬಿರದಲ್ಲಿ 1525 ಯೂನಿಟ್ ರಕ್ತ ಸಂಗ್ರಹವಾಗಿತ್ತು. ಇದರಲ್ಲಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ 212, ಆದಿಚುಂಚನಗಿರಿ ಆಸ್ಪತ್ರೆಗೆ 106, ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ 57, ಮಂಡ್ಯ ಜಿಲ್ಲಾ ಆಸ್ಪತ್ರೆಗೆ 1011 ಹಾಗೂ ಚಾಮರಾಜನಗರ ಆಸ್ಪತ್ರೆಗೆ 138 ಯೂನಿಟ್ ರಕ್ತವನ್ನು ವಿತರಿಸಲಾಗಿತ್ತು.ಇಂತಹ ಮಹತ್ಕಾರ್ಯ ಮಾಡುತ್ತಿರುವ ನಟರಾಜು ಅವರಿಗೆ ಗಣರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ನಾಳೆ ನಗರದ ಸರ್ ಎಂ.ವಿ.ಕ್ರೀಡಾಂಗಣದಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ವಿತರಿಸಿ ಗೌರವಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ.
ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಹಾಗೂ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂಚಾಲಕರಾದ ಡಾ.ಮೀರಾ ಶಿವಲಿಂಗಯ್ಯ ಅವರಿಗೆ ಅಭಿನಂದಿಸಲಾಗುವುದು. ಗಾಯಕರಾದ ಹೇಮಂತ್ ಶಮಿತಾ ಮಲ್ನಾಡ್ ಮತ್ತು ಹರ್ಷ ತಂಡದಿಂದ ರಸಸಂಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ.