ಕನ್ನಡ ಸಾಹಿತ್ಯದ ಅನನ್ಯತೆ ಅರಿವು ಅಗತ್ಯ: ಶಿಕ್ಷಕ ಕೋದಂಡರಾಮ್Awareness of the uniqueness of Kannada literature is essential: Teacher Kodandaram

KannadaprabhaNewsNetwork |  
Published : Sep 10, 2025, 01:03 AM IST
ದೊಡ್ಡಬಳ್ಳಾಪುರದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕನ್ನಡದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. | Kannada Prabha

ಸಾರಾಂಶ

ಕನ್ನಡ ಭಾಷೆ ಮತ್ತು ಸಾಹಿತ್ಯದ ಓದು ಪಠ್ಯಪುಸ್ತಕಗಳಿಗಷ್ಟೇ ಸೀಮಿತವಾಗಬಾರದು. ವಿದ್ಯಾರ್ಥಿಗಳು ಕನ್ನಡ ಕಾವ್ಯದ ರಸವನ್ನು ಗ್ರಹಿಸುವ ಶಕ್ತಿ ಬೆಳೆಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಇಲ್ಲಿನ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ನಗರದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕ ಕೋದಂಡರಾಮ್‌ ಮಾತನಾಡಿ, ಜಗತ್ತಿನ ಪ್ರಮುಖ‌ ಭಾಷೆಗಳಲ್ಲಿ ಕನ್ನಡ ಭಾಷೆ ಪ್ರಾಚೀನ ಮತ್ತು ಅನನ್ಯತೆಯಲ್ಲಿ ಮಹತ್ವದ ಸ್ಥಾನ ಪಡೆದಿದೆ. ಕನ್ನಡ ಸಾಹಿತ್ಯವು ಭಾಷಾ ವೈಭವದೊಂದಿಗೆ, ಕನ್ನಡ ನಾಡಿನ ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ. ಕಾವ್ಯ, ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಭಾವಗೀತೆ ಮುಂತಾದ ವಿವಿಧ ಪ್ರಕಾರಗಳಲ್ಲಿ ಕನ್ನಡ ಸಾಹಿತ್ಯ ಸಮೃದ್ಧವಾಗಿದೆ ಎಂದರು.

ಕನ್ನಡ ಭಾಷೆ ಮತ್ತು ಸಾಹಿತ್ಯದ ಓದು ಪಠ್ಯಪುಸ್ತಕಗಳಿಗಷ್ಟೇ ಸೀಮಿತವಾಗಬಾರದು. ವಿದ್ಯಾರ್ಥಿಗಳು ಕನ್ನಡ ಕಾವ್ಯದ ರಸವನ್ನು ಗ್ರಹಿಸುವ ಶಕ್ತಿ ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರಿಗೂ ಸಾಹಿತ್ಯದ ಓದು ಜೀವನಕ್ಕೆ ಬಹಳ ಮುಖ್ಯ. ಸಾಹಿತ್ಯದಿಂದ ಮಾನಸಿಕ ನೆಮ್ಮದಿ ಪಡೆಯಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಪುಸ್ತಕ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು ಎಂದರು.

ಜವಾಹರ ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಅಭಿರುಚಿ ಬೆಳೆಸುವಲ್ಲಿ ಶಿಕ್ಷಕರು, ಪೋಷಕರು ಮಹತ್ವದ ಪಾತ್ರವಹಿಸಬೇಕಾಗಿದೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯ ಅಭಿಮಾನ ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕಾಗಿದೆ. ಕನ್ನಡ ಬಳಸಿದಾಗ ಮಾತ್ರ ಕನ್ನಡವನ್ನು ಉಳಿಸಿ, ಬೆಳೆಸಲು ಸಾಧ್ಯ ಎಂದರು.

ಗಮನ ಸೆಳೆದ ಗರೀಮಾ ಕುಮಾರಿ:

ವಿದ್ಯಾರ್ಥಿನಿ ಗರೀಮಾ ಕುಮಾರಿ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದಿದ್ದಾರೆ. ಗರೀಮಾ ಕುಮಾರಿ ಪೋಷಕರು ಬಿಹಾರ ರಾಜ್ಯದಿಂದ ಉದ್ಯೋಗಕ್ಕಾಗಿ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಬಂದಿದ್ದಾರೆ. ಇವರ ಮನೆಯ ಭಾಷೆ ಹಿಂದಿಯಾದರೂ, ಗರೀಮಾ ಕುಮಾರಿ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದಿರುವುದು ಗಮನ ಸೆಳೆದಿದೆ.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ಸಂಘಟನಾ ಕಾರ್ಯದರ್ಶಿ ರಾಜಘಟ್ಟ ರವಿ, ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ರಂಗಭೂಮಿ ಕಲಾವಿದೆ ಪುಷ್ಪಮೋಹನ್, ದೊಡ್ಡಬಳ್ಳಾಪುರ ತಾಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಪ್ರತಿನಿಧಿಗಳಾದ ಮುನಿರಾಜು, ಸಫೀರ್, ಕಸಬಾ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು, ತೂಬಗೆರೆ ಹೋಬಳಿ ಘಟಕದ ಗೌರವ ಕಾರ್ಯದರ್ಶಿ ಉದಯರಾಧ್ಯ, ಲಾವಣ್ಯ ಪದವಿ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ, ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಸಿ.ಅಣ್ಣಯ್ಯ, ಇಸ್ತೂರು ಕೋದಂಡರಾಮ ಭಜನಾ ಮಂಡಲಿಯ ರಂಗಸ್ವಾಯಯ್ಯ, ಕಲಾವಿದ ದರ್ಗಾಜೋಹಳ್ಳಿ ಮಲ್ಲೇಶ್, ಹಾಡೋನಹಳ್ಳಿ ಗೋವಿಂದರಾಜು ಮುಂತಾದವರು ಭಾಗವಹಿಸಿದ್ದರು.

PREV

Recommended Stories

ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ಮುಂದೇಕೆ, ಈಗ್ಲೆ ಮುಸ್ಲಿಂ ಆಗ್ಬಿಡಿ : ಬಿಜೆಪಿಗರ ಕಿಡಿ