ಕನ್ನಡಪ್ರಭ ವಾರ್ತೆ ನಾಗಮಂಗಲ
ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ ಮೂಲ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶ್ರೀಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥಶ್ರೀಗಳ ಸಾನಿಧ್ಯದಲ್ಲಿ ಕಳೆದ ಎರಡು ದಿನಗಳಿಂದ ಹೋಮ ಹವನಾದಿ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದು ಶ್ರೀಗುರು ಭೈರವೈಕ್ಯ ಮಂದಿರಕ್ಕೆ ಕಳಸ ಪ್ರತಿಷ್ಠಾಪನೆ ಮಾಡಲಾಗಿತ್ತು.
ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥಶ್ರೀಗಳ ಸಾನಿಧ್ಯದಲ್ಲಿ ಭಾನುವಾರ ಬೆಳಗ್ಗೆ ಶ್ರೀಕ್ಷೇತ್ರದ ಶ್ರೀಗುರು ಭೈರವೈಕ್ಯ ಮಂದಿರದಲ್ಲಿ ಜರುಗಿದ ಹೋಮ ಹವನಾದಿ ಧಾರ್ಮಿಕ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಶ್ರೀಗಳ ಜೊತೆಗೂಡಿ ಕುಂಭಾಭಿಷೇಕ ನೆರವೇರಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿದರು. ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಶ್ರೀಗಳು ಆಶೀರ್ವಚನ ನೀಡಿದರು.ಕ್ಷೇತ್ರಕ್ಕೆ ಭೇಟಿ ಕೊಟ್ಟ ಸಚಿವರಿಗೆ ಡಾ.ನಿರ್ಮಲಾನಂದನಾಥಶ್ರೀಗಳು ಶಾಲು ಏಲಕ್ಕಿ ಹಾರ ಹಾಕಿ ಭೈರವೈಕ್ಯಶ್ರೀಗಳ ಭಾವಚಿತ್ರ ಹಾಗೂ ನೆನಪಿನ ಕಾಣಿಕೆ ಕೊಟ್ಟು ಆಶೀರ್ವದಿಸಿದರು.
ಶ್ರೀ ಕ್ಷೇತದಲ್ಲಿ ಶ್ರೀಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಲು ಏ.15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಏ.15ರ ಬುಧವಾರ ಬೆಳಗ್ಗೆ 11 ಗಂಟೆಗೆ ಶ್ರೀಮಠಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಡಾ.ನಿರ್ಮಲಾನಂದನಾಥ ಶ್ರೀಗಳೊಂದಿಗೆ ಕೆಲ ಕಾಲ ಚರ್ಚೆ ನಡೆಸಿದ ಸಚಿವರು ಅಂದು ವೇದಿಕೆ ಸಮಾರಂಭ ನಡೆಯುವ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು.