ರೋಣ: ಕಾಂಗ್ರೆಸ್ ಪಕ್ಷವು ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಸಿಗಬೇಕು ಎಂಬ ಸದುದ್ದೇಶ ಹೊಂದಿದೆ. ಹಾಗಾಗಿ ಕಾಂಗ್ರೆಸ್ನ ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ಅ. 5ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಅಕ್ಕಮಹಾದೇವಿ ಕಲ್ಯಾಣಮಂಟಪದಲ್ಲಿ ಒಬಿಸಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಸಂಗನಗೌಡ(ಮಿಥುನ) ಜಿ. ಪಾಟೀಲ ತಿಳಿಸಿದರು.
ಕೆಪಿಸಿಸಿ ಒಬಿಸಿ ವಿಭಾಗದ ರಾಜ್ಯ ಉಪಾಧ್ಯಕ್ಷ ಎಚ್.ಎಸ್. ಸೋಂಪುರ ಮಾತನಾಡಿ, ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ, ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಒಬಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಹಿಂದುಳಿದ ವರ್ಗದ ಏಳಿಗೆಗಾಗಿ ಸಿಎಂ ಸಿದ್ದರಾಮಯ್ಯ ಅವರು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಒಬಿಸಿಯಲ್ಲಿ 108 ವರ್ಗಗಳಿವೆ. ಇವುಗಳೆಲ್ಲವನ್ನು ಒಗ್ಗೂಡಿಸಿ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದರು.
ರೋಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವೀರಣ್ಣ ಶೆಟ್ಟರ್ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಒಬಿಸಿ ರಾಜ್ಯ ಉಪಾಧ್ಯಕ್ಷ, ರೋಣ ತಾಲೂಕು ವೀಕ್ಷಕ ಶಿವಾನಂದ ಪಾಚಂಗಿ, ಹಿಂದುಳಿದ ವರ್ಗಗಳ ವಿಭಾಗ ಜಿಲ್ಲಾಧ್ಯಕ್ಷ ಎಫ್.ಎಚ್. ಅಗಸಿಮುಂದಿನ, ಒಬಿಸಿ ರೋಣ ತಾಲೂಕು ಅಧ್ಯಕ್ಷ ಶರಣಪ್ಪ ಬಾವಿ, ಗಜೇಂದ್ರಗಡ ತಾಲೂಕು ಅಧ್ಯಕ್ಷ ಶ್ರೀಕಾಂತ ಅವದೂತ, ಗಜೇಂದ್ರಗಡ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶರಣಪ್ಪ ಬೆಟಗೇರಿ, ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಯಚ್ಚರಗೌಡ ಗೋವಿಂದಗೌಡ್ರ, ಮಾಜಿ ಅಧ್ಯಕ್ಷ ಬಸವರಾಜ ನವಲಗುಂದ, ಗಜೇಂದ್ರಗಡ ತಾಲೂಕು ಕುರುಬ ಸಮಾಜ ಅಧ್ಯಕ್ಷ ಅಂದಪ್ಪ ಬಿಚ್ಚೂರ ಮುಂತಾದವರು ಉಪಸ್ಥಿತರಿದ್ದರು.