ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ 18.13 ಕೋಟಿ ರು. ಲಾಭ

KannadaprabhaNewsNetwork |  
Published : Apr 21, 2026, 03:00 AM IST
ಸಂಸ್ಥೆಯ ಅಧ್ಯಕ್ಷ ಜಯಕರ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ವಿವರಗಳನ್ನುನೀಡಿದರು | Kannada Prabha

ಸಾರಾಂಶ

ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ 2025-26ನೇ ಸಾಲಿನಲ್ಲಿ 4062.29 ಕೋಟಿ ರು. ವಾರ್ಷಿಕ ವಹಿವಾಟು ನಡೆಸಿ 18.13 ಕೋಟಿ ರು. ಲಾಭ ಗಳಿಸಿದೆ.

ಉಡುಪಿ: ರಾಜ್ಯದ ಪ್ರತಿಷ್ಠಿತ ಸಹಕಾರ ಸಂಸ್ಥೆ ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ 2025-26ನೇ ಸಾಲಿನಲ್ಲಿ 4062.29 ಕೋಟಿ ರು. ವಾರ್ಷಿಕ ವಹಿವಾಟು ನಡೆಸಿ 18.13 ಕೋಟಿ ರು. ಲಾಭ ಗಳಿಸಿದೆ. ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಸಾಧನೆ ಪ್ರಗತಿಗಳ ಬಗ್ಗೆ ವಿವರ ನೀಡಿದರು.

ಸಹಕಾರ ಕ್ಷೇತ್ರದಲ್ಲಿ 108 ವರ್ಷಗಳಿಂದ ಸಾರ್ಥಕ ಸೇವೆ ಸಲ್ಲಿಸುತ್ತಿರುವ ಸಂಘವು, 2025-26ನೇ ಆರ್ಥಿಕ ವರ್ಷಾಂತ್ಯಕ್ಕೆ 22,869 ಸದಸ್ಯರನ್ನು ಹೊಂದಿದ್ದು, 658.80 ಕೋಟಿ ರು. ಠೇವಣಿ ಸಂಗ್ರಹಿಸಿ, ಕಳೆದ ಸಾಲಿಗಿಂತ ಶೇ.14.93ರಷ್ಟು ಹೆಚ್ಚಳ ಸಾಧಿಸಿದೆ. ಸದಸ್ಯರ ಹೊರಬಾಕಿ ಸಾಲ 533.96 ಕೋಟಿ ಕು. ಆಗಿದ್ದು, ಇದು ಕಳೆದ ಸಾಲಿಗಿಂತ ಶೇ. 11.94ರಷ್ಟು ಏರಿಕೆಯಾಗಿದೆ. ಸಂಘವು 117.60 ಕೋಟಿ ರು. ನಿಧಿಗಳು ಹಾಗೂ 268.30 ಕೋಟಿ ರು. ಹೂಡಿಕೆಗಳನ್ನು ಹೊಂದಿದ್ದು, ಒಟ್ಟು 791.46 ಕೋಟಿ ರು. ದುಡಿಯುವ ಬಂಡವಾಳ ಹೊಂದಿದೆ.ಕುಂದಾಪುರದಲ್ಲಿ 12ನೇ ಶಾಖೆ: ಸಂಘವು 11 ಶಾಖೆಗಳನ್ನು ಹೊಂದಿದ್ದು, 8 ಶಾಖೆಗಳು ಸಂಘದ ಸ್ವಂತ ನಿವೇಶನಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. 12ನೇ ಶಾಖೆಗಾಗಿ ಕುಂದಾಪುರದ ಹೃದಯಭಾಗದಲ್ಲಿ ಕಚೇರಿ ಖರೀದಿಸಲಾಗಿದ್ದು, ಅದರ ಕಾಮಗಾರಿ ಅಂತಿಮ ಹಂತದಲ್ಲಿದೆ. ಅಗತ್ಯ ಸೌಲಭ್ಯಗಳೊಂದಿಗೆ ಶಾಖೆಯು ಶೀಘ್ರದಲ್ಲೇ ಗ್ರಾಹಕರ ಸೇವೆಗೆ ಸಿದ್ಧವಾಗಲಿದೆ.

ಪ್ರಶಸ್ತಿಗಳು, ಸಾಮಾಜಿಕ ಸೇವೆ: ಸಂಘವು 2 ಬಾರಿ ರಾಷ್ಟ್ರ ಪ್ರಶಸ್ತಿ, 9 ಬಾರಿ ರಾಜ್ಯ ಮಟ್ಟದ ಪ್ರಶಸ್ತಿ ಹಾಗೂ 19 ಬಾರಿ ಅವಿಭಜಿತ ದ.ಕ ಜಿಲ್ಲಾ ಪ್ರಶಸ್ತಿಗಳನ್ನು ಪಡೆದು ಯಶಸ್ವಿ ಕ್ರೆಡಿಟ್ ಸಹಕಾರ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ವ್ಯವಹಾರ ಲಾಭದೊಂದಿಗೆ ಸಾಮಾಜಿಕ ಹೊಣೆಗಾರಿಕೆಯನ್ನು ನಿಭಾಯಿಸುತ್ತಿರುವ ಸಂಘವು ಪ್ರತಿವರ್ಷ ಸುಮಾರು 25 ಲಕ್ಷ ರು.ಗಳನ್ನು ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ಮೀಸಲಿಡುತ್ತಿದೆ.

ಸಹಕಾರ ಮಾಣಿಕ್ಯ ಪ್ರಶಸ್ತಿ: 72ನೇ ಅಖಿಲ ಭಾರತ ಸಹಕಾರ ಸಪ್ತಾಹ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಸಂಘಕ್ಕೆ ಸಹಕಾರ ಮಾಣಿಕ್ಯ ಪ್ರಶಸ್ತಿ, ನಗದು ಬಹುಮಾನ ಹಾಗೂ 5 ಗ್ರಾಂ ಬಂಗಾರದ ಪದಕ ಪಡೆದಿದೆ. ಸಹಕಾರ ಕ್ಷೇತ್ರದಲ್ಲಿ ಸಂಘದ ಉತ್ತಮ ಸೇವೆ. ನಿರ್ವಹಣೆ ಹಾಗೂ ಸಾಧನೆಯನ್ನು ಪರಿಗಣಿಸಿ ಈ ಗೌರವ ದೊರೆತಿದ್ದು, ಉಡುಪಿ ಜಿಲ್ಲೆಯ ಮೊದಲ ಕ್ರೆಡಿಟ್ ಸಹಕಾರ ಸಂಘವಾಗಿ ಈ ಪ್ರಶಸ್ತಿ ಪಡೆದಿದೆ.

ಚೇತನಾ ಮೊಬೈಲ್ ಆ್ಯಪ್: ಡಿಜಿಟಲೀಕರಣದ ಭಾಗವಾಗಿ ಅಭಿವೃದ್ಧಿಪಡಿಸಿದ ಚೇತನಾ ಮೊಬೈಲ್ ಆ್ಯಪ್ ಮೂಲಕ ಗ್ರಾಹಕರು ತಮ್ಮ ಖಾತೆಗಳಿಗೆ ಸಂಬಂಧಿಸಿದಂತೆ ಹಣ ವರ್ಗಾವಣೆ, ಸಾಲ ಖಾತೆ ನಿರ್ವಹಣೆ, ಸಂಘದ ನೂತನ ಯೋಜನೆಗಳ ಮಾಹಿತಿಯನ್ನು ಪಡೆಯಬಹುದಾಗಿದೆ. ಈ ಆ್ಯಪ್ ಗೆ ಬಳಕೆದಾರರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಸಂಘದ ಎಲ್ಲ ಶಾಖೆಗಳಲ್ಲಿ ಸೇಫ್ ಲಾಕರ್, ಇ-ಸ್ಟಾಂಪಿಂಗ್, ಪಾನ್ ಕಾರ್ಡ್ ಸೇವೆ, ಹಣ ವರ್ಗಾವಣೆ, ಆರೋಗ್ಯ ಕಾರ್ಡ್, ವಿಮಾ ಸೇವೆಗಳು, ಮೊಬೈಲ್ ಮೂಲಕ ದೈನಿಕ ಠೇವಣಿ ಸಂಗ್ರಹಣೆ, ಶೂನ್ಯ ಬ್ಯಾಲೆನ್ಸ್ ವಿದ್ಯಾನಿಧಿ ಖಾತೆ, ಮಿಸ್ಡ್ ಕಾಲ್ ಸೇವೆ ಹಾಗೂ ಉಚಿತ ಎಸ್‌ಎಂಎಸ್ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.ಸಹಕಾರಿ ಸೌಧ ನಿರ್ಮಾಣ: ಮುಂದಿನ ವರ್ಷದಲ್ಲಿ 750 ಕೋಟಿ ರು. ಠೇವಣೆ ಹಾಗೂ 650 ಕೋಟಿ ರು. ಸಾಲ ವಿತರಣೆ ಸೇರಿದಂತೆ ಒಟ್ಟು ರೂ. 1400 ಕೋಟಿ ವ್ಯವಹಾರ ನಡೆಸುವ ಗುರಿಯನ್ನು ಸಂಸ್ಥೆಯು ಹೊಂದಿದೆ. ಇದಲ್ಲದೇ ಉಡುಪಿಯ ಹೃದಯಭಾಗದಲ್ಲಿ ಈಗಾಗಲೇ ಖರೀದಿಸಿರುವ 1 ಎಕರೆ ಜಾಗದಲ್ಲಿ ಅಂದಾಜು 10 ಕೋಟಿ ರು. ವೆಚ್ಚದಲ್ಲಿ ಸಹಕಾರ ಸೌಧ ನಿರ್ಮಾಣದ ಯೋಜನೆಯನ್ನು ಕೈಗೊಂಡಿದೆ.

ಸುದ್ದಿಗೋಷ್ಟಿಯಲ್ಲಿ ಉಪಾಧ್ಯಕ್ಷರಾದ ಜಾರ್ಜ್ ಸಾಮ್ಯುಯೆಲ್, ಆಡಳಿತ ಮಂಡಳಿಯ ಸದಸ್ಯರಾದ ಸಂಜೀವ ಕಾಂಚನ್, ಪುರುಷೋತ್ತಮ ಪಿ. ಶೆಟ್ಟಿ, ಉಮಾನಾಥ ಎಲ್, ವಿನಯ ಕುಮಾರ್ ಟಿ.ಎ. ಪದ್ಮನಾಭ ನಾಯಕ್, ಹಾಜಿ ಸೈಯದ್ ಅಬ್ದುಲ್ ರಜಾಕ್, ಸದಾಶಿವ ನಾಯ್ಕ, ಸಾಧು ಸಾಲ್ಯಾನ್, ಜಯಾ ಶೆಟ್ಟಿ. ಗಾಯತ್ರಿ ಎಸ್. ಭಟ್, ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಶಾದೇವಿ ಗುಡಗುಂಟಿಗೆ ಗೌರವ ಡಾಕ್ಟರೇಟ್‌ ಪ್ರದಾನ ಇಂದು
ವಿಶ್ವ ಶಾಂತಿ, ಒಳಿತಿಗಾಗಿ ಪಂಚ ಕಲ್ಯಾಣ ಮಹೋತ್ಸವ