ಟನ್‌ ಕಬ್ಬಿಗೆ ₹3300ಕ್ಕೆ ಬಾಗಲಕೋಟೆ ಫ್ಯಾಕ್ಟ್ರಿಗಳ ಒಪ್ಪಿಗೆ

KannadaprabhaNewsNetwork |  
Published : Nov 10, 2025, 01:15 AM IST
ಕಬ್ಬು ಕಟಾವು | Kannada Prabha

ಸಾರಾಂಶ

ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಪಡಿಸಿ ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಭಾನುವಾರ ಸಕ್ಕರೆ ಕಾರ್ಖಾನೆಗಳ ಮಾಲೀಕರು ಸಭೆ ನಡೆಸಿದರು.  ಈ ಸಭೆಯಲ್ಲಿ ಸರ್ಕಾರ ಹೇಳಿದ ದರ ನೀಡಲು ಬಾಗಲಕೋಟೆ ಜಿಲ್ಲಾ ಸಕ್ಕರೆ ಕಾರ್ಖಾನೆಗಳ ಮಾಲೀಕರು ಒಪ್ಪಿಗೆ ಸೂಚಿಸಿದ್ದಾರೆ.

 ಬಾಗಲಕೋಟೆ :  ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಪಡಿಸಿ ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಭಾನುವಾರ ಸಕ್ಕರೆ ಕಾರ್ಖಾನೆಗಳ ಮಾಲೀಕರು ಸಭೆ ನಡೆಸಿದರು. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಸರ್ಕಾರ ಹೇಳಿದ ದರ ನೀಡಲು ಬಾಗಲಕೋಟೆ ಜಿಲ್ಲಾ ಸಕ್ಕರೆ ಕಾರ್ಖಾನೆಗಳ ಮಾಲೀಕರು ಒಪ್ಪಿಗೆ ಸೂಚಿಸಿದ್ದಾರೆ.

ನವನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಸಂಗಪ್ಪ, ಎಸ್ಪಿ ಸಿದ್ದಾರ್ಥ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಮಾಲೀಕರು ಪಾಲ್ಗೊಂಡಿದ್ದರು. ಸರ್ಕಾರ ನಿಗದಿಪಡಿಸಿದ ದರ ನೀಡಲು ಕಾರ್ಖಾನೆಗಳ ಮಾಲೀಕರು ಒಪ್ಪಿಗೆ ಸೂಚಿಸಿದರು.

ಎಲ್ಲ ಕಾರ್ಖಾನೆಗಳ ಮಾಲೀಕರು ಸಭೆಗೆ

ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಬೀಳಗಿ ಶುಗರ್ಸ್ ಮಾಲೀಕ ಎಸ್.ಆರ್.ಪಾಟೀಲ್, ಜಿಲ್ಲೆಯ ಬಹುತೇಕ ಎಲ್ಲ ಕಾರ್ಖಾನೆಗಳ ಮಾಲೀಕರು ಸಭೆಗೆ ಬಂದಿದ್ದರು. ಸುಮಾರು ಎಂಟು ತಾಸು ಸಭೆ ನಡೆಯಿತು. ಸರ್ಕಾರ ರಿಕವರಿ ಆಧಾರದ ಮೇಲೆ ದರ ನಿಗದಿ ಮಾಡಿದೆ. ಸರ್ಕಾರದ ಆದೇಶದ ಪ್ರಕಾರ ಬಿಲ್‌ ಪಾವತಿಗೆ ಮಾಲೀಕರು ಒಪ್ಪಿದ್ದಾರೆ. ಈ ಬಗ್ಗೆ ಲಿಖಿತವಾಗಿ ಮನವಿ ಕೊಟ್ಟಿದ್ದೇವೆ. ರೈತರ ಹಿತದೃಷ್ಟಿಯಿಂದ ಆದಷ್ಟು ಬೇಗ ಕಾರ್ಖಾನೆ ಆರಂಭವಾಗಬೇಕಿದೆ ಎಂದರು. 

ಮುಧೋಳದಲ್ಲಿ ಸಚಿವರ ನೇತೃತ್ವದ ಸಂಧಾನ ವಿಫಲ:

ಈ ಮಧ್ಯೆ, ಟನ್ ಕಬ್ಬಿಗೆ 3,500 ರೂ.ದರ ನಿಗದಿಗೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಭಾನುವಾರ ಧಾರವಾಡ-ವಿಜಯಪುರ-ಮುಧೋಳ ರಾಜ್ಯ ಹೆದ್ದಾರಿ ಬಂದ್ ಮಾಡಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಖಾನೆಗಳ ಮಾಲೀಕರೇ ಸ್ಥಳಕ್ಕೆ ಬಂದು, ರೈತರ ಜೊತೆ ಚರ್ಚೆ ನಡೆಸಬೇಕು. ನಮ್ಮ ಬೇಡಿಕೆಗೆ ಒಪ್ಪಿಗೆ ಸೂಚಿಸಬೇಕು ಎಂದು ಪಟ್ಟು ಹಿಡಿದರು.

ಇನ್ನೊಂದೆಡೆ, ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ಅವರು ಪ್ರತಿಭಟನಾನಿರತ ರೈತ ಮುಖಂಡರ ಜೊತೆ ಸಭೆ ನಡೆಸಿದರು. ಜಿಲ್ಲಾಧಿಕಾರಿ, ಎಸ್ಪಿ ಸಭೆಯಲ್ಲಿ ಪಾಲ್ಗೊಂಡಿದ್ದರು. ನಗರದ ಪ್ರವಾಸಿ ಮಂದಿರದಲ್ಲಿ ರೈತರ ಜೊತೆ ಸಭೆ ನಡೆಸಿದ ಬಳಿಕ ಸಚಿವರು, ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸಿದರು. ಆದರೆ, ಸರ್ಕಾರ ಘೋಷಣೆ ಮಾಡಿರುವ ದರಕ್ಕೆ ಮಾತ್ರ ನಾವು ಬದ್ಧ ಎಂದು ಸಕ್ಕರೆ ಕಾರ್ಖಾನೆಗಳ ಮಾಲೀಕರು ತಿಳಿಸಿದರು. ಟನ್ ಕಬ್ಬಿಗೆ 3,500 ರೂ. ನೀಡಬೇಕೆಂಬ ರೈತರ ಬೇಡಿಕೆಯನ್ನು ತಿರಸ್ಕರಿಸಿದರು. ಹೀಗಾಗಿ, ಸಚಿವರ ಸಂಧಾನ ಸಭೆ ವಿಫಲವಾಗಿದ್ದು, ರೈತರು ತಮ್ಮ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ