ಸ್ವಾಮೀಜಿಯ 11ನೇ ವರ್ಷದ ಪುಣ್ಯಾರಾಧನೆ
ಬಡವ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅನ್ನ ದಾಸೋಹದ ಜತೆಗೆ ಜ್ಞಾನ ದಾಸೋಹವನ್ನು ನೀಡಿದ ಮಹಾನ್ ಸಂತರು ಭೈರವೈಕ್ಯರಾದ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಎಂದು ಶಾಸಕ ಕೆ,ಎಂ ಶಿವಲಿಂಗೇಗೌಡ ತಿಳಿಸಿದರು. ಅರಸೀಕೆರೆಯಲ್ಲಿ ಸ್ವಾಮೀಜಿಯ ಆರಾಧನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭೈರವೈಕ್ಯ ಡಾ.ಬಾಲಗಂಗಾಧರನಾಥ ಸ್ವಾಮೀಜಿಯ 11ನೇ ವರ್ಷದ ಪುಣ್ಯಾರಾಧನೆಯನ್ನು ಭೈರವ ಯುವಕ ಸಂಘದ ವತಿಯಿಂದ ನಗರದ ಬಸವೇಶ್ವರ ವೃತ್ತದಲ್ಲಿ ಆಯೋಜಿಸಿದ ಆರಾಧನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಹಾಗೂ ಪರಿಸರ ಸಂರಕ್ಷಣೆ ಕೆಲಸ ಕಾರ್ಯಗಳ ಬಗ್ಗೆ ಅಪಾರ ಆಸಕ್ತಿಯನ್ನು ಹೊಂದಿದ್ದ ಬಾಲಗಂಗಾಧರನಾಥ ಸ್ವಾಮೀಜಿ ಈ ಎಲ್ಲಾ ಕ್ಷೇತ್ರಗಳಲ್ಲೂ ಕ್ರಾಂತಿಯನ್ನೇ ಉಂಟು ಮಾಡಿದರು. ಈಗ ಅವರು ನಮ್ಮೊಂದಿಗೆ ಇಲ್ಲದಿದ್ದರೂ ಸಹ ಅವರ ಅಗೋಚರ ಶಕ್ತಿ ನಮ್ಮನ್ನೆಲ್ಲಾ ಕೆಲಸ ಕಾರ್ಯಗಳನ್ನು ಸುಲಲಿತವಾಗಿ ನಡೆಸಲು ಪ್ರೇರಕ ಶಕ್ತಿಯಾಗಿದೆ. ಇಂತಹ ಮಾಹನ್ ಸಂತರನ್ನು ಕಣ್ಣರೇ ಕಂಡ ನಮ್ಮ ಜೀವನವೇ ಸಾರ್ಥಕ’ ಎಂದು ನುಡಿದರು.‘ಬಾಲಗಂಗಾಧರನಾಥ ಶ್ರೀಗಳು ದೈಹಿಕವಾಗಿ ಇಂದು ನಮ್ಮೊಂದಿಗೆ ಇಲ್ಲದೆ ಇದ್ದರೂ ಅವರು ಆಧ್ಯಾತ್ಮಿಕ ಕ್ಷೇತ್ರದಲ್ಲಿ ತೋರಿದ ದಾರಿ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಹಾಗೂ ಪರಿಸರ ಕ್ಷೇತ್ರಗಳಲ್ಲಿ ಮಾಡಿರುವ ಸಾಧನೆ ನಮ್ಮೆಲ್ಲರಿಗೂ ಆದರ್ಶವಾಗಿದೆಯಲ್ಲದೆ ಆ ಮೂಲಕ ನಮ್ಮೊಂದಿಗೆ ಸದಾ ಇದ್ದಾರೆ’ ಎಂದು ಸ್ಮರಿಸಿದರು.