ತರೀಕೆರೆ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ 17ನೇ ಬಜೆಟ್ ಮಂಡನೆಯ ಮೂಲಕ ತಾವು ಆರ್ಥಿಕ ತಜ್ಞರೆಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದ್ದಾರೆ.ಈ ಬಜೆಟ್ ದೂರದೃಷ್ಟಿಯುಳ್ಳ ಹಾಗೂ ಆರ್ಥಿಕ ಶಿಸ್ತಿನ ಬಜೆಟ್ ಆಗಿದ್ದು, ರಾಜ್ಯದ ಎಲ್ಲಾ ವರ್ಗದ ಜನರು, ಎಲ್ಲಾ ಪ್ರದೇಶ ಗಳು ಹಾಗೂ ವಿವಿಧ ಕ್ಷೇತ್ರಗಳ ಸಮಗ್ರ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಮಂಡಿಸಲಾಗಿದೆ. ವಿಶೇಷವಾಗಿ ಆರೋಗ್ಯ, ಶಿಕ್ಷಣ, ಕೃಷಿ, ಜಲಸಂಪನ್ಮೂಲ ಮತ್ತು ಉದ್ಯೋಗ ಸೃಷ್ಟಿ ಸೇರಿದಂತೆ ಮೂಲಭೂತ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದು ರಾಜ್ಯದ ಅಭಿವೃದ್ಧಿಗೆ ಬಲ ನೀಡಲಿದೆ ಎಂದು ತಿಳಿಸಿದ್ದಾರೆ.ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆಗೆ ₹100 ಕೋಟಿ ಮೀಸಲಿಟ್ಟಿರುವುದು ಕೃಷಿಕರಿಗೆ ಉತ್ತೇಜನ ನೀಡಲಿದೆ. ಪಂಚ ಗ್ಯಾರಂಟಿ ಯೋಜನೆಗಳಿಗೆ ಅಗತ್ಯ ಹಣ ಮೀಸಲಿಟ್ಟು ಯಾವುದೇ ಕಾರಣಕ್ಕೂ ಈ ಯೋಜನೆ ನಿಲ್ಲುವುದಿಲ್ಲ ಎಂದು ಸ್ಪಷ್ಟ ಪಡಿಸಿರುವುದು ಜನಸಾಮಾನ್ಯರಿಗೆ ಭರವಸೆ ನೀಡಿದೆ ಎಂದು ತಿಳಿಸಿದ್ದಾರೆ. ರೈತ ಸಮುದಾಯಕ್ಕೆ ₹30 ಸಾವಿರ ಕೋಟಿ ಸಾಲ ನೀಡುವ ತೀರ್ಮಾನ ಕೈಗೊಂಡಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ₹28,608 ಕೋಟಿ ಸೇರಿದಂತೆ ಮಹಿಳಾ ಪರ ಯೋಜನೆಗಳಿಗೆ ಒಟ್ಟು ₹94,663 ಕೋಟಿ ಮೀಸಲಿಟ್ಟಿರುವುದು ಮಹಿಳಾ ಸಬಲೀಕರಣದತ್ತ ಸರ್ಕಾರದ ಬದ್ಧತೆ ತೋರಿಸುತ್ತದೆ. 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧಿಸುವ ಕ್ರಾಂತಿಕಾರಕ ನಿರ್ಧಾರ ಮಕ್ಕಳ ಮಾನಸಿಕ ಆರೋಗ್ಯ ಮತ್ತು ಸುರಕ್ಷತೆಗೆ ಮಹತ್ವದ್ದಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದ ಆರ್ಥಿಕ ಶಿಸ್ತನ್ನು ಕಾಪಾಡಿ 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ಅಭಿನಂದನೆ. ಒಟ್ಟಾರೆ ಇದು ಸಮತೋಲಿತ ಮತ್ತು ಜನಪರ ಬಜೆಟ್ ಆಗಿದ್ದು, ರಾಜ್ಯವನ್ನು ಅಭಿವೃದ್ಧಿ ದಿಕ್ಕಿನಲ್ಲಿ ಕೊಂಡೊಯ್ಯುವ ಬದ್ಧತೆಯನ್ನು ಅವರು ಮತ್ತೊಮ್ಮೆ ತೋರಿಸಿದ್ದಾರೆ ಎಂದರು.-