ಕೊಪ್ಪಳ ಬಲ್ದೋಟಾ ಕಾರ್ಖಾನೆ ಕೆಲಸ ತಕ್ಷಣ ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರಿಗೆ ದೂರವಾಣಿ ಕರೆ ಮಾಡಿ ಸೂಚಿಸಿದ್ದರೂ ಬುಧವಾರ ಕಾರ್ಖಾನೆ ಕಾಮಗಾರಿ ಯಥಾ ಮುಂದುವರಿಸಲಾಗಿದೆ. .
ಕೊಪ್ಪಳ : ಕೊಪ್ಪಳ ಬಲ್ದೋಟಾ ಕಾರ್ಖಾನೆ ಕೆಲಸ ತಕ್ಷಣ ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರಿಗೆ ದೂರವಾಣಿ ಕರೆ ಮಾಡಿ ಸೂಚಿಸಿದ್ದರೂ ಬುಧವಾರ ಕಾರ್ಖಾನೆ ಕಾಮಗಾರಿ ಯಥಾ ಮುಂದುವರಿಸಲಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಜಿಲ್ಲಾಧಿಕಾರಿ ನಿರಾಕರಿಸಿದ್ದಾರೆ.
ಕೊಪ್ಪಳ ಬಳಿ ಬಲ್ಡೋಟಾ ಸ್ಟೀಲ್ ಪ್ಲ್ಯಾಂಟ್ ಲಿಮಿಟೆಡ್ (ಬಿಎಸ್ಪಿಎಲ್) ಕಂಪನಿ ₹ 54 ಸಾವಿರ ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಉಕ್ಕು ಕಾರ್ಖಾನೆ ನಿರ್ಮಾಣ ಕಾಮಗಾರಿ ವಿರೋಧಿಸಿ ಜಿಲ್ಲೆಯ ಸರ್ವಪಕ್ಷದ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತ್ತು. ಸಿದ್ದರಾಮಯ್ಯ ಜಿಲ್ಲಾಧಿಕಾರಿಗೆ ಕರೆ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿ ಕಾರ್ಖಾನೆ ಕೆಲಸ ಸ್ಥಗಿತಗೊಳಿಸುವಂತೆ ಸೂಚಿಸಿದ್ದರು. ಆದರೆ, ಜಿಲ್ಲಾಧಿಕಾರಿ ಯಾವುದೇ ಕ್ರಮ ಕೈಗೊಂಡಿಲ್ಲ.
ಬುಧವಾರ ಬೆಳಗ್ಗೆ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಪದಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಕಾರ್ಖಾನೆ ಕೆಲಸ ನಿರಾತಂಕವಾಗಿ ನಡೆದಿರುವುದು ಬೆಳಕಿಗೆ ಬಂದಿದೆ. ನಂತರ ಸಮಿತಿ ಸದಸ್ಯರು ಹಾಗೂ ಮಾಧ್ಯಮದವರು ಕಾರ್ಖಾನೆ ಸ್ಥಾಪನೆ ಸ್ಥಳಕ್ಕೆ ಭೇಟಿ ನೀಡಲು ಮುಂದಾದಾಗ ಭದ್ರತಾ ಸಿಬ್ಬಂದಿ ಅಡ್ಡಿಪಡಿಸಿದ್ದಾರೆ. ಈ ವೇಳೆ ವಾಗ್ದಾದ ನಡೆದು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪಟ್ಟು ಬಿಡದ ಹೋರಾಟಗಾರರು ಕಾರ್ಖಾನೆ ಸ್ವಾಧೀನ ಪಡಿಸಿಕೊಂಡಿರುವ ಜಾಗದಲ್ಲಿರುವ ಕೆರೆ ಅಂಗಳಕ್ಕೆ ಹೋಗಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಸಿಎಂ ಆದೇಶ ಪಾಲನೆಗೆ ಆಗ್ರಹಿಸಿದರು.
ಪ್ರತಿಭಟನೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಡಿವೈಎಸ್ಪಿ ಮುತ್ತಣ್ಣ ಸರ್ವಗೊಳ ಅವರು ಪರಿಸ್ಥಿತಿ ತಿಳಿಗೊಳಿಸಿದರು. ಬಸಾಪುರ ಕೆರೆ ಸಾರ್ವಜನಿಕರಿಗೆ ಮುಕ್ತವಾಗಿರಬೇಕು ಎಂದು ಧಾರವಾಡ ಹೈಕೋರ್ಟ್ ಆದೇಶಿಸಿದ್ದು ಅದರಂತೆ ಅವಕಾಶ ನೀಡುವಂತೆ ಸೂಚಿಸಲಾಯಿತು. ಕೆರೆಯಲ್ಲಿ ದನ, ಕುರಿಗಳು ನೀರು ಕುಡಿಯುವುದಕ್ಕೆ ಅವಕಾಶ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.