ಹರಪನಹಳ್ಳಿ: ತಾಲೂಕಿನ ಅರಸಿಕೇರಿ ಗ್ರಾಮದಲ್ಲಿ ಜ. 5ರಿಂದ ಮೂರು ದಿನಗಳ ಕಾಲ ಜರುಗುವ ದಂಡಿ ದುರುಗಮ್ಮನ ಜಾತ್ರೆಯಲ್ಲಿ ಪ್ರಾಣಿ ಬಲಿ ಸಂಪೂರ್ಣ ನಿಷೇಧಿಸಲಾಗಿದೆ. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಇಲ್ಲಿಯ ಪೊಲೀಸ್ ವೃತ್ತ ನಿರೀಕ್ಷಕ ನಾಗರಾಜ ಎಂ. ಕಮ್ಮಾರ ತಿಳಿಸಿದ್ದಾರೆ.ಅವರು ತಾಲೂಕಿನ ಅರಸಿಕೇರಿ ಗ್ರಾಮದಲ್ಲಿ ಪೊಲೀಸ್ ಇಲಾಖೆ ಹಾಗೂ ಗ್ರಾಪಂ ಸಹಯೋಗದಲ್ಲಿ ನಡೆದ ಶಾಂತಿಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಪಂಚಾಯಿತಿ ವತಿಯಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು, ಜನದಟ್ಟಣೆಯಾಗಿರುವ ಬಸ್ ನಿಲ್ದಾಣ ಪಕ್ಕದಲ್ಲಿರುವ ಶೆಡ್ಗಳನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.ತುರ್ತು ಸೇವೆಗೆ 112ಕ್ಕೆ ಕರೆ ಮಾಡಿ ಎಂದ ಅವರು, ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗುವುದು. ಈ ವರ್ಷ ಬರಗಾಲ ಹಾಗೂ ಕೋವಿಡ್ ಇರುವುದರಿಂದ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಅವರು ತಿಳಿಸಿದರು.ಅಭಿವೃದ್ಧಿ ಅಧಿಕಾರಿ ಅಂಜಿನಪ್ಪ ಮಾತನಾಡಿ, ಜಾತ್ರೆಗೆ ಬರುವ ಭಕ್ತರಿಗೆ ಗ್ರಾಪಂ ವತಿಯಿಂದ ಚರಂಡಿ, ಸ್ವಚ್ಛತೆ, ನೀರಿನ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯ ಒದಗಿಸಲಾಗುವುದು. ಆರೋಗ್ಯ ಇಲಾಖೆಯಿಂದ ರಕ್ತದಾನ ಶಿಬಿರ ನಡೆಸಲಾಗುವುದು ಎಂದರು.ವಕೀಲ ಡಾ. ಸುರೇಶ ಮಾತನಾಡಿ, ಜಾತ್ರೆಗೆ ಬರುವ ಭಕ್ತರಿಗೆ ಶೌಚಾಲಯ ವ್ಯವಸ್ಥೆ ಇರುವುದಿಲ್ಲ. ಬಸ್ ನಿಲ್ದಾಣದಲ್ಲಿ ತಾತ್ಕಾಲಿಕವಾಗಿ ಶೌಚಾಲಯ ವ್ಯವಸ್ಥೆ ಮಾಡಿಸಿ ಎಂದು ತಿಳಿಸಿದರು.