ಕನ್ನಡಪ್ರಭ ವಾರ್ತೆ ಬೆಂಗಳೂರು
ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಯು.ಟಿ. ಖಾದರ್, ಮಕ್ಕಳಲ್ಲಿ ಆರೋಗ್ಯ ಕಾಪಾಡಲು ಅವರಿಗೆ ಉತ್ತಮ ಆಹಾರ ಕ್ರಮವನ್ನು ಬೆಳೆಸಬೇಕು. ಅದಕ್ಕಾಗಿ ಶಾಲೆ ಮತ್ತು ಕಾಲೇಜುಗಳಲ್ಲಿ ಹಾಗೂ ಸುತ್ತಲಿನ 50 ಮೀ. ವ್ಯಾಪ್ತಿಯಲ್ಲಿ ಕೊಬ್ಬು, ಸಕ್ಕರೆ, ಉಪ್ಪಿನಾಂಶ ಹೆಚ್ಚಿರುವ (ಎಚ್ಎಫ್ಎಸ್ಎಸ್) ಯಾವುದೇ ಆಹಾರ ಪದಾರ್ಥಗಳ ಮಾರಾಟ ನಿಷೇಧಿಸಲಾಗಿದೆ. ಶಾಲೆ ಮತ್ತು ಕಾಲೇಜು ಕ್ಯಾಂಟೀನ್ಗಳಲ್ಲೂ ನಿಗದಿತ ಆಹಾರ ವಿತರಿಸದಂತೆ ಸೂಚಿಸಲಾಗುವುದು ಎಂದರು.
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಜುಲೈ ತಿಂಗಳಲ್ಲಿ ರಾಜ್ಯದ 134ಕ್ಕೂ ಹೆಚ್ಚಿನ ಶಾಲೆ-ಕಾಲೇಜು ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಿದೆ. ಈ ವೇಳೆ ಶಾಲೆ-ಕಾಲೇಜು ಕ್ಯಾಂಟೀನ್ಗಳಲ್ಲಿಯೇ ಜಂಕ್ ಫುಡ್ ಮಾರಾಟ ಮಾಡುವುದು ಕಂಡು ಬಂದಿದೆ. ಬಿಳಿ ಬ್ರೆಡ್, ಪಾಸ್ತಾ, ಸಂಸ್ಕರಿಸಿದ ಕಾರ್ಬೋಹೈಡ್ರೇಟ್ ಆಹಾರ ಪದಾರ್ಥಗಳನ್ನು ನೀಡುತ್ತಿರುವುದು ಪತ್ತೆಯಾಗಿದೆ ಎಂದರು.ಗುಣಮಟ್ಟ, ಸ್ವಚ್ಛತೆ, ನೈರ್ಮಲ್ಯ, ಲೇಬಲಿಂಗ್ ಸೇರಿ ಆರೋಗ್ಯದ ಮೇಲೆ ಪರಿಣಾಮ ಬೀರಬಹುದಾದ ಆಹಾರ ಪದಾರ್ಥಗಳು ತಪಾಸಣೆ ವೇಳೆ ಕಂಡು ಬಂದಿದೆ. ಅದರಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ 53 ಆಹಾರದ ಮಾದರಿಯನ್ನು ಸಂಗ್ರಹಿಸಿ, ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ಆಹಾರ ಸುರಕ್ಷತೆ ಗುಣಮಟ್ಟ ಕಾಯ್ದೆ ಅಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹೆಚ್ಚಾಗಿ ಹರಡುತ್ತದೆ. ಸುರಕ್ಷತೆ ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಎಲ್ಲರೂ ತೆಗೆದುಕೊಳ್ಳಬೇಕು. ಅದಕ್ಕಾಗಿ ಎಲ್ಲ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಕುಡಿಯಲು ತಣ್ಣಗಿನ ನೀರಿನ ಬದಲು ಬಿಸಿ ನೀರು ನೀಡುವುದು ಕಡ್ಡಾಯ ಮಾಡಬೇಕೆಂದು ಚಿಂತಿಸಲಾಗಿದೆ. ಈ ಕುರಿತು ಸಂಬಂಧಪಟ್ಟವರೊಂದಿಗೆ ಚರ್ಚೆ ನಡೆಸಿ ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಖಾದರ್ ತಿಳಿಸಿದರು.