ಹುಬ್ಬಳ್ಳಿ:
ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಸೇರಿದ ನೂರಾರು ರೈತರು ನೀರಾವರಿ ಯೋಜನೆಗಳ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ ಮಾತನಾಡಿ, ಕಾವೇರಿ ವಿಚಾರ ಮಾತ್ರ ಕರ್ನಾಟಕದ ಸಮಸ್ಯೆಯಲ್ಲ. ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ, ಮೈಸೂರು, ಕರಾವಳಿ ಸೇರಿದಂತೆ ಇಡೀ ರಾಜ್ಯದ ಬೇಡಿಕೆಗಳ ಬಗ್ಗೆ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕಾಗಿದೆ. ಕರ್ನಾಟಕದ ಯಾವುದೇ ಭಾಗವನ್ನು ಪ್ರತ್ಯೇಕವಾಗಿ ನೋಡದೆ, ಸಮಗ್ರ ಕರ್ನಾಟಕದ ಹಿತದೃಷ್ಟಿಯಿಂದ ಹೋರಾಟ ನಡೆಸಬೇಕು ಎಂದರು.ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಸಲಾಗಿದೆ. ರಸ್ತೆ ತಡೆ, ಪ್ರತಿಭಟನೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ಮಾಡಿದ್ದರೂ ಸಮಸ್ಯೆ ಬಗೆಹರಿದಿಲ್ಲ. ಇದೀಗ ಮತ್ತೆ ಈ ಯೋಜನೆಗಳ ಅನುಷ್ಠಾನಕ್ಕೆ ಒತ್ತಾಯಿಸಿ ಧ್ವನಿ ಎತ್ತುವ ಅಗತ್ಯವಿದೆ ಎಂದು ಹೇಳಿದರು.
ಈ ವೇಳೆ ರೈತ ಮುಖಂಡರಾದ ಲೋಕನಾಥ ಹೆಬಸೂರ, ಹನುಮಂತಪ್ಪ ದಿವಗಿಹಳ್ಳಿ, ಬೀರಪ್ಪ ದೇಸನೂರ, ರುದ್ರಗೌಡ ಪಾಟೀಲ, ಮಹಾಂತೇಶ ಗೌರಿ, ಈರಣ್ಣ ಅಂಗಡಿ, ಫಕ್ಕೀರಗೌಡ ವೆಂಕನಗೌಡ, ಆರ್.ಎಂ. ನಾಯ್ಕರ್, ಯಲ್ಲಪ್ಪ ಡಿ, ಭರಮಪ್ಪ ಕಾತರಕಿ ಸೇರಿದಂತೆ ನೂರಾರು ರೈತರಿದ್ದರು.
ರಾಜ್ಯದ ಎಲ್ಲ ಪ್ರಮುಖ ನೀರಾವರಿ ಹಾಗೂ ಅಭಿವೃದ್ಧಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆ. 13ರಂದು ನಡೆಸುತ್ತಿರುವ ಕರ್ನಾಟಕ ಬಂದ್ ಯಶಸ್ವಿಯಾಗಿ ನಡೆಯಲಿದೆ ಎಂದು ವಾಟಾಳ್ ನಾಗರಾಜ ಸ್ಪಷ್ಟಪಡಿಸಿದರು. ಇದಕ್ಕೆ ರಾಜ್ಯದ ಎಲ್ಲ ಕನ್ನಡಪರ ಸಂಘಟನೆಗಳು, ರೈತ ಮುಖಂಡರು, ಆಟೋ ಚಾಲಕರು, ಹೋಟೆಲ್ ಉದ್ಯಮಿಗಳು, ಕ್ಯಾಬ್ ಚಾಲಕರು ಸೇರಿದಂತೆ ವಿವಿಧ ವರ್ಗದ ಜನರು ಬೆಂಬಲ ನೀಡಬೇಕು. ಬಂದ್ ಕುರಿತು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಬೆಳಗಾವಿಯಿಂದ ಚಾಮರಾಜ ನಗರದ ವರೆಗೆ, ಮಂಗಳೂರಿನಿಂದ ಕೋಲಾರದ ವರೆಗೆ ಸಾವಿರಾರು ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿವೆ. ಯಾರಾದರೂ ವೈಯಕ್ತಿಕವಾಗಿ ಬೆಂಬಲ ನೀಡದಿದ್ದರೂ ಅದನ್ನು ದೊಡ್ಡ ವಿಚಾರವನ್ನಾಗಿ ಮಾಡಬಾರದು. ಬಂದ್ ಸಂದರ್ಭದಲ್ಲಿ ರಾಜ್ಯದ ಬಹುತೇಕ ಅಂಗಡಿ-ಮುಂಗಟ್ಟುಗಳು ಮುಚ್ಚುವ ಮೂಲಕ ಜನರ ಒಗ್ಗಟ್ಟು ಪ್ರದರ್ಶಿಸಬೇಕು. ಬಂದ್ ಯಶಸ್ವಿಯಾಗುವ ವರೆಗೆ ಎಲ್ಲರೂ ಬೆಂಬಲವಾಗಿ ನಿಲ್ಲಬೇಕು ಎಂದು ಮನವಿ ಮಾಡಿದರು.
ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆ ವೇಳೆ ಬಂದ್ ಕರೆ ನೀಡಿರುವ ಕುರಿತು ಪರ-ವಿರೋಧದ ಭಿನ್ನಾಭಿಪ್ರಾಯ ಕೇಳಿ ಬಂದಿತು. ವಾಟಾಳ್ ನಾಗರಾಜ್ ಅವರು ಬಂದ್ಗೆ ಕರೆ ನೀಡಿ ಪ್ರತಿಭಟನೆ ನಡೆಸುತ್ತಿದ್ದಾಗ ಉತ್ತರ ಕರ್ನಾಟಕ ಆಟೋ ಚಾಲಕರ ಸಂಘದ ಸದಸ್ಯರು ಬಂದ್ಗೆ ತಮ್ಮ ವಿರೋಧವಿದೆ ಎಂದು ಘೋಷಣೆ ಕೂಗಿದರು. ಪರಿಸ್ಥಿತಿ ನಿಯಂತ್ರಿಸಲು ಶೇಖರಯ್ಯ ಮಠಪತಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.