ನೀರಾವರಿ ಯೋಜನೆ ಸಾಕಾರಕ್ಕಾಗಿ ಬಂದ್‌!

KannadaprabhaNewsNetwork |  
Published : Aug 12, 2026, 02:30 AM IST
ನೀರಾವರಿ ಯೋಜನೆಗಳ ಜಾರಿಗೆ ಸರ್ಕಾರ ಕ್ರಮ ಕೈಗೊಳ್ಳುವುದು, ಆ. 13ರ ಕರ್ನಾಟಕ ಬಂದ್‌ಗೆ ಬೆಂಬಲಿಸಲು ಒತ್ತಾಯಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಹುಬ್ಬಳ್ಳಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ನೀರಾವರಿ ಯೋಜನೆ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆ.13ರಂದು ಕನ್ನಡ ಒಕ್ಕೂಟ-ಕರ್ನಾಟಕ ರಾಜ್ಯ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ ಬೆಂಬಲಿಸುವಂತೆ ಒತ್ತಾಯಿಸಿ ಮಂಗಳವಾರ ನಗರದಲ್ಲಿ ವಾಟಾಳ್‌ ನಾಗರಾಜ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಹುಬ್ಬಳ್ಳಿ:

ಮಹದಾಯಿ, ಕಳಸಾ-ಬಂಡೂರಿ, ಮೇಕೆದಾಟು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆ.13ರಂದು ಕನ್ನಡ ಒಕ್ಕೂಟ-ಕರ್ನಾಟಕ ರಾಜ್ಯ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ ಬೆಂಬಲಿಸುವಂತೆ ಒತ್ತಾಯಿಸಿ ಮಂಗಳವಾರ ನಗರದಲ್ಲಿ ವಾಟಾಳ್‌ ನಾಗರಾಜ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಸೇರಿದ ನೂರಾರು ರೈತರು ನೀರಾವರಿ ಯೋಜನೆಗಳ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ ಮಾತನಾಡಿ, ಕಾವೇರಿ ವಿಚಾರ ಮಾತ್ರ ಕರ್ನಾಟಕದ ಸಮಸ್ಯೆಯಲ್ಲ. ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ, ಮೈಸೂರು, ಕರಾವಳಿ ಸೇರಿದಂತೆ ಇಡೀ ರಾಜ್ಯದ ಬೇಡಿಕೆಗಳ ಬಗ್ಗೆ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕಾಗಿದೆ. ಕರ್ನಾಟಕದ ಯಾವುದೇ ಭಾಗವನ್ನು ಪ್ರತ್ಯೇಕವಾಗಿ ನೋಡದೆ, ಸಮಗ್ರ ಕರ್ನಾಟಕದ ಹಿತದೃಷ್ಟಿಯಿಂದ ಹೋರಾಟ ನಡೆಸಬೇಕು ಎಂದರು.

ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಸಲಾಗಿದೆ. ರಸ್ತೆ ತಡೆ, ಪ್ರತಿಭಟನೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ಮಾಡಿದ್ದರೂ ಸಮಸ್ಯೆ ಬಗೆಹರಿದಿಲ್ಲ. ಇದೀಗ ಮತ್ತೆ ಈ ಯೋಜನೆಗಳ ಅನುಷ್ಠಾನಕ್ಕೆ ಒತ್ತಾಯಿಸಿ ಧ್ವನಿ ಎತ್ತುವ ಅಗತ್ಯವಿದೆ ಎಂದು ಹೇಳಿದರು.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಅಲ್ಲಿನ ಪಾಲಿಕೆ ಕೈಗೊಳ್ಳಬೇಕು. ಗಡಿನಾಡು ಬೆಳಗಾವಿಯ ಸಮಗ್ರ ಅಭಿವೃದ್ಧಿಗೂ ಸರ್ಕಾರ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ರೈತ ಮುಖಂಡರಾದ ಲೋಕನಾಥ ಹೆಬಸೂರ, ಹನುಮಂತಪ್ಪ ದಿವಗಿಹಳ್ಳಿ, ಬೀರಪ್ಪ ದೇಸನೂರ, ರುದ್ರಗೌಡ ಪಾಟೀಲ, ಮಹಾಂತೇಶ ಗೌರಿ, ಈರಣ್ಣ ಅಂಗಡಿ, ಫಕ್ಕೀರಗೌಡ ವೆಂಕನಗೌಡ, ಆರ್.ಎಂ. ನಾಯ್ಕರ್, ಯಲ್ಲಪ್ಪ ಡಿ, ಭರಮಪ್ಪ ಕಾತರಕಿ ಸೇರಿದಂತೆ ನೂರಾರು ರೈತರಿದ್ದರು.

ನಾಳೆ ಕರ್ನಾಟಕ ಬಂದ್‌ ನಿಶ್ಚಿತ:

ರಾಜ್ಯದ ಎಲ್ಲ ಪ್ರಮುಖ ನೀರಾವರಿ ಹಾಗೂ ಅಭಿವೃದ್ಧಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆ. 13ರಂದು ನಡೆಸುತ್ತಿರುವ ಕರ್ನಾಟಕ ಬಂದ್ ಯಶಸ್ವಿಯಾಗಿ ನಡೆಯಲಿದೆ ಎಂದು ವಾಟಾಳ್‌ ನಾಗರಾಜ ಸ್ಪಷ್ಟಪಡಿಸಿದರು. ಇದಕ್ಕೆ ರಾಜ್ಯದ ಎಲ್ಲ ಕನ್ನಡಪರ ಸಂಘಟನೆಗಳು, ರೈತ ಮುಖಂಡರು, ಆಟೋ ಚಾಲಕರು, ಹೋಟೆಲ್ ಉದ್ಯಮಿಗಳು, ಕ್ಯಾಬ್ ಚಾಲಕರು ಸೇರಿದಂತೆ ವಿವಿಧ ವರ್ಗದ ಜನರು ಬೆಂಬಲ ನೀಡಬೇಕು. ಬಂದ್ ಕುರಿತು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಬೆಳಗಾವಿಯಿಂದ ಚಾಮರಾಜ ನಗರದ ವರೆಗೆ, ಮಂಗಳೂರಿನಿಂದ ಕೋಲಾರದ ವರೆಗೆ ಸಾವಿರಾರು ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ. ಯಾರಾದರೂ ವೈಯಕ್ತಿಕವಾಗಿ ಬೆಂಬಲ ನೀಡದಿದ್ದರೂ ಅದನ್ನು ದೊಡ್ಡ ವಿಚಾರವನ್ನಾಗಿ ಮಾಡಬಾರದು. ಬಂದ್ ಸಂದರ್ಭದಲ್ಲಿ ರಾಜ್ಯದ ಬಹುತೇಕ ಅಂಗಡಿ-ಮುಂಗಟ್ಟುಗಳು ಮುಚ್ಚುವ ಮೂಲಕ ಜನರ ಒಗ್ಗಟ್ಟು ಪ್ರದರ್ಶಿಸಬೇಕು. ಬಂದ್ ಯಶಸ್ವಿಯಾಗುವ ವರೆಗೆ ಎಲ್ಲರೂ ಬೆಂಬಲವಾಗಿ ನಿಲ್ಲಬೇಕು ಎಂದು ಮನವಿ ಮಾಡಿದರು.

ಬಂದ್‌ಗೆ ವಿರೋಧ:

ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆ ವೇಳೆ ಬಂದ್‌ ಕರೆ ನೀಡಿರುವ ಕುರಿತು ಪರ-ವಿರೋಧದ ಭಿನ್ನಾಭಿಪ್ರಾಯ ಕೇಳಿ ಬಂದಿತು. ವಾಟಾಳ್‌ ನಾಗರಾಜ್ ಅವರು ಬಂದ್‌ಗೆ ಕರೆ ನೀಡಿ ಪ್ರತಿಭಟನೆ ನಡೆಸುತ್ತಿದ್ದಾಗ ಉತ್ತರ ಕರ್ನಾಟಕ ಆಟೋ ಚಾಲಕರ ಸಂಘದ ಸದಸ್ಯರು ಬಂದ್‌ಗೆ ತಮ್ಮ ವಿರೋಧವಿದೆ ಎಂದು ಘೋಷಣೆ ಕೂಗಿದರು. ಪರಿಸ್ಥಿತಿ ನಿಯಂತ್ರಿಸಲು ಶೇಖರಯ್ಯ ಮಠಪತಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಲುವೆಗಳಿಗೆ 90 ದಿನಗಳ ಕಾಲ ನೀರು: ತಂಗಡಗಿ
ನಾಗೇಂದ್ರ ಯಾಕೆ ರಾಜೀನಾಮೆ ಕೊಡಬೇಕು: ತಂಗಡಗಿ